ರಾಹುಲ್ ಗಾಂಧಿ ಸಾವರ್ಕರ್ ಅವರಂತೆ ಅಂಡಮಾನ್ ಜೈಲಿನಲ್ಲಿ ಉಳಿಯಬೇಕು: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ

ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ವಿಡಿ ಸಾವರ್ಕರ್ ಅವರನ್ನು ಟೀಕಿಸದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಎಚ್ಚರಿಕೆ ನೀಡಿದ ನಂತರ, ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಅವರು ವಿಡಿ ಸಾವರ್ಕರ್ ಅವರನ್ನು ಟೀಕಿಸಿರುವುದಕ್ಕೆ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 
ಏಕನಾಥ್ ಶಿಂಧೆ
ಏಕನಾಥ್ ಶಿಂಧೆ
Updated on

ಮುಂಬೈ: ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ವಿಡಿ ಸಾವರ್ಕರ್ ಅವರನ್ನು ಟೀಕಿಸದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಎಚ್ಚರಿಕೆ ನೀಡಿದ ನಂತರ, ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಅವರು ವಿಡಿ ಸಾವರ್ಕರ್ ಅವರನ್ನು ಟೀಕಿಸಿರುವುದಕ್ಕೆ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಾಧ್ಯವಾದರೆ ಸಾವರ್ಕರ್ ಅವರಂತೆ ಅಂಡಮಾನ್ ಜೈಲಿಗೆ ಹೋಗಿ ರಾಹುಲ್ ಗಾಂಧಿ ಉಳಿಯಲಿ ಎಂದು ಸಿಎಂ ಏಕನಾಥ್ ಶಿಂಧೆ ಹೇಳಿದ್ದಾರೆ.

ರಾಹುಲ್ ಗಾಂಧಿ ಹೇಳಿದ್ದಕ್ಕೆ ಮಹಾರಾಷ್ಟ್ರದ ನಾಗರಿಕರು ಅಸಮಾಧಾನಗೊಂಡಿದ್ದಾರೆ. ರಾಹುಲ್ ಗಾಂಧಿ ಅವರಿಗೆ ಸಾಧ್ಯವಾದರೆ ಒಂದು ದಿನ ಅಂಡಮಾನ್ ಜೈಲಿಗೆ ಹೋಗಲಿ ಎಂದು ಶಿಂಧೆ ಸುದ್ದಿಗಾರರ ಜೊತೆ ಮಾತನಾಡುತ್ತಾ ಹೇಳಿದರು. 

ರಾಜ್ಯಾದ್ಯಂತ ಸಾವರ್ಕರ್ ಗೌರವ ಯಾತ್ರೆಯನ್ನು ಆಯೋಜಿಸುವುದಾಗಿ ಇದೇ ಸಂದರ್ಭದಲ್ಲಿ ಘೋಷಿಸಿದರು. ಸಾವರ್ಕರ್ ಅವರ ತ್ಯಾಗದ ಬಗ್ಗೆ ತಿಳಿಸಲು ನಾವು ರಾಜ್ಯದಾದ್ಯಂತ ಸಾವರ್ಕರ್ ಗೌರವ ಯಾತ್ರೆಯನ್ನು ಆಯೋಜಿಸುತ್ತೇವೆ ಎಂದು ಹೇಳಿದರು.

ಸಾವರ್ಕರ್ ಅವರನ್ನು ಅವಮಾನಿಸುವುದೆಂದರೆ ದೇಶದ ಜನತೆಗೆ ಅವಮಾನ ಮಾಡಿದಂತಾಗುತ್ತದೆ ಎಂದೂ ಮಹಾರಾಷ್ಟ್ರ ಸಿಎಂ ಹೇಳಿದ್ದಾರೆ.

ವೀರ್ ಸಾವರ್ಕರ್ ಅವರನ್ನು ರಾಹುಲ್ ಗಾಂಧಿ ಅವಮಾನಿಸಿರುವುದು ಖಂಡನೀಯ, ವಿಡಿ ಸಾವರ್ಕರ್ ದೇಶಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. ರಾಹುಲ್ ಗಾಂಧಿ ವಿದೇಶದಲ್ಲಿ ನಮ್ಮ ದೇಶದ ಪ್ರಜಾಪ್ರಭುತ್ವವನ್ನು ಟೀಕಿಸುವುದರ ಜೊತೆಗೆ ಅವರನ್ನು ಅವಮಾನಿಸುತ್ತಿದ್ದಾರೆ ಎಂದರು.

ಕಾಂಗ್ರೆಸ್ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ ಎನ್‌ಸಿಪಿ ಜೊತೆ ಕೈಜೋಡಿಸಿ ಸೇನೆಯ ಮೂಲ ತತ್ವಗಳನ್ನು ದುರ್ಬಲಗೊಳಿಸಿದ್ದಕ್ಕಾಗಿ ಉದ್ಧವ್ ಠಾಕ್ರೆ ವಿರುದ್ಧ ವಾಗ್ದಾಳಿ ನಡೆಸಿದ ಶಿಂಧೆ, “ಸಾವರ್ಕರ್ ಅವರ ಅವಮಾನವನ್ನು ಸಹಿಸುವುದಿಲ್ಲ ಎಂದು ಮೊದಲು ಹೇಳುತ್ತಿದ್ದವರು ರಾಹುಲ್ ಗಾಂಧಿ ಅನರ್ಹತೆ ವಿರುದ್ಧ ಕಪ್ಪು ಪಟ್ಟಿಯನ್ನು ಧರಿಸಿ ಪ್ರತಿಭಟನೆ ಮಾಡಿದ್ದು ದುರದೃಷ್ಟಕರ ಎಂದರು.

ಮಾನನಷ್ಟ ಮೊಕದ್ದಮೆಯಲ್ಲಿ ನ್ಯಾಯಾಲಯದ ತೀರ್ಪಿನ ನಂತರ ಕಳೆದ ವಾರ ಲೋಕಸಭೆಯಿಂದ ಅನರ್ಹಗೊಂಡಿದ್ದ ರಾಹುಲ್ ಗಾಂಧಿ ಅವರು ನಾನು ಸಾವರ್ಕರ್ ಅಲ್ಲ ಎಂದು ಹೇಳಿದ್ದಾರೆ. "ನನ್ನ ಹೆಸರು ಸಾವರ್ಕರ್ ಅಲ್ಲ, ನನ್ನ ಹೆಸರು ಗಾಂಧಿ ಮತ್ತು ಗಾಂಧಿ ಯಾರಿಗೂ ಕ್ಷಮೆ ಕೇಳುವುದಿಲ್ಲ" ಎಂದು ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಯ ನಂತರ ಸಂಸದ ಸ್ಥಾನದಿಂದ ಅನರ್ಹಗೊಂಡ ನಂತರ ಹೇಳಿದ್ದರು. 

ತಮ್ಮ 'ಮೋದಿ ಉಪನಾಮ' ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ದೋಷಿ ಎಂದು ಸೂರತ್ ನ್ಯಾಯಾಲಯದ ಆದೇಶದ ನಂತರ ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯರಾಗಿ ಅನರ್ಹಗೊಳಿಸಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com