ನವದೆಹಲಿ: ಫ್ರಾನ್ಸ್ ಮತ್ತು ಯುಎಇ ಪ್ರವಾಸಕ್ಕೆ ತೆರಳಿದ್ದ ಪ್ರಧಾನಿ ಮೋದಿ ಭಾರತಕ್ಕೆ ವಾಪಸ್ಸಾಗಿದ್ದಾರೆ. ದೆಹಲಿಗೆ ಮರಳಿದ ತಕ್ಷಣವೇ ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರೊಂದಿಗೆ ಮಾತನಾಡಿದರು. ರಾಷ್ಟ್ರ ರಾಜಧಾನಿಯಲ್ಲಿನ ಪ್ರವಾಹದ ಪರಿಸ್ಥಿತಿ ನಿಭಾಯಿಸುವಲ್ಲಿ ಆಗಿರುವ ಪ್ರಗತಿ ಬಗ್ಗೆ ವಿಚಾರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರಿ ಮಳೆಯಿಂದಾಗಿ ಯಮುನಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ದೆಹಲಿಯ ಹಲವು ಭಾಗಗಳಿಗೆ ನೀರು ನುಗ್ಗಿದೆ.
ಶನಿವಾರದಂದು ನದಿಯ ನೀರಿನ ಮಟ್ಟವು ಇಳಿಮುಖವಾಗಿತ್ತು. ಅನೇಕ ಪ್ರದೇಶಗಳಲ್ಲಿ ಪ್ರವಾಹದ ನೀರು ಕಡಿಮೆಯಾಗಿದ್ದರಿಂದ ಅಧಿಕಾರಿಗಳು ರಸ್ತೆ ಸಂಚಾರ ಆರಂಭಿಸಲು ಅನುವು ಮಾಡಿಕೊಟ್ಟರು.
'ವಿದೇಶದಿಂದ ದೆಹಲಿಗೆ ಆಗಮಿಸಿದ ತಕ್ಷಣ ಪ್ರಧಾನಿ ನರೇಂದ್ರ ಮೋದಿಯವರು ಯಮುನಾ ನದಿಯಿಂದಾಗಿ ದೆಹಲಿಯಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿ ಮತ್ತು ಕೈಗೊಂಡ ಕ್ರಮಗಳ ಕುರಿತು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅವರೊಂದಿಗೆ ಮಾತನಾಡಿದರು' ಎಂದು ಅಧಿಕಾರಿಯೊಬ್ಬರು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿಯವರು ಮೂರು ದಿನಗಳ ಫ್ರಾನ್ಸ್ ಮತ್ತು ಯುಎಇ ಪ್ರವಾಸದಲ್ಲಿದ್ದರು.
Advertisement