ಮಹಾರಾಷ್ಟ್ರದಲ್ಲಿ ಜವರಾಯನ ಅಟ್ಟಹಾಸ: ಕಂದಕಕ್ಕೆ ಉರುಳಿ ಬಿದ್ದ ಬಸ್, 12 ಮಂದಿ ದುರ್ಮರಣ
ರಾಯಗಢ (ಮಹಾರಾಷ್ಟ್ರ): ಮಹಾರಾಷ್ಟ್ರ ರಾಜ್ಯದಲ್ಲಿ ಜವರಾಯ ಅಟ್ಟಹಾಸ ಮೆರದಿದ್ದು, ಖಾಸಗಿ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 12 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ.
ರಾಯಗಢದ ಪುಣೆ- ಮುಂಬೈ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ 4 ಗಂಟೆ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ.
40 ಜನರಿದ್ದ ಖಾಸಗಿ ಬಸ್ ಪುಣೆಯಿಂದ ಮುಂಬೈ ಕಡೆಗೆ ಹೋಗುತ್ತಿತ್ತು. ಬೆಳಗಿನ ಜಾವ 4 ಗಂಟೆ ಸುಮಾರಿಗೆ ಪ್ರಯಾಣಿಕರು ನಿದ್ರೆಯಲ್ಲಿದ್ದಾಗ ಪುಣೆ ಮುಂಬೈ ಹೆದ್ದಾರಿಯ ಖೋಪೋಲಿಯಲ್ಲಿ ವೇಗವಾಗಿ ಸಾಗುತ್ತಿದ್ದಾಗ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದಿದೆ.
ಇದರಿಂದ ಬಸ್ ನುಜ್ಜುಗುಜ್ಜಾಗಿದ್ದು, ಸ್ಥಳದಲ್ಲಿ 12 ಮಂದಿ ಅಸುನೀಗಿದ್ದಾರೆ. 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಲಾಗುತ್ತಿದೆ.
ಮಾಹಿತಿ ತಿಳಿದ ತಕ್ಷಣ ಘಟನಾ ಸ್ಥಳಕ್ಕೆ ಬಂದ ರಕ್ಷಣಾ ಪಡೆ ಸಿಬ್ಬಂದಿ ಬಸ್ನಲ್ಲಿದ್ದ ಜನರನ್ನು ರಕ್ಷಣೆ ಮಾಡಿದರು. ಬಸ್ ಬಿದ್ದ ರಭಸದ ಆಧಾರದ ಮೇಲೆ ಅತಿಯಾದ ವೇಗವೇ ಇದಕ್ಕೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ.

