ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್, ಕುಮಾರಸ್ವಾಮಿ ಭೇಟಿ, ರಾಷ್ಟ್ರ ರಾಜಕಾರಣ ಬಗ್ಗೆ ಸಮಾಲೋಚನೆ 

ಜನತಾದಳ ಜಾತ್ಯತೀತ (ಜೆಡಿಎಸ್) ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಇಂದು ಹೈದರಾಬಾದ್‌ನಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ (ಕೆಸಿಆರ್) ಅವರನ್ನು ಭೇಟಿಯಾಗಿ ಕುತೂಹಲ ಮೂಡಿಸಿದರು. 
ಕುಮಾರಸ್ವಾಮಿ, ಕೆಸಿಆರ್
ಕುಮಾರಸ್ವಾಮಿ, ಕೆಸಿಆರ್
Updated on

ಹೈದರಾಬಾದ್:  2024 ರ ಸಾರ್ವತ್ರಿಕ ಚುನಾವಣೆಗೆ ಪೂರ್ವಭಾವಿಯಾಗಿ ಹೊಸ ರಾಜಕೀಯ ಸಮೀಕರಣಗಳು ಹೊರಹೊಮ್ಮುತ್ತಿದ್ದಂತೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಜನತಾದಳ ಜಾತ್ಯತೀತ (ಜೆಡಿಎಸ್) ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಇಂದು ಹೈದರಾಬಾದ್‌ನಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ (ಕೆಸಿಆರ್) ಅವರನ್ನು ಭೇಟಿಯಾಗಿ ಕುತೂಹಲ ಮೂಡಿಸಿದರು. 

ಭೇಟಿ ವೇಳೆ ಪ್ರಸ್ತುತ ದೇಶದಲ್ಲಿನ ರಾಜಕೀಯ ಪರಿಸ್ಥಿತಿ ಮತ್ತು ಕೆಸಿಆರ್ ರಾಷ್ಟ್ರೀಯ ಮಟ್ಟದ ಪಕ್ಷವನ್ನು ಪ್ರಾರಂಭಿಸುವ ಯೋಜನೆ ಕುರಿತು ಚರ್ಚಿಸಲಾಗಿದೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ತೆಲಂಗಾಣ ಅಭಿವೃದ್ಧಿ, ರಾಷ್ಟ್ರೀಯ ರಾಜಕೀಯದಲ್ಲಿ ಪ್ರಾದೇಶಿಕ ಪಕ್ಷಗಳ ಪಾತ್ರ, ಪ್ರತಿಪಕ್ಷಗಳ ಒಗ್ಗಟ್ಟು ಗಟ್ಟಿಗೊಳಿಸುವಲ್ಲಿ ಕೆಸಿಆರ್ ಅವರು ವಹಿಸುತ್ತಿರುವ ಪ್ರಮುಖ ಪಾತ್ರ ಮತ್ತು ಇತರ ರಾಜಕೀಯ ಪಕ್ಷಗಳ ಪಾತ್ರದ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ.

ತೆಲಂಗಾಣ ರಾಷ್ಟ್ರೀಯ ಸಮಿತಿ (ಟಿಆರ್‌ಎಸ್) ಮುಖ್ಯಸ್ಥ ಕೆಸಿಆರ್ ಈ ಹಿಂದೆ ಬೆಂಗಳೂರಿಗೆ ತೆರಳಿ ಕುಮಾರಸ್ವಾಮಿ ಮತ್ತು ಅವರ ತಂದೆ , ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರನ್ನು ಭೇಟಿ ಮಾಡಿದ್ದರು. ಬಿಜೆಪಿ ವಿರುದ್ಧ ಒಗ್ಗಟ್ಟಿನ ಹೋರಾಟ ನಡೆಸಲು ವಿರೋಧ ಪಕ್ಷಗಳು ಸಭೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಉಭಯ ನಾಯಕರ ನಡುವೆ ಸಭೆ ನಡೆದಿದೆ.

ಅಕ್ಟೋಬರ್ 5 ರಂದು ಆಚರಿಸಲಾಗುವ ದಸರಾ ಆಸುಪಾಸಿನಲ್ಲಿ ಹೊಸ ಪಕ್ಷವನ್ನು ಪ್ರಾರಂಭಿಸುವ ನಿರೀಕ್ಷೆಯಿದೆ. ಕಳೆದ ತಿಂಗಳ ಕೊನೆಯಲ್ಲಿ, ಕೆಸಿಆರ್ ಅವರು ಜನತಾ ದಳ ಯುನೈಟೆಡ್ (ಜೆಡಿಯು) ನಾಯಕ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಪಾಟ್ನಾದಲ್ಲಿ ಭೇಟಿ ಮಾಡಿ ಬಿಜೆಪಿ ವಿರುದ್ಧ ವಿಪಕ್ಷಗಳ ಒಗ್ಗಟ್ಟಿನ ಕುರಿತು ಮಾತುಕತೆ ನಡೆಸಿದ್ದರು.

ನಿತೀಶ್ ಕುಮಾರ್ ಅವರೊಂದಿಗೆ ಪಾಟ್ನಾದಲ್ಲಿ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ತೆಲಂಗಾಣ ಮುಖ್ಯಮಂತ್ರಿ, ನಾವು ದೇಶದ ಎಲ್ಲಾ ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ಪ್ರಯತ್ನಿಸುತ್ತೇವೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com