ಮುಂಬೈ: ಗಾಳಿಪಟದ ಮಾಂಜಾ ದಾರಕ್ಕೆ ಸಿಲುಕಿ ಪೊಲೀಸ್ ಸಿಬ್ಬಂದಿಯೊಬ್ಬರು ಸಾವನ್ನಪ್ಪಿರುವ ಧಾರುಣ ಘಟನೆ ಮುಂಬೈನಲ್ಲಿ ನಡೆದಿದೆ.
ಮುಂಬೈನ ವೆಸ್ಟರ್ನ್ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸ್ ಸಿಬ್ಬಂದಿ ಬೈಕ್ ನಲ್ಲಿ ತೆರಳುತ್ತಿದ್ದಾಗ ಗಾಳಿಪಟದ ದಾರ ಕತ್ತಿಗೆ ಸಿಲುಕಿ ಕತ್ತು ಸೀಳಿ ಸಾವನ್ನಪ್ಪಿದ್ದಾರೆ.
37 ವರ್ಷದ ಮುಂಬೈ ಪೊಲೀಸ್ ಪೇದೆ ಸಮೀರ್ ಸುರೇಶ್ ಜಾಧವ್ ವೆಸ್ಟರ್ನ್ ಎಕ್ಸ್ಪ್ರೆಸ್ ಹೆದ್ದಾರಿಯ ವಕೋಲಾ ಸೇತುವೆಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದಾಗ ಗಾಳಿಪಟದ ದಾರ ಕತ್ತಿಗೆ ಸಿಲುಕಿದೆ. ಈ ವೇಳೆ ಗಾಳಿಪಟದ ಮಾಂಜಾದಾರ ಪೇದೆಯ ಕತ್ತು ಸೀಳಿದೆ. ಕೂಡಲೇ ಪೇದೆ ಕೆಳಗೆ ಬಿದ್ದಿದ್ದು, ಸ್ಥಳೀಯರು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಿಲಿಸಿದ್ದಾರೆ.
ದುರಾದೃಷ್ಟವಶಾತ್ ಪೇದೆ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದು, ಆಸ್ಪತ್ರೆಯಲ್ಲಿ ಪರೀಕ್ಷಿಸಿದ ವೈದ್ಯರು ಸಾವು ಖಚಿತಪಡಿಸಿದರು.
ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಖೇರ್ವಾಡಿ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಘಟನೆಯ ಬಗ್ಗೆ ಅವರ ಸಂಬಂಧಿಕರಿಗೆ ಮಾಹಿತಿ ನೀಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
Advertisement