ಭಾರತದ ಆಂತರಿಕ ವಿಷಯ ಯುರೋಪ್ ಸಂಸತ್ತಿನಲ್ಲಿ ಚರ್ಚೆ: ಮಣಿಪುರದ ಬಗ್ಗೆ ಪ್ರಧಾನಿ ಮೌನ ಪ್ರಶ್ನಿಸಿದ ರಾಹುಲ್ ಗಾಂಧಿ

ಐರೋಪ್ಯ ಸಂಸತ್ತು ಭಾರತದ ಆಂತರಿಕ ವಿಷಯದ ಬಗ್ಗೆ ಚರ್ಚಿಸಿದ ನಂತರವೂ ಮಣಿಪುರದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಮೌನ ವಹಿಸಿದ್ದನ್ನು ಪ್ರಶ್ನಿಸಿ, ಫ್ರಾನ್ಸ್‌ ಪ್ರವಾಸದಿಂದ ಹೊರಟು ಅಬುಧಾಬಿಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಮ್ಮೆ ಕಿಡಿಕಾರಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಐರೋಪ್ಯ ಸಂಸತ್ತು ಭಾರತದ ಆಂತರಿಕ ವಿಷಯದ ಬಗ್ಗೆ ಚರ್ಚಿಸಿದ ನಂತರವೂ ಮಣಿಪುರದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಮೌನ ವಹಿಸಿದ್ದನ್ನು ಪ್ರಶ್ನಿಸಿ, ಫ್ರಾನ್ಸ್‌ ಪ್ರವಾಸದಿಂದ ಹೊರಟು ಅಬುಧಾಬಿಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಮ್ಮೆ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, 'ಮಣಿಪುರ ಹೊತ್ತಿ ಉರಿಯುತ್ತಿದೆ. ಯುರೋಪಿಯನ್ ಪಾರ್ಲಿಮೆಂಟ್ ಭಾರತದ ಆಂತರಿಕ ವಿಷಯವನ್ನು ಚರ್ಚಿಸುತ್ತದೆ. ಆದರೆ, ಪ್ರಧಾನಿ ಒಂದೂ ಮಾತನಾಡಿಲ್ಲ. ಅಷ್ಟರಲ್ಲಿ ಅವರಿಗೆ ಬಾಸ್ಟಿಲ್ ಡೇ ಪರೇಡ್‌ಗೆ ಟಿಕೆಟ್ ಸಿಗುತ್ತದೆ' ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಅವರು ಜೂನ್ 29 ಮತ್ತು 30 ರಂದು ಎರಡು ದಿನಗಳ ಕಾಲ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಿದ್ದರು ಮತ್ತು ಪರಿಹಾರ ಶಿಬಿರಗಳಲ್ಲಿ ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಿದ್ದರು.

ಅವರು ಮಣಿಪುರದ ರಾಜ್ಯಪಾಲರಾದ ಅನುಸೂಯಾ ಉಯಿಕೆ ಅವರನ್ನು ಭೇಟಿಯಾಗಿ ಪರಿಹಾರ ಶಿಬಿರಗಳ ಸ್ಥಿತಿಯ ಬಗ್ಗೆ ತಿಳಿಸಿದ್ದರು ಮತ್ತು ಈಶಾನ್ಯ ರಾಜ್ಯದಲ್ಲಿ ಸಹಜ ಸ್ಥಿತಿಯನ್ನು ಮರಳಿ ತರುವಂತೆ ಮನವಿ ಮಾಡಿದರು.

ಮಣಿಪುರದಲ್ಲಿ ಮೇ 3 ರಂದು ಜನಾಂಗೀಯ ಹಿಂಸಾಚಾರ ಸ್ಫೋಟಗೊಂಡಿತು ಮತ್ತು ಅಂದಿನಿಂದ 100ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ ಮತ್ತು ಸಾವಿರಾರು ಜನರು ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ.

ಮಣಿಪುರ ಹಿಂಸಾಚಾರದ ಬಗ್ಗೆ ಪ್ರಧಾನಿ ಮೌನವಾಗಿರುವುದನ್ನು ಕಾಂಗ್ರೆಸ್ ಪ್ರಶ್ನಿಸಿದೆ ಮತ್ತು ರಾಜ್ಯದಲ್ಲಿ ಪರಿಸ್ಥಿತಿಯನ್ನು ನಿಯಂತ್ರಿಸಲು ವಿಫಲವಾದ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com