ಅಬಕಾರಿ ನೀತಿ ಹಗರಣ: ಸಿಬಿಐ, ಇ.ಡಿ ಪ್ರಕರಣಗಳಲ್ಲಿ ಸಿಸೋಡಿಯಾ ಜಾಮೀನು ಅರ್ಜಿ ವಿಚಾರಣೆಗೆ 'ಸುಪ್ರೀಂ' ಒಪ್ಪಿಗೆ

ಸಿಬಿಐ ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಹಗರಣ ಮತ್ತು ಅದರಿಂದ ಉಂಟಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ಜುಲೈ 14 ರಂದು ಆಲಿಸಲು ಸುಪ್ರೀಂ ಕೋರ್ಟ್ ಸೋಮವಾರ ಸಮ್ಮತಿಸಿದೆ.
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್

ನವದೆಹಲಿ: ಸಿಬಿಐ ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಹಗರಣ ಮತ್ತು ಅದರಿಂದ ಉಂಟಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ಜುಲೈ 14 ರಂದು ಆಲಿಸಲು ಸುಪ್ರೀಂ ಕೋರ್ಟ್ ಸೋಮವಾರ ಸಮ್ಮತಿಸಿದೆ.

ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಪರ ಹಾಜರಿದ್ದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ, ಸಿಸೋಡಿಯಾ ಅವರ ಪತ್ನಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಳ್ಳುವಂತೆ ಕೋರ್ಟಿಗೆ ಒತ್ತಾಯಿಸಿದ ನಂತರ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಅವರ ಪೀಠವು ವಿಚಾರಣೆಗೆ ಒಪ್ಪಿಗೆ ಸೂಚಿಸಿತು.

ಈ ವಿಷಯವನ್ನು ಜುಲೈ 17 ರಂದು ವಿಚಾರಣೆಗೆ ಪಟ್ಟಿ ಮಾಡಲಾಗಿದ್ದರೂ, ಅದನ್ನು ಜುಲೈ 14 ರಂದು ವಿಚಾರಣೆಗೆ ತೆಗೆದುಕೊಳ್ಳಲಾಗುವುದು ಎಂದು ಪೀಠ ಹೇಳಿದೆ.

ಕಳೆದ ವಾರ, ಆಪಾದಿತ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಸಿಬಿಐ ಮತ್ತು ಇ.ಡಿ ಪ್ರಕರಣಗಳಲ್ಲಿ ಜಾಮೀನು ಕೋರಿ ಸಿಸೋಡಿಯಾ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಪ್ರಕರಣಗಳಲ್ಲಿ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ದೆಹಲಿ ಹೈಕೋರ್ಟ್‌ನ ಎರಡು ಆದೇಶಗಳನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಅಬಕಾರಿ ಖಾತೆಯನ್ನು ಸಹ ಹೊಂದಿದ್ದ ಸಿಸೋಡಿಯಾ ಅವರನ್ನು ಫೆಬ್ರುವರಿ 26 ರಂದು ಸಿಬಿಐ ಮೊದಲ ಬಾರಿಗೆ 'ಹಗರಣ'ದಲ್ಲಿನ ಅವರ ಪಾತ್ರಕ್ಕಾಗಿ ಅವರನ್ನು ಬಂಧಿಸಿತು ಮತ್ತು ಅಂದಿನಿಂದ ಅವರು ಬಂಧನದಲ್ಲಿದ್ದಾರೆ.

ಫೆಬ್ರುವರಿ 28 ರಂದು ದೆಹಲಿ ಸಚಿವ ಸಂಪುಟಕ್ಕೆ ಸಿಸೋಡಿಯಾ ರಾಜೀನಾಮೆ ನೀಡಿದ್ದರು.

ಸಿಬಿಐ ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಹಗರಣದ ಪ್ರಕರಣದಲ್ಲಿ ಮೇ 30 ರಂದು ಅವರಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್, ಉಪಮುಖ್ಯಮಂತ್ರಿ ಮತ್ತು ಅಬಕಾರಿ ಸಚಿವರಾಗಿದ್ದ ಅವರು 'ಉನ್ನತ' ವ್ಯಕ್ತಿಯಾಗಿದ್ದು, ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಹೇಳಿತ್ತು.

ಜುಲೈ 3 ರಂದು, ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಹೈಕೋರ್ಟ್ ಅವರಿಗೆ ಜಾಮೀನು ನಿರಾಕರಿಸಿತ್ತು. ಅವರ ವಿರುದ್ಧದ ಆರೋಪಗಳು 'ಸ್ವಭಾವದಲ್ಲಿ ಬಹಳ ಗಂಭೀರವಾಗಿವೆ' ಎಂದು ಕೋರ್ಟ್ ತಿಳಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com