ಮಾನಹಾನಿ ಪ್ರಕರಣದಲ್ಲಿನ ಶಿಕ್ಷೆಗೆ ತಡೆ ಕೋರಿ ಅರ್ಜಿ: ಸೂರತ್ ನ್ಯಾಯಾಲಯದ ಆದೇಶ ಎತ್ತಿ ಹಿಡಿದ ಗುಜರಾತ್ ಹೈಕೋರ್ಟ್; ರಾಹುಲ್ ಗಾಂಧಿಗೆ ಹಿನ್ನಡೆ
ನವದೆಹಲಿ: ಮೋದಿ ಉಪನಾಮದ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಶಿಕ್ಷೆಗೆ ತಡೆ ನೀಡಲು ಗುಜರಾತ್ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ. ನ್ಯಾಯಮೂರ್ತಿ ಹೇಮಂತ್ ಪ್ರಚ್ಚಕ್ ಅವರಿದ್ದ ನ್ಯಾಯಾಲಯ ಈ ತೀರ್ಪು ನೀಡಿದೆ.
ಮಾನಹಾನಿ ಪ್ರಕರಣದಲ್ಲಿ ಶಿಕ್ಷೆಯನ್ನು ಅಮಾನತುಗೊಳಿಸುವಂತೆ ರಾಹುಲ್ ಗಾಂಧಿ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ವಜಾಗೊಳಿಸಿದ ಗುಜರಾತ್ ಹೈಕೋರ್ಟ್ ಮಧ್ಯ ಪ್ರವೇಶಿಸುವ ಅಗತ್ಯವಿಲ್ಲ ಎಂದು ಹೇಳಿದೆ, ಈ ಮೂಲಕ ರಾಹುಲ್ ಗಾಂಧಿಗೆ ಹಿನ್ನಡೆಯಾಗಿದೆ.
ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ನ್ಯಾಯಮೂರ್ತಿ ಹೇಮಂತ್ ಪ್ರಚ್ಚಕ್ ಅವರು ಎಪ್ರಿಲ್ ಮತ್ತು ಮೇನಲ್ಲಿ ಅರ್ಜಿಯನ್ನು ಆಲಿಸಿದ್ದರು ಹಾಗೂ ಮೇ 2 ರಂದು ವಾದವನ್ನು ಮುಕ್ತಾಯಗೊಳಿಸಲಾಯಿತು. ರಾಹುಲ್ ಗಾಂಧಿ ಪರ ವಾದಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, , ಕ್ರಿಮಿನಲ್ ಮಾನನಷ್ಟದ ಆರೋಪದ ಪ್ರಕರಣದಲ್ಲಿ ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಮನವಿ ಮಾಡಿದರು.
‘ಮೋದಿ ಉಪನಾಮ ಹೊಂದಿರುವವರೆಲ್ಲರೂ ಕಳ್ಳರು’ ಎಂದಿದ್ದ ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿನ ಶಿಕ್ಷೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಗುಜರಾತ್ ಹೈಕೋರ್ಟ್ ಈ ತೀರ್ಪು ನೀಡಿದೆ.
ಮಾರ್ಚ್ನಲ್ಲಿ ಸೂರತ್ನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಈ ಪ್ರಕರಣದಲ್ಲಿ ರಾಹುಲ್ ಗಾಂಧಿ ದೋಷಿ ಎಂದು ಆದೇಶ ನೀಡಿತ್ತು. ಐಪಿಸಿ 499, 500ರಡಿ ಎರಡು ವರ್ಷ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಶಿಕ್ಷೆ ಪ್ರಕಟಗೊಂಡ ಮರುದಿನವೇ, ಲೋಕಸಭೆಯ ಸ್ಪೀಕರ್ ಕಾರ್ಯಾಲಯ ಸಂಸದ ಸ್ಥಾನದಿಂದ ಅನರ್ಹಗೊಳಿಸಿತ್ತು.
ನ್ಯಾಯಮೂರ್ತಿ ಹೇಮಂತ್ ಪ್ರಚ್ಚಕ್, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 2ರಂದೇ ವಿಚಾರಣೆ ಪೂರ್ಣಗೊಳಿಸಿದ್ದು ಆದೇಶವನ್ನು ಕಾಯ್ದಿರಿಸಿದ್ದರು. ಮಧ್ಯಂತರ ಪರಿಹಾರದ ಆದೇಶ ನೀಡಲು ನಿರಾಕರಿಸಿದ್ದರು. ಬೇಸಿಗೆ ರಜೆ ಮುಗಿದ ಬಳಿಕವೇ ಆದೇಶ ಪ್ರಕಟಿಸುವುದಾಗಿ ತಿಳಿಸಿದ್ದರು.
ಶುಕ್ರವಾರ ಕೋರ್ಟ್ ತೀರ್ಪು ಪ್ರಕಟಿಸಿದ್ದು, ಕೆಳ ನ್ಯಾಯಾಲಯ ನೀಡಿದ ತೀರ್ಪು ಸರಿಯಾಗಿದೆ. ತೀರ್ಪಿನಲ್ಲಿ ನಾವು ಮಧ್ಯಪ್ರವೇಶಿಸುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ. ಈ ತೀರ್ಪಿನ ವಿರುದ್ಧ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆಯಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ