ಸಂಸತ್ ಚಳಿಗಾಲ ಅಧಿವೇಶನ: ಚುನಾವಣೆ ಸೋಲಿನ ಸಿಟ್ಟನ್ನು ಸಂಸತ್ತಿನಲ್ಲಿ ತೋರಿಸದಿರಿ, ವಿಪಕ್ಷಗಳಿಗೆ ಪ್ರಧಾನಿ ಮೋದಿ ಸಲಹೆ

ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಕುರಿತು ಸಿಟ್ಟು ಮಾಡಿಕೊಳ್ಳದೆ, ಸಂಸತ್ತಿನಲ್ಲಿ ಚರ್ಚೆ ನಡೆಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿರೋಧ ಪಕ್ಷಗಳಿಗೆ ಸೋಮವಾರ ಸಲಹೆ ನೀಡಿದ್ದಾರೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ನವದೆಹಲಿ: ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಕುರಿತು ಸಿಟ್ಟು ಮಾಡಿಕೊಳ್ಳದೆ, ಸಂಸತ್ತಿನಲ್ಲಿ ಚರ್ಚೆ ನಡೆಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿರೋಧ ಪಕ್ಷಗಳಿಗೆ ಸೋಮವಾರ ಸಲಹೆ ನೀಡಿದ್ದಾರೆ.

ಸಂಸತ್ತಿನ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕರು ಸೋಲಿನಿಂದ ಪಾಠ ಕಲಿಯಬೇಕು. ನಕಾರಾತ್ಮಕತೆ ಚಿಂತನೆಗಳನ್ನು ನಿಲ್ಲಿಸಬೇಕು ಎಂದು ಹೇಳಿದರು.

ಇತ್ತೀಚಿನ ಚುನಾವಣಾ ಫಲಿತಾಂಶಗಳ ಆಧಾರದಲ್ಲಿ ಮಾತನಾಡುವುದಾದರೆ, ವಿರೋಧ ಪಕ್ಷದಲ್ಲಿ ಕುಳಿತಿರುವ ನಾಯಕರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಈ ಅಧಿವೇಶನದಲ್ಲಿ ಸೋಲಿನ ಸಿಟ್ಟನ್ನು ಹೊರಹಾಕುವ ಬದಲು, ಸಕಾರಾತ್ಮಕತೆಯಿಂದ ಮುನ್ನಡೆಯಬೇಕು. ಸೋಲಿನಿಂದ ಪಾಠ ಕಲಿಯಬೇಕು. ಕಳೆದ 9 ವರ್ಷಗಳ ಸೋಲಿನಿಂದ ಇರುವ ಋಣಾತ್ಮಕ ಪ್ರವೃತ್ತಿಯನ್ನು ಬಿಟ್ಟುಬಿಡಬೇಕು. ಬಳಿಕ ದೇಶದ ಜನತೆ ಕೂಡ ಅವರ ಮೇಲಿರುವ ದೃಷ್ಟಿಕೋನವನ್ನು ಬದಲಾಯಿಸುತ್ತದೆ ಎಂದು ತಿಳಿಸಿದರು.

ನಾಲ್ಕು ರಾಜ್ಯಗಳ ಚುನಾವಣೆಯ ಫಲಿತಾಂಶಗಳು ದೇಶದ ಸಾಮಾನ್ಯ ಜನರ ಕಲ್ಯಾಣಕ್ಕಾಗಿ ಮತ್ತು ದೇಶದ ಉಜ್ವಲ ಭವಿಷ್ಯಕ್ಕಾಗಿ ಬದ್ಧರಾಗಿರುವವರಿಗೆ ಉತ್ತೇಜನ ನೀಡಿದೆ ಎಂದರು.

ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು, ಅಧಿವೇಶನದಲ್ಲಿ ಒಟ್ಟು 19 ಮಸೂದೆಗಳನ್ನು ಮಂಡಿಸಲು ನಿರ್ಧರಿಸಲಾಗಿದೆ. ಇವುಗಳಲ್ಲಿ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ, ಭಾರತೀಯ ಸಾಕ್ಷಿ ಅಧಿನಿಯಮ್, ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರು (ನೇಮಕಾತಿ, ಸೇವಾ ಷರತ್ತುಗಳು ಮತ್ತು ಅಧಿಕಾರದ ಅವಧಿ) ಮಸೂದೆ, ಕೇಂದ್ರೀಯ ವಿಶ್ವವಿದ್ಯಾಲಯಗಳ (ತಿದ್ದುಪಡಿ) ಮಸೂದೆ, ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ (ತಿದ್ದುಪಡಿ) ಮಸೂದೆ ಮತ್ತು ತೆರಿಗೆಗಳ ತಾತ್ಕಾಲಿಕ ಸಂಗ್ರಹ ಮಸೂದೆ 2023 ಸೇರಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com