ತಮಿಳುನಾಡು: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, 9 ಮಂದಿ ದುರ್ಮರಣ, ಹಲವರಿಗೆ ಗಾಯ
ಚೆನ್ನೈ: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 9 ಮಂದಿ ಸಾವನ್ನಪ್ಪಿ, ಹಲವರಿಗೆ ಗಾಯವಾಗಿರುವ ಘಟನೆ ಶನಿವಾರ ನಡೆದಿದೆ.
ಕೃಷ್ಣಗಿರಿಯ ಮುರುಗನ್ ದೇವಸ್ಥಾನದ ರಸ್ತೆಯಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಇಂದು ಬೆಳಿಗ್ಗೆ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ.
ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ಬಳಿಕ ಹತ್ತಿರದಲ್ಲಿದ್ದ ಮೂರು ಮನೆಗಳಿಗೂ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಘಟನೆಯಲ್ಲಿ 9 ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದಾರೆಂದು ವರದಿಗಳು ತಿಳಿಸಿವೆ.
ಮೃತರನ್ನು ಕಾರ್ಖಾನೆ ಮಾಲೀಕ ರವಿ, ಅವರ ಪತ್ನಿ ಜಯಶ್ರೀ, ಪುತ್ರಿ ರುತಿಕ್ಕ ಮತ್ತು ಮಗ ರುತೀಶ್ ಎಂದು ಗುರುತಿಸಲಾಗಿದೆ.
ಕಾರ್ಖಾನೆ ಬಳಿ ರೆಸ್ಟೋರೆಂಟ್ ನಡೆಸುತ್ತಿದ್ದ ರಾಜೇಶ್ವರಿ, ವೆಲ್ಡಿಂಗ್ ಶಾಪ್ ಹೊಂದಿದ್ದ ಇಬ್ರಾಹಿಂ ಮತ್ತು ಇಮ್ರಾನ್, ವಾಟರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸರಸು ಮತ್ತು ಜೇಮ್ಸ್ ಎಂಬವವರೂ ಕೂಡ ಘಟನೆಯಲ್ಲಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ಈ ನಡುವೆ ಘಟನೆಯಲ್ಲಿ ಹಲವರು ಕಟ್ಟಡಗಳಲ್ಲಿ ಸಿಲುಕಿರುವ ಶಂಕೆಗಳು ವ್ಯಕ್ತವಾಗಿದ್ದು, ಸ್ಥಳಕ್ಕೆ ಭೇಟ ನೀಡಿರುವ ಅಧಿಕಾರಿಗಳು, ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.
ಗಾಯಾಳುಗಳನ್ನು ಕೃಷ್ಣಗಿರಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಕಾರ್ಖಾನೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪಟಾಕಿ ಶೇಖರಣೆ ಮಾಡಿ ಇಡಲಾಗಿತ್ತು. ಇಂದು ಬೆಳಗ್ಗೆ ಸುಮಾರು 9.30ರ ಸುಮಾರಿಗೆ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇದರಿಂದಾಗಿ ಸ್ಫೋಟ ಸಂಭವಿಸಿದೆ. ಪರಿಣಾಮ ಕಾರ್ಖಾನೆಯ ಸುತ್ತಮುತ್ತಲಿನ 7-8 ಮನೆಗಳಿಗೆ ಭಾರಿ ಹಾನಿ ಸಂಭವಿಸಿದೆ. ಜನನಿಬಿಡ ಪ್ರದೇಶದಲ್ಲಿ ಈ ಕಾರ್ಖಾನೆ ಇದ್ದಿದ್ದರಿಂದ ಭಾರಿ ಪ್ರಮಾಣದ ಹಾನಿ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ