ವಿವಾಹಿತ ಪುರುಷರ ಆತ್ಮಹತ್ಯೆ: ರಾಷ್ಟ್ರೀಯ ಪುರುಷರ ಆಯೋಗ ರಚನೆ ಕೋರಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ
ನವದೆಹಲಿ: ಕೌಟುಂಬಿಕ ಹಿಂಸಾಚಾರಕ್ಕೆ ಒಳಗಾದ ವಿವಾಹಿತ ಪುರುಷರ ಆತ್ಮಹತ್ಯೆಯನ್ನು ತಡೆಯಲು ಮಾರ್ಗಸೂಚಿಗಳನ್ನು ಮತ್ತು 'ರಾಷ್ಟ್ರೀಯ ಪುರುಷರ ಆಯೋಗ'ವನ್ನು ರಚಿಸುವಂತೆ ಕೋರಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
ವಕೀಲ ಮಹೇಶ್ ಕುಮಾರ್ ತಿವಾರಿ ಅವರು ಸಲ್ಲಿಸಿದ ಮನವಿಯಲ್ಲಿ, ಭಾರತದಲ್ಲಿ ಆಕಸ್ಮಿಕ ಸಾವುಗಳ ಕುರಿತು 2021ರಲ್ಲಿ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ(ಎನ್ಸಿಆರ್ಬಿ) ಪ್ರಕಟಿಸಿದ ಮಾಹಿತಿಯನ್ನು ಉಲ್ಲೇಖಿಸಿ, ಆ ವರ್ಷದಲ್ಲಿ ದೇಶದಾದ್ಯಂತ 1,64,033 ಜನರು ಆತ್ಮಹತ್ಯೆಯಿಂದ ಮೃತಪಟ್ಟಿದ್ದಾರೆ. ಇವರಲ್ಲಿ 81,063 ಮಂದಿ ವಿವಾಹಿತ ಪುರುಷರು, 28,680 ವಿವಾಹಿತ ಮಹಿಳೆಯರು ಎಂದು ಹೇಳಿದ್ದಾರೆ.
'2021 ರಲ್ಲಿ ಸುಮಾರು 33.2 ಪ್ರತಿಶತ ಪುರುಷರು ಕೌಟುಂಬಿಕ ಸಮಸ್ಯೆಗಳಿಂದ ಮತ್ತು 4.8 ಪ್ರತಿಶತದಷ್ಟು ವಿವಾಹ ಸಂಬಂಧಿತ ಸಮಸ್ಯೆಗಳಿಂದಾಗಿ ಆತ್ಮಹತ್ಯೆಯಂತಹ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಈ ವರ್ಷದಲ್ಲಿ ಒಟ್ಟು 1,18,979 ಪುರುಷರು (ಶೇ 72) ಮತ್ತು ಒಟ್ಟು 45,026 (ಶೇ 27) ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ' ಎಂದು ಎನ್ಸಿಆರ್ಬಿ ಒದಗಿಸಿದ ಡೇಟಾವನ್ನು ಉಲ್ಲೇಖಿಸಿ ಮನವಿಯಲ್ಲಿ ತಿಳಿಸಲಾಗಿದೆ.
ವಿವಾಹಿತ ಪುರುಷರ ಆತ್ಮಹತ್ಯೆಯ ಸಮಸ್ಯೆಯನ್ನು ನಿಭಾಯಿಸಲು ಮತ್ತು ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ಪುರುಷರ ದೂರುಗಳನ್ನು ಸ್ವೀಕರಿಸಲು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಕೋರಲಾಗಿದೆ.
'ಕೌಟುಂಬಿಕ ಹಿಂಸಾಚಾರ ಮತ್ತು ವಿವಾಹ ಸಂಬಂಧಿತ ಸಮಸ್ಯೆಗಳಿಂದಾಗಿ ಒತ್ತಡಕ್ಕೆ ಒಳಗಾದವರ ದೂರನ್ನು ಸ್ವೀಕರಿಸಲು ಪ್ರತಿ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ/ ಸ್ಟೇಷನ್ ಹೌಸ್ ಆಫೀಸರ್ಗೆ ಗೃಹ ಸಚಿವಾಲಯದ ಮೂಲಕ ಸರಿಯಾದ ಮಾರ್ಗಸೂಚಿಗಳನ್ನು ನೀಡಲು ಪ್ರತಿವಾದಿ ನಂ.1 (ಭಾರತ ಸರ್ಕಾರ) ಗೆ ನಿರ್ದೇಶನ ನೀಡಿ ಮತ್ತು ಭಾರತ ಸರ್ಕಾರದಿಂದ ಸರಿಯಾದ ಶಾಸನ ಜಾರಿಗೊಳಿಸುವವರೆಗೆ ಅದರ ಸರಿಯಾದ ವಿಲೇವಾರಿಗಾಗಿ ರಾಜ್ಯ ಮಾನವ ಹಕ್ಕು ಆಯೋಗಕ್ಕೆ ಉಲ್ಲೇಖಿಸಿ' ಎಂದು ಅರ್ಜಿಯಲ್ಲಿ ಒತ್ತಾಯಿಸಲಾಗಿದೆ.
'ಕೌಟುಂಬಿಕ ಹಿಂಸಾಚಾರ ಅಥವಾ ಕೌಟುಂಬಿಕ ಸಮಸ್ಯೆ ಮತ್ತು ವಿವಾಹ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ವಿವಾಹಿತ ಪುರುಷರ ಆತ್ಮಹತ್ಯೆಯ ವಿಷಯದ ಬಗ್ಗೆ ಸಂಶೋಧನೆ ನಡೆಸಲು ಮತ್ತು ರಾಷ್ಟ್ರೀಯ ಪುರುಷರ ಆಯೋಗದಂತಹ ವೇದಿಕೆಯನ್ನು ರಚಿಸಲು ಅಗತ್ಯವಾದ ಕ್ರಮ ಕೈಗೊಳ್ಳಲು ಭಾರತೀಯ ಕಾನೂನು ಆಯೋಗಕ್ಕೆ ನಿರ್ದೇಶನ/ಶಿಫಾರಸು ನೀಡಿ' ಎಂದು ಮನವಿಯಲ್ಲಿ ಹೇಳಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ