ರಾಯ್ಪುರ: ಛತ್ತೀಸ್ಗಢ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿ ಒಂದು ವಾರದ ನಂತರ ಬಿಜೆಪಿ ಭಾನುವಾರ ನೂತನವಾಗಿ ಆಯ್ಕೆಯಾಗಿರುವ 54 ಶಾಸಕರ ಸಭೆ ಕರೆದಿದ್ದು, ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ.
ಸಭೆಯ ನಂತರ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಸಸ್ಪೆನ್ಸ್ಗೆ ತೆರೆ ಬೀಳುವ ಸಾಧ್ಯತೆ ಇದೆ.
ಕಳೆದ ತಿಂಗಳು ನಡೆದ ಛತ್ತೀಸ್ ಗಢ ವಿಧಾನಸಭಾ ಚುನಾವಣೆಗೂ ಮುನ್ನ ಕೇಸರಿ ಪಕ್ಷ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿರಲಿಲ್ಲ.
ಭಾನುವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು, ಕೇಂದ್ರ ಸಚಿವರಾದ ಅರ್ಜುನ್ ಮುಂಡಾ ಮತ್ತು ಸರ್ಬಾನಂದ ಸೋನೋವಾಲ್ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ದುಷ್ಯಂತ್ ಕುಮಾರ್ ಗೌತಮ್ ಅವರು ವೀಕ್ಷಕರಾಗಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಅರುಣ್ ಸಾವೊ ಶನಿವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಛತ್ತೀಸ್ಗಢ ಬಿಜೆಪಿ ಉಸ್ತುವಾರಿ ಓಂ ಮಾಥುರ್, ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ರಾಜ್ಯದ ಪಕ್ಷದ ಸಹ-ಪ್ರಭಾರಿ ನಿತಿನ್ ನಬಿನ್ ಸಹ ಸಭೆಯಲ್ಲಿ ಉಪಸ್ಥಿತರಿರುತ್ತಾರೆ ಎಂದು ಅವರು ಹೇಳಿದ್ದಾರೆ.
ರಾಜ್ಯದ 90 ಸ್ಥಾನಗಳಲ್ಲಿ ಬಿಜೆಪಿ 54 ಸ್ಥಾನಗಳನ್ನು ಗೆದ್ದಿದ್ದರೆ, 2018 ರಲ್ಲಿ 68 ಸ್ಥಾನಗಳನ್ನು ಗೆದ್ದಿದ್ದ ಕಾಂಗ್ರೆಸ್ ಈ ಬಾರಿ 35 ಸ್ಥಾನಗಳಿಗೆ ಕುಸಿದಿದೆ.
Advertisement