ಜಲಂಧರ್: ಪಂಜಾಬ್ ರಾಜ್ಯದಲ್ಲಿ ಕೋಮು ಸಂಘರ್ಷ ಹರಡಲು ಯತ್ನಿಸಿದ ಆರೋಪ ಎದುರಿಸುತ್ತಿರುವ ಖಲಿಸ್ತಾನ್ ಪರ ಸಹಾನುಭೂತಿ ಹೊಂದಿರುವ ಸಿಖ್ ಮೂಲಭೂತವಾದಿ ಧರ್ಮ ಪ್ರಚಾರಕ ಅಮೃತ್ಪಾಲ್ ಸಿಂಗ್ ವಿರುದ್ಧ ಪಂಜಾಬ್ ಪೊಲೀಸರು ಶನಿವಾರ ಭಾರಿ ಕಾರ್ಯಾಚರಣೆ ನಡೆಸಿದ್ದು, ಬಂಧನಕ್ಕೆ ಬೃಹತ್ ಪ್ರಮಾಣದ ಕಾರ್ಯಾಚರಣೆ ನಡೆಸಿದ್ದಾರೆ.
ಅಮೃತ್ಪಾಲ್ ಸಿಂಗ್ ಬಂಧನಕ್ಕೆ ತೀವ್ರ ಹುಡುಕಾಟ ನಡೆದಿದ್ದು, ಪಂಜಾಬ್ ನಾದ್ಯಂತ ನಾಕಾಬಂದಿ ಹೇರಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ಈಗಾಗಲೇ ಅಮೃತ್ ಪಾಲ್ ನ 78 ಬೆಂಬಲಿಗರನ್ನು ಬಂಧಿಸಲಾಗಿದ್ದು, ಕೆಲವರನ್ನು ವಶಕ್ಕೆ ಪಡೆಯಲಾಗಿದೆ. ರೈಫಲ್, ರಿವಾಲ್ವರ್, ಸಜೀವ ಗುಂಡುಗಳನ್ನು ಜಪ್ತಿ ಮಾಡಲಾಗಿದೆ. ಅಂತೆಯೇ ಮುಂಜಾಗ್ರತಾ ಕ್ರಮವಾಗಿ ರಾಜ್ಯದಾದ್ಯಂತ ಭಾನುವಾರ ಮಧ್ಯಾಹ್ನ 12 ಗಂಟೆವರೆಗೆ ಇಂಟರ್ನೆಟ್ ಹಾಗೂ ಎಸ್ಎಂಎಸ್ ಸೇವೆ ಸ್ಥಗಿತಗೊಳಿಸಿ ರಾಜ್ಯ ಗೃಹ ಇಲಾಖೆ ಆದೇಶಿಸಿದೆ.
ಸಿಂಗ್ ಅವರನ್ನು ಪತ್ತೆಹಚ್ಚುವ ಕಾರ್ಯಾಚರಣೆ ನಡೆಯುತ್ತಿದೆ. ಜಲಂಧರ್ ಜಿಲ್ಲೆಯ ಮೆಹತ್ಪುರ ಗ್ರಾಮದಲ್ಲಿ ಅಮೃತ್ ಪಾಲ್ ಹಾಗೂ ಅವರ ಬೆಂಬಲಿಗರು ಇರುವ ವಾಹನವನ್ನು ಪೊಲೀಸರು ಬೆನ್ನತ್ತಿದ್ದರು. ಪೊಲೀಸರ ಕೈಗೆ ಇನ್ನೇನು ಸಿಕ್ಕೇಬಿಟ್ಟರು ಎನ್ನುವಷ್ಟರಲ್ಲಿ ತಪ್ಪಿಸಿಕೊಂಡರು ಎಂದು ಜಲಂಧರ್ ಪೊಲೀಸ್ ಆಯುಕ್ತ ಕುಲದೀಪ್ ಸಿಂಗ್ ಚಹಲ್ ಹೇಳಿದ್ದಾರೆ.
'ವಾರಿಸ್ ಪಂಜಾಬ್ ದೇ’ ಮುಖ್ಯಸ್ಥ ಅಮೃತಪಾಲ್ ಸಿಂಗ್ ಪರಾರಿಯಾಗಿರುವುದಾಗಿ ಘೋಷಿಸಿದರು. ಅವರ ಎರಡು ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಬಂದೂಕುಧಾರಿಗಳನ್ನು ಬಂಧಿಸಲಾಗಿದೆ, ಅವರ ಶಸ್ತ್ರಾಸ್ತ್ರಗಳ ಕಾನೂನುಬದ್ಧತೆಯನ್ನು ಪರಿಶೀಲಿಸಲಾಗುತ್ತಿದೆ. ಪ್ರಕರಣ ದಾಖಲಾಗಿದೆ. ಶೀಘ್ರದಲ್ಲೇ ಅಮೃತಪಾಲ್ ಸಿಂಗ್ ಅವರನ್ನು ಬಂಧಿಸಲು ಪಂಜಾಬ್ ಪೊಲೀಸ್ ಸಿಬ್ಬಂದಿ ಕಾರ್ಯಪ್ರವೃತ್ತರಾಗಿದ್ದಾರೆ. ಈವರೆಗೆ 78 ಮಂದಿಯನ್ನು ಬಂಧಿಸಲಾಗಿದ್ದು, ತಪಾಸಣೆ ನಡೆಯುತ್ತಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.
ಶಾಂತಿ ಕಾಪಾಡಲು ಪೊಲೀಸರು ಮನವಿ
ಅಮೃತ್ಪಾಲ್ ಹುಟ್ಟೂರು ಜಲ್ಲಪುರಖೇರದ ಸಮೀಪ ಭದ್ರತೆ ಪಡೆಗಳನ್ನು ನಿಯೋಜಿಸಲಾಗಿದೆ. ಶಾಂತಿಯಿಂದ ಇರುವಂತೆ ಪಂಜಾಬ್ ಜನರಲ್ಲಿ ಪೊಲೀಸರು ಮನವಿ ಮಾಡಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಇಂಟರ್ನೆಟ್ ಬಂದ್ ಮಾಡಲಾಗಿದ್ದು, ಜನರು ಭೀತಿಗೆ ಒಳಗಾಗಬಾರದು ಎಂದು ಹೇಳಿದ್ದಾರೆ.
Advertisement