ತಿರುಚಿ (ತಮಿಳುನಾಡು): ತಮಿಳುನಾಡಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಲಾರಿಯೊಂದು ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದಲ್ಲಿದ್ದ ಟೀ ಅಂಗಡಿಗೆ ನುಗ್ಗಿದ ಪರಿಣಾಮ ಮಹಿಳೆ ಸೇರಿ 5 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಿರುಚಿಯಲ್ಲಿ ಶನಿವಾರ ನಡೆದಿದೆ.
ಘಟನೆಯಲ್ಲಿ 19 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಪುದುಕೊಟ್ಟೈ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಿರುಚಿ-ರಾಮೇಶ್ವರಂ ಹೆದ್ದಾರಿಯಲ್ಲಿ ನಿಯಂತ್ರಣ ಕಳೆದುಕೊಂಡ ಲಾರಿ ಏಕಾಏಕಿ ಟೀ ಅಂಗಡಿಗೆ ನುಗ್ಗಿದೆ ಎಂದು ವರದಿಯಾಗಿದೆ.
ಅಪಘಾತದಲ್ಲಿ ಲಾರಿಯ ಮುಂಭಾಗ ಸಂಪೂರ್ಣವಾಗಿ ನಜ್ಜು-ಗುಜ್ಜಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಸಿಮೆಂಟ್ ತುಂಬಿದ್ದ ಲಾರಿ ಅರಿಯಲೂರಿನಿಂದ ಶಿವಗಂಗೈಗೆ ತೆರಳುತ್ತಿತ್ತು. ಈ ವೇಳೆ ಚಾಲಕ ನಿದ್ರೆಗೆ ಜಾರಿದ್ದು, ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಮೊದಲಿಗೆ ಎರಡು ವಾಹನಗಳಿಗೆ ಡಿಕ್ಕಿ ಹೊಡೆದು ನಂತರ, ತಿರುಚ್ಚಿ-ರಾಮೇಶ್ವರಂ ಹೆದ್ದಾರಿಯಲ್ಲಿ ಟೀ ಅಂಗಡಿಗೆ ನುಗ್ಗಿದೆ ಎಂದು ತಿಳಿದುಬಂದಿದೆ. ಲಾರಿ ಡಿಕ್ಕೆ ಹೊಡೆದ ವಾಹನಗಳಲ್ಲಿ ಓಶಕ್ತಿ ದೇವಸ್ಥಾನ ಹಾಗೂ ಅಯ್ಯಪ್ಪ ದೇವಸ್ಥಾನಕ್ಕೆ ಹೋಗುತ್ತಿದ್ದ ಭಕ್ತರಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement