ಅಹಮದ್ ನಗರ: ಮಹಾರಾಷ್ಟ್ರದ ಅಹ್ಮದ್ನಗರದಲ್ಲಿ ನಡೆದ ಮೆರವಣಿಗೆಯಲ್ಲಿ ಮೊಘಲ್ ದೊರೆ ಔರಂಗಜೇಬ್ನ ಪೋಸ್ಟರ್ ಹಿಡಿದಿದ್ದ ಆರೋಪದ ಮೇಲೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಭಾನುವಾರ ಬೆಳಗ್ಗೆ 9 ಗಂಟೆಗೆ ಫಕೀರ್ವಾಡ ಪ್ರದೇಶದಲ್ಲಿ ಮೆರವಣಿಗೆ ನಡೆಸಲಾಗಿದ್ದು, ಅದರ ವಿಡಿಯೋ ಕೂಡಾ ವೈರಲ್ ಆಗಿದೆ ಎಂದು ಭಿಂಗಾರ್ ಕ್ಯಾಂಪ್ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
"ಮೆರವಣಿಗೆಯಲ್ಲಿ ಸಂಗೀತ ಮತ್ತು ನೃತ್ಯದ ನಡುವೆ ಔರಂಗಜೇಬನ ಫೋಸ್ಟರ್ ಹಿಡಿದಿದ್ದ ನಾಲ್ವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಒಂದು ಸಮುದಾಯವನ್ನು ಮತ್ತೊಂದು ಸಮುದಾಯದ ವಿರುದ್ಧ ಅಪರಾಧ ಎಸಗಲು ಪ್ರೇರೇಪಿಸುವ, ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟುಮಾಡುವ ಉದ್ದೇಶದ ಅಪರಾಧವನ್ನು ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಈ ಮಧ್ಯೆ ಇಂತಹ ಕೃತ್ಯಗಳನ್ನು ಕ್ಷಮಿಸುವುದಿಲ್ಲ ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. ಯಾರಾದರೂ ಔರಂಗಜೇಬನ ಪೋಸ್ಟರ್ ಹಾಕಿದರೆ ಅದನ್ನು ಸಹಿಸಲಾಗುವುದಿಲ್ಲ, ಈ ದೇಶ ಮತ್ತು ರಾಜ್ಯದಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಮತ್ತು ಛತ್ರಪತಿ ಸಂಭಾಜಿ ಮಹಾರಾಜರು ಮಾತ್ರ ನಮ್ಮ ದೇವರು ಎಂದರು.
ಕಾನೂನು ಸುವ್ಯವಸ್ಥೆ ಕಾಪಾಡಲು ರಾಜ್ಯ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಹಾರಾಷ್ಟ್ರ ಎನ್ ಸಿಪಿ ಮುಖ್ಯಸ್ಥ ಜಯಂತ್ ಪಾಟೀಲ್ ಆಗ್ರಹಿಸಿದ್ದಾರೆ.
Advertisement