ನವದೆಹಲಿ: ನವ ಭಾರತ ನಿರ್ಮಾಣದಲ್ಲಿ ಹಸಿವು, ಮಾಲಿನ್ಯ ಹೆಚ್ಚಾಗಿ, ರೂಪಾಯಿ ಮೌಲ್ಯ ಕುಸಿಯುತ್ತಿದೆ. ಹೀಗಾಗಿ ನವ ಭಾರತ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಹೇಳಿದ್ದಾರೆ.
ದೆಹಲಿಯಲ್ಲಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಎಐಸಿಸಿ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಅಧಿಕೃತವಾಗಿ ಅಧಿಕಾರ ಸ್ವೀಕಾರ ಮಾಡಿದರು.
ಬಳಿಕ ಮಾತನಾಡಿದ ಅವರು ಬಿಜೆಪಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ನವ ಭಾರತ ನಿರ್ಮಾಣಕ್ಕೆ ಕಾಂಗ್ರೆಸ್ ಮುಕ್ತ ಭಾರತ ಬೇಕು ಎಂದು ಹೇಳುತ್ತಿದ್ದಾರೆ. ನವ ಭಾರತ ನಿರ್ಮಾಣಕ್ಕೆ ನಾವು ಅವಕಾಶ ನೀಡುವುದಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ ಮುಕ್ತ ಭಾರತ ಬೇಕೆನ್ನುತ್ತಿದ್ದಾರೆಂದು ಹೇಳಿದರು.
ನವ ಭಾರತ ನಿರ್ಮಾಣದಲ್ಲಿ ಹಸಿವು ಹಾಗೂ ಮಾಲಿನ್ಯ ಹೆಚ್ಚಾಗುತ್ತಿದೆ. ರುಪಾಯಿ ಮೌಲ್ಯ ಕುಸಿಯುತ್ತಿದೆ. ಹೀಗಾಗಿ ಆ ನವ ಭಾರತ ನಿರ್ಮಾಣಕ್ಕೆ ನಾವು ಅವಕಾಶ ನೀಡುವುದಿಲ್ಲ. ಇದರ ವಿರುದ್ಧ ನಮ್ಮ ಹೋರಾಟವನ್ನು ಮುಂದುವರೆಸುತ್ತೇವೆಂದು ತಿಳಿಸಿದ್ದಾರೆ.
ಅಧಿಕಾರ ನಡೆಸಬೇಕಿರುವ ಸರ್ಕಾರ ನಿದ್ರೆ ಮಾಡುತ್ತಿದ್ದು, ಸಿಬಿಐ, ಇಡಿ ಮತ್ತು ಐಟಿ ಮಾತ್ರ ದಿನದ 24 ಗಂಟೆಗಳ ಕಾಲ ಕೆಲಸ ಮಾಡುತ್ತಿದೆ. ನವ ಭಾರತದಲ್ಲಿ ಗೋಡ್ಸೆಯನ್ನು ದೇಶ ಭಕ್ತ ಎಂದು ಕರೆಯಲಾಗುತ್ತದೆ. ಮಹಾತ್ಮ ಗಾಂಧೀಜಿಯನ್ನು ದೇಶವಿರೋಧಿ ಎಂದು ಕರೆಯಲಾಗುತ್ತದೆ. ಆರ್'ಎಸ್ಎಸ್ ಸಂವಿಧಾನವನ್ನು ದೇಶದಲ್ಲಿ ಜಾರಿಗೆ ತರಲು ಅವರು ಬಯಸುತ್ತಿದ್ದಾರೆಂದು ಕಿಡಿಕಾರಿದರು.
Advertisement