ಮಣಿಪುರ ವಿವಾದ; ಪ್ರತಿಪಕ್ಷಗಳ ಗದ್ದಲದ ನಡುವೆಯೇ ಲೋಕಸಭೆ ಕಲಾಪ ನಾಳೆಗೆ ಮುಂದೂಡಿಕೆ

ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದ ಕುರಿತು ವಿರೋಧ ಪಕ್ಷಗಳ ಸದಸ್ಯರ ನಿರಂತರ ಪ್ರತಿಭಟನೆಯ ನಡುವೆಯೇ ಲೋಕಸಭೆಯ ಕಲಾಪವನ್ನು ಗುರುವಾರ ದಿನದ ಮಟ್ಟಿಗೆ ಮುಂದೂಡಲಾಯಿತು.
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಸದಸ್ಯರ ಪ್ರತಿಭಟನೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಸದಸ್ಯರ ಪ್ರತಿಭಟನೆ
Updated on

ನವದೆಹಲಿ: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದ ಕುರಿತು ವಿರೋಧ ಪಕ್ಷಗಳ ಸದಸ್ಯರ ನಿರಂತರ ಪ್ರತಿಭಟನೆಯ ನಡುವೆಯೇ ಲೋಕಸಭೆಯ ಕಲಾಪವನ್ನು ಗುರುವಾರ ದಿನದ ಮಟ್ಟಿಗೆ ಮುಂದೂಡಲಾಯಿತು.

ಸದನದಲ್ಲಿ ಪ್ರಧಾನಿಯವರ ಉಪಸ್ಥಿತಿಗೆ ಆಗ್ರಹಿಸಿ ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ, ಫಲಕಗಳನ್ನು ಪ್ರದರ್ಶಿಸಿದರು. ಇದರ ನಡುವೆಯೇ ಸದನವು ಸಂಕ್ಷಿಪ್ತ ಚರ್ಚೆಗಳ ನಂತರ ಎರಡು ಮಸೂದೆಗಳನ್ನು ಅಂಗೀಕರಿಸಿತು.

ಬಳಕೆಯಲ್ಲಿಲ್ಲದ ಕಾನೂನುಗಳನ್ನು ರದ್ದುಗೊಳಿಸುವ ಜನ ವಿಶ್ವಾಸ (ನಿಬಂಧನೆಗಳ) ತಿದ್ದುಪಡಿ ಕಾಯ್ದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಯಿತು. 

ಮಣಿಪುರ ವಿಚಾರವಾಗಿ ಪ್ರತಿಪಕ್ಷಗಳು ಬಿಗಿಪಟ್ಟು ಹಿಡಿದಿದ್ದು, ಸದನವನ್ನು ಮೂರು ಬಾರಿ ಮುಂದೂಡಲು ಕಾರಣವಾಯಿತು.

ಮಧ್ಯಾಹ್ನ 2 ಗಂಟೆಗೆ ಕಲಾಪ ಮತ್ತೆ ಆರಂಭವಾದಾಗ, ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಸರ್ಕಾರದ ವಿದೇಶಿ ವ್ಯವಹಾರಗಳ ಕುರಿತು ಹೇಳಿಕೆ ನೀಡಿದರು.

ಜೈಶಂಕರ್ ಹೇಳಿಕೆಗೆ ಪ್ರತಿಪಕ್ಷಗಳು ಅಡ್ಡಿಪಡಿಸಿದ್ದಕ್ಕೆ ಕೇಂದ್ರ ಸಚಿವ ಪಿಯೂಷ್ ಗೋಯಲ್ ಮತ್ತು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ನಡುವೆ ವಾಗ್ವಾದ ನಡೆಯಿತು.

ಜೈಶಂಕರ್ ಹೇಳಿಕೆಯ ನಂತರ, ಚೌಧರಿ ಅವರು ಪ್ರಶ್ನೆಯೊಂದನ್ನು ಕೇಳಲು ಮುಂದಾದರು. ಈ ವೇಳೆ ಗೋಯಲ್ ಎದ್ದುನಿಂತು, ವಿದೇಶಾಂಗ ಸಚಿವರ ಹೇಳಿಕೆಗೆ ಅಡ್ಡಿಪಡಿಸಿದ್ದನ್ನು ವಿರೋಧಿಸಿ, ಕಾಂಗ್ರೆಸ್ ನಾಯಕನಿಗೆ ಮಾತನಾಡಲು ಬಿಡುವುದಿಲ್ಲ ಎಂದು ಹೇಳಿದರು.

ಇದೇ ವಿಚಾರವಾಗಿ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಮಾತಿನ ಚಕಮಕಿ ಮುಂದುವರೆಯಿತು. ಮಣಿಪುರ ಹಿಂಸಾಚಾರದ ಕುರಿತು ಹಲವಾರು ವಿರೋಧ ಪಕ್ಷಗಳ ಸದಸ್ಯರು ಘೋಷಣೆಗಳನ್ನು ಕೂಗುತ್ತಲೇ ಇದ್ದುದರಿಂದ ಸದನವನ್ನು 20 ನಿಮಿಷಗಳ ಕಾಲ ಮುಂದೂಡಲಾಯಿತು.

ಸದನವನ್ನು ಮುಂದೂಡುವ ಮುನ್ನವೇ ಕಾಂಗ್ರೆಸ್ ಸದಸ್ಯರು ಹರಿದ ಕಾಗದಗಳನ್ನು ಸ್ಪೀಕರ್ ಕುರ್ಚಿಯತ್ತ ಎಸೆದರು.

ಮಧ್ಯಾಹ್ನ 3 ಗಂಟೆಗೆ ಸದನ ಮತ್ತೆ ಸಭೆ ಸೇರಿದಾಗ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಘಟನೆಯನ್ನು ಪ್ರಸ್ತಾಪಿಸಿ, ಸದಸ್ಯರನ್ನು ಹೆಸರಿಸುವಂತೆ ಸ್ಪೀಕರ್ ಅನ್ನು ಒತ್ತಾಯಿಸಿದರು.

ಇದರ ನಡುವೆಯೇ, ಜನ ವಿಶ್ವಾಸ್ (ನಿಬಂಧನೆಗಳ ತಿದ್ದುಪಡಿ) ಮಸೂದೆಯನ್ನು ಮಂಡಿಸಲಾಯಿತು.

ಮಸೂದೆಯ ಕುರಿತಾದ ತಮ್ಮ ಆರಂಭಿಕ ಹೇಳಿಕೆಯಲ್ಲಿ ಗೋಯಲ್, ಪ್ರತಿಭಟನೆಯ ಸಂಕೇತವಾಗಿ ಕಪ್ಪು ಬಟ್ಟೆಯನ್ನು ಧರಿಸಿದ್ದ ವಿರೋಧ ಪಕ್ಷದ ಸದಸ್ಯರ ವಿರುದ್ಧ ವಾಗ್ದಾಳಿ ನಡೆಸಿದರು. ಅವರು ತಮ್ಮ ಕಪ್ಪು ಕೃತ್ಯಗಳನ್ನು ತಮ್ಮ ಉಡುಪಿನ ಹಿಂದೆ ಮರೆಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದರು.

ಜನಾಂಗೀಯ ಕಲಹ ಪೀಡಿತ ಮಣಿಪುರದ ಪರಿಸ್ಥಿತಿಯ ಬಗ್ಗೆ ಪ್ರಧಾನಿಯವರು ಸದನದಲ್ಲಿ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿ ವಿರೋಧ ಪಕ್ಷದ ಸದಸ್ಯರು ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ಮುಂದುವರಿಸಿದ್ದರಿಂದ, ಬೆಳಗ್ಗೆ ಲೋಕಸಭೆ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com