ಲೋಕಸಭೆಯಲ್ಲಿ ಮುಂದುವರೆದ ಪ್ರತಿಪಕ್ಷಗಳ ಗದ್ದಲ, ಕಲಾಪ ಮಧ್ಯಾಹ್ನ 2ಕ್ಕೆ ಮುಂದೂಡಿಕೆ

ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಮಣಿಪುರದಲ್ಲಿನ ಜನಾಂಗೀಯ ಹಿಂಸಾಚಾರ ಕುರಿತ ಚರ್ಚೆಗೆ ಗುರುವಾರವೂ ವಿಪಕ್ಷಗಳು ಲೋಕಸಭೆಯಲ್ಲಿ ಗದ್ದಲ, ಪ್ರತಿಭಟನೆ ಮುಂದುವರೆಸಿದರಿಂದ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು. 
ಲೋಕಸಭೆ
ಲೋಕಸಭೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಮಣಿಪುರದಲ್ಲಿನ ಜನಾಂಗೀಯ ಹಿಂಸಾಚಾರ ಕುರಿತ ಚರ್ಚೆಗೆ ಗುರುವಾರವೂ ವಿಪಕ್ಷಗಳು ಲೋಕಸಭೆಯಲ್ಲಿ ಗದ್ದಲ, ಪ್ರತಿಭಟನೆ ಮುಂದುವರೆಸಿದರಿಂದ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು. 

ಮಣಿಪುರದಲ್ಲಿ ಪರಿಸ್ಥಿತಿ ಕುರಿತು ಸಮಗ್ರ ಚರ್ಚೆಗೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಸದನದಲ್ಲಿ ಹೇಳಿಕೆ ನೀಡಬೇಕೆಂದು ಒತ್ತಾಯಿಸಿ ಕಳೆದ ಎಂಟು ದಿನಗಳಿಂದಲೂ ಪ್ರತಿಪಕ್ಷಗಳು ಸಂಸತ್ತಿನ ಉಭಯ ಸದನಗಳಲ್ಲಿ ನಿರಂತರವಾಗಿ ಪ್ರತಿಭಟನೆ ನಡೆಸುತ್ತಾ ಬಂದಿದ್ದು, ಯಾವುದೇ ಚರ್ಚೆ ನಡೆಯದೆ ಕಲಾಪ ವ್ಯರ್ಥವಾಗುತ್ತಿದೆ.

ಇಂದು ಸಹ ಕಪ್ಪು ಪಟ್ಟಿ ಧರಿಸಿ ಸದನದ ಒಳಗಡೆ ಆಗಮಿಸಿದ್ದ ಇಂಡಿಯಾ ಒಕ್ಕೂಟದ ಸದಸ್ಯರು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸದನದಲ್ಲಿ ಗದ್ದಲ, ಕೋಲಾಹಲ ಮುಂದುವರೆದಿದ್ದರಿಂದ ಸ್ಪೀಕರ್ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು. 

ಈ ವಿಚಾರದಲ್ಲಿ ಅವಿಶ್ವಾಸ ಗೊತ್ತುವಳಿ ಮಂಡಿಸಲಾಗುತ್ತಿದೆ. ಇದರಿಂದ ಸರ್ಕಾರ ಬೀಳುವುದಿಲ್ಲ ಎಂಬುದು ಗೊತ್ತಿದ್ದರೂ ನಮಗೆ ಬೇರೆ ಆಯ್ಕೆ ಇಲ್ಲ. ದೇಶದ ಪ್ರಧಾನಿ ದೇಶದ ಮುಂದೆ ಬಂದು ಮಣಿಪುರದ ಬಗ್ಗೆ ಮಾತನಾಡಬೇಕು ಎಂದು ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಆಗ್ರಹಿಸಿದ್ದಾರೆ. 

ಆಡಳಿತ ಪಕ್ಷದ ಸದಸ್ಯರು ಮತ್ತು ಪ್ರತಿಪಕ್ಷಗಳ ನಿರಂತರ ಘೋಷಣೆಗಳ ನಡುವೆ ರಾಜ್ಯಸಭೆಯ ಕಲಾಪವನ್ನು ಗುರುವಾರ ಮಧ್ಯಾಹ್ನ 2 ಗಂಟೆಗೆ ಎರಡನೇ ಬಾರಿಗೆ ಮುಂದೂಡಲಾಯಿತು.

ಭಾರತದ ವಿದೇಶಾಂಗ ನೀತಿಯ ಇತ್ತೀಚಿನ ಬೆಳವಣಿಗೆಗಳ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿಕೆಯ ಕುರಿತು ಪ್ರಶ್ನೆಗಳನ್ನು ಕೇಳಲು ಸಭಾಪತಿಯಿಂದ ಅವಕಾಶ ಪಡೆದ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಗದ್ದಲದಿಂದಾಗಿ ಸದನದಲ್ಲಿ ಮಾತನಾಡಲು ಸಾಧ್ಯವಾಗಲಿಲ್ಲ. ಪ್ರತಿಪಕ್ಷದ ನಾಯಕರು ಮಾತನಾಡಲು ಎದ್ದು ನಿಂತಾಗ ಸದನದಲ್ಲಿ ತೀವ್ರ ಗದ್ದಲ ಉಂಟಾಯಿತು. ನಂತರ ಸಭಾಪತಿಯವರು ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com