ನಾಲ್ಕು ಜನರನ್ನು ಬಲಿ ಪಡೆದ ಲಖನೌ ಅಗ್ನಿ ದುರಂತ: 15 ಅಧಿಕಾರಿಗಳನ್ನು ಅಮಾನತುಗೊಳಿಸಿದ ಯೋಗಿ ಆದಿತ್ಯನಾಥ್
ಲಖನೌ: ನಾಲ್ವರ ಸಾವಿಗೆ ಕಾರಣವಾದ ಲಖನೌನ ಹೋಟೆಲ್ನಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ವಹಿಸಿದ್ದಕ್ಕಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಆದೇಶದ ಮೇರೆಗೆ ಐದು ಸರ್ಕಾರಿ ಇಲಾಖೆಗಳ ಒಟ್ಟು 15 ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.
ನಿರ್ಲಕ್ಷ್ಯ ಮತ್ತು ಅಕ್ರಮಗಳಿಗಾಗಿ ನಾಲ್ವರು ನಿವೃತ್ತ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು. ಲಖನೌ ಪೊಲೀಸ್ ಕಮಿಷನರ್ ಎಸ್.ಬಿ. ಶಿರಾಡ್ಕರ್ ಮತ್ತು ಲಖನೌ ವಿಭಾಗದ ಕಮಿಷನರ್ ರೋಷನ್ ಜೇಕಬ್ ಅವರನ್ನೊಳಗೊಂಡ ದ್ವಿಸದಸ್ಯ ತನಿಖಾ ಸಮಿತಿಯು ತನ್ನ ವರದಿಯನ್ನು ಸಲ್ಲಿಸಿದ ನಂತರ ಈ ಕ್ರಮವನ್ನು ಕೈಗೊಳ್ಳಲಾಗಿದೆ.
ಈ ಕುರಿತು ಮಾಹಿತಿ ನೀಡಿದ ರಾಜ್ಯ ಸರ್ಕಾರದ ವಕ್ತಾರರು, ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ಲಖನೌನ ಪೊಲೀಸ್ ಕಮಿಷನರ್ ಮತ್ತು ವಿಭಾಗೀಯ ಆಯುಕ್ತರು ಸಲ್ಲಿಸಿದ ತನಿಖಾ ವರದಿಯನ್ನು ಸ್ವೀಕರಿಸಿದ ನಂತರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈ ಸೂಚನೆಗಳನ್ನು ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಲಖನೌ ಹೋಟೆಲ್ ಲೆವಾನಾದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಪ್ರಾಥಮಿಕವಾಗಿ ಅನಿಯಮಿತ ಮತ್ತು ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಉತ್ತರ ಪ್ರದೇಶ ಮುಖ್ಯಮಂತ್ರಿ ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ.
ಮುಖ್ಯಮಂತ್ರಿಗಳ ಸೂಚನೆಯಂತೆ ಗೃಹ ಇಲಾಖೆ, ಇಂಧನ ಇಲಾಖೆ, ನೇಮಕಾತಿ ಇಲಾಖೆ, ಲಖನೌ ಅಭಿವೃದ್ಧಿ ಪ್ರಾಧಿಕಾರ (ಎಲ್ಡಿಎ) ಮತ್ತು ಅಬಕಾರಿ ಇಲಾಖೆ ಅಧಿಕಾರಿಗಳನ್ನು ಅಮಾನತುಗೊಳಿಸಿ ಅವರ ವಿರುದ್ಧ ಇಲಾಖಾ ಕ್ರಮ ಜರುಗಿಸಲಾಗುವುದು. ಸಂಬಂಧಪಟ್ಟ ಇಲಾಖೆಗಳ ಚಾಲ್ತಿಯಲ್ಲಿರುವ ನಿಯಮಗಳ ಹಿನ್ನೆಲೆಯಲ್ಲಿ ನಿವೃತ್ತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ವಕ್ತಾರರು ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ