ಲೋಕಸಭೆಯಿಂದ ಮಹುವಾ ಮೊಯಿತ್ರಾ ಉಚ್ಛಾಟನೆ: ಸುಪ್ರೀಂ ಕೋರ್ಟ್‌ನಲ್ಲಿ ಇಂದು ಅರ್ಜಿ ವಿಚಾರಣೆ

ತಮ್ಮನ್ನು ಲೋಕಸಭೆಯಿಂದ ಉಚ್ಛಾಟನೆ ಮಾಡಿರುವ ಕೇಂದ್ರ ಸರ್ಕಾರದ ನಡೆಯನ್ನು ಪ್ರಶ್ನಿಸಿ 49 ವರ್ಷದ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರದಂದು (ಡಿ. 15) ವಿಚಾರಣೆ ನಡೆಸಲಿದೆ.
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
Updated on

ನವದೆಹಲಿ: ತಮ್ಮನ್ನು ಲೋಕಸಭೆಯಿಂದ ಉಚ್ಛಾಟನೆ ಮಾಡಿರುವ ಕೇಂದ್ರ ಸರ್ಕಾರದ ನಡೆಯನ್ನು ಪ್ರಶ್ನಿಸಿ 49 ವರ್ಷದ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರದಂದು (ಡಿ. 15) ವಿಚಾರಣೆ ನಡೆಸಲಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್ ವಿ ಎನ್ ಭಟ್ಟಿ ಅವರನ್ನೊಳಗೊಂಡ ಪೀಠವು ಈ ವಿಷಯವನ್ನು ಆಲಿಸಲಿದೆ ಎಂದು ಲೈವ್ ಲಾ ವರದಿ ಮಾಡಿದೆ.

ತನ್ನ ಸಂಸದೀಯ ಪೋರ್ಟಲ್‌ನ ಲಾಗಿನ್ ಐಡಿಗಳನ್ನು ಉದ್ಯಮಿ ದರ್ಶನ್ ಹಿರಾನಂದಾನಿ ಅವರೊಂದಿಗೆ ಹಂಚಿಕೊಳ್ಳುವ ಮೂಲಕ ರಾಷ್ಟ್ರೀಯ ಭದ್ರತೆಗೆ ಧಕ್ಕೆ ತಂದ ಆರೋಪದಲ್ಲಿ ಮಹುವಾ ಮೊಯಿತ್ರಾ ಅವರನ್ನು ತಪ್ಪಿತಸ್ಥರೆಂದು ಹೇಳಿರುವ ನೈತಿಕ ಸಮಿತಿಯ ವರದಿಯನ್ನು ಅಂಗೀಕರಿಸಿರುವ ಲೋಕಸಭೆಯು, ಮಹುವಾ ಅವರನ್ನು ಲೋಕಸಭಾ ಸದಸ್ಯ ಸ್ಥಾನದಿಂದ ಉಚ್ಛಾಟಿಸಿತ್ತು. 

ಅಲ್ಲದೆ, ಅದಾನಿ ಸಮೂಹದ ಕಂಪನಿಗಳ ಕುರಿತು ಸದನದಲ್ಲಿ ಪ್ರಶ್ನೆಗಳನ್ನು ಕೇಳಲು ಉದ್ಯಮಿಯೊಬ್ಬರಿಂದ ನಗದು ಮತ್ತು ದುಬಾರಿ ಉಡುಗೊರೆಗಳನ್ನು ಸ್ವೀಕರಿಸಿದ ಆರೋಪ ಕೂಡ ಮಹುವಾ ಅವರ ವಿರುದ್ಧ ಕೇಳಿಬಂದಿದೆ. 

ನೈತಿಕ ಸಮಿತಿಯ ವರದಿಯ ಮೇಲೆ ಸದನದಲ್ಲಿ ಬಿಸಿ ಚರ್ಚೆ ನಡೆಯಿತು. ಈ ಚರ್ಚೆಯ ವೇಳೆ ಮಹುವಾ ಅವರಿಗೆ ಮಾತನಾಡಲು ಅವಕಾಶ ನೀಡಲಿಲ್ಲ. ಮಹುವಾ ಅವರು ‘ಅನೈತಿಕವಾಗಿ ನಡೆದುಕೊಂಡಿದ್ದಾರೆ’ ಎಂಬ ಕಾರಣಕ್ಕೆ ಅವರನ್ನು ಉಚ್ಚಾಟಿಸಬೇಕು ಎಂಬ ಗೊತ್ತುವಳಿಯನ್ನು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಮಂಡಿಸಿದರು. ಸದನವು ಇದನ್ನು ಧ್ವನಿ ಮತದ ಮೂಲಕ ಅಂಗೀಕರಿಸಿತು. ಬಳಿಕ ಡಿಸೆಂಬರ್ 8ರಂದು ಮಹುವಾ ಅವರನ್ನು ಲೋಕಸಭೆಯಿಂದ ಉಚ್ಛಾಟಿಸಲಾಯಿತು. 

ಮೊಯಿತ್ರಾ ಅವರ ಹಿಂದಿನ ಸ್ನೇಹಿತ ವಕೀಲ ಜೈ ಅನಂತ್ ದೇಹದ್ರಾಯ್ ಅವರು ಸಲ್ಲಿಸಿದ ಅಫಿಡವಿಟ್ ಆಧಾರದ ಮೇಲೆ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ನೀಡಿದ ದೂರಿನ ಮೇರೆಗೆ ಈ ಬೆಳವಣಿಗೆ ನಡೆದಿದೆ.

ತನ್ನ ಉಚ್ಚಾಟನೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಮಹುವಾ, ಈ ಕ್ರಮವು 'ಕಾಂಗರೂ ನ್ಯಾಯಾಲಯವೊಂದು (ಕೆಲವು ವ್ಯಕ್ತಿಗಳ ಗುಂಪು ನಿಯಮಗಳನ್ನು ಗಾಳಿಗೆ ತೂರಿ, ಸಾಕ್ಷ್ಯವಿಲ್ಲದೆಯೇ ಮಾಡುವ ತೀರ್ಮಾನ)' ನೇಣು ಶಿಕ್ಷೆ ವಿಧಿಸಿದಂತಿದೆ'. ಪ್ರತಿಪಕ್ಷಗಳನ್ನು ಗುರಿಯಾಗಿಸಲು ಸಂಸದೀಯ ಸಮಿತಿಯನ್ನು ಸರ್ಕಾರವು ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದರು.

ಅಸ್ತಿತ್ವದಲ್ಲೇ ಇಲ್ಲದ ನೀತಿ ಸಂಹಿತೆಯೊಂದನ್ನು ಉಲ್ಲಂಘಿಸಿರುವುದಾಗಿ ಹೇಳಿ ತಮ್ಮನ್ನು ಉಚ್ಛಾಟಿಸಲಾಗಿದೆ. ತಾನು ನಗದು ಅಥವಾ ಉಡುಗೊರೆಗಳನ್ನು ಸ್ವೀಕರಿಸಿದ್ದೇನೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ತನ್ನ ಉಚ್ಚಾಟನೆಯ ವಿರುದ್ಧ ಹೋರಾಟವನ್ನು ಮುಂದುವರೆಸುವುದಾಗಿ ಎಂದು ಮಹುವಾ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com