ಯುಎಪಿಎ ಅಡಿ ಬಂಧನ ಪ್ರಶ್ನಿಸಿದ ನ್ಯೂಸ್‌ಕ್ಲಿಕ್ ಸಂಸ್ಥಾಪಕ, ಎಚ್ಆರ್ ಮುಖ್ಯಸ್ಥ; ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥ ಮತ್ತು ಅದರ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರು ಯುಎಪಿಎ ಅಡಿಯಲ್ಲಿ ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ದೀಪಾವಳಿ ರಜೆಯ ನಂತರದ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ಮುಂದೂಡಿದೆ.
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
Updated on

ನವದೆಹಲಿ: ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥ ಮತ್ತು ಅದರ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರು ಯುಎಪಿಎ ಅಡಿಯಲ್ಲಿ ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ದೀಪಾವಳಿ ರಜೆಯ ನಂತರದ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ಮುಂದೂಡಿದೆ.

ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ಪ್ರಶಾಂತ್ ಕುಮಾರ್ ಮಿಶ್ರಾ ಅವರಿದ್ದ ಪೀಠವು, ಇಬ್ಬರೂ ಆರೋಪಿಗಳ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಅವರಿಗೆ ದೀಪಾವಳಿ ರಜೆಯ ನಂತರ ಅರ್ಜಿಗಳನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ.

ಈ ವಿಷಯವು ಸುಪ್ರೀಂ ಕೋರ್ಟ್‌ನ ಇತ್ತೀಚಿನ ತೀರ್ಪಿನೊಂದಿಗೆ ಸಂಬಂಧಿಸಿದೆ. ಯುಎಪಿಎ ಅಡಿಯಲ್ಲಿ ಬಂಧನವಾದರೆ, ಅದರ ಹಿಂದಿನ ಆಧಾರವನ್ನು ತಕ್ಷಣವೇ ಆರೋಪಿಗಳೊಂದಿಗೆ ಹಂಚಿಕೊಳ್ಳಬೇಕು ಎಂದು ಹೇಳಲಾಗಿದೆ. ಆದರೆ, ಈ ಪ್ರಕರಣದಲ್ಲಿ ಪುರಕಾಯಸ್ಥ ಮತ್ತು ಚಕ್ರವರ್ತಿ ಅವರೊಂದಿಗೆ ಏನನ್ನೂ ಹಂಚಿಕೊಂಡಿಲ್ಲ. ವೈದ್ಯಕೀಯ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯೂ ನ್ಯಾಯಾಲಯದಲ್ಲಿ ಬಾಕಿ ಇದೆ ಎಂದು ಸಿಬಲ್ ಹೇಳಿದರು.

ದೀಪಾವಳಿ ರಜೆಯ ನಂತರ ವೈದ್ಯಕೀಯ ಜಾಮೀನು ಅರ್ಜಿಯನ್ನು ಮುಖ್ಯ ವಿಷಯದೊಂದಿಗೆ ಕೈಗೆತ್ತಿಕೊಳ್ಳುವುದಾಗಿ ಪೀಠ ಹೇಳಿದೆ.

ಯುಎಪಿಎ ಅಡಿಯಲ್ಲಿ ತಮ್ಮ ಬಂಧನವನ್ನು ಪ್ರಶ್ನಿಸಿ ಪುರಕಾಯಸ್ಥ ಮತ್ತು ಚಕ್ರವರ್ತಿ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಮಧ್ಯಂತರ ಪರಿಹಾರವಾಗಿ ತಕ್ಷಣವೇ ಬಿಡುಗಡೆ ಮಾಡುವಂತೆ ಕೋರಿದ್ದರು. ಆದರೆ, ಅಕ್ಟೋಬರ್ 13 ರಂದು, ಈ ಪ್ರಕರಣದಲ್ಲಿ ಮಧ್ಯೆ ಪ್ರವೇಶಿಸಲು ನಿರಾಕರಿಸಿದ ದೆಹಲಿ ಹೈಕೋರ್ಟ್, ಇಬ್ಬರ ಮನವಿಯನ್ನು ವಜಾಗೊಳಿಸಿತ್ತು.

ಪ್ರಬೀರ್ ಪುರಕಾಯಸ್ಥ ಮತ್ತು ಅಮಿತ್ ಚಕ್ರವರ್ತಿ ಅವರು ಯುಎಪಿಎ ಅಡಿಯಲ್ಲಿ ತಮ್ಮನ್ನು ಬಂಧಿಸಿರುವುದನ್ನು ವಿರೋಧಿಸಿ ಸಲ್ಲಿಸಿದ ಮನವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಅಕ್ಟೋಬರ್ 19ರಂದು (ಬುಧವಾರ) ದೆಹಲಿ ಪೊಲೀಸರ ಪ್ರತಿಕ್ರಿಯೆ ಕೇಳಿತ್ತು.

ಪುರಕಾಯಸ್ಥ ಮತ್ತು ಚಕ್ರವರ್ತಿಯನ್ನು ಅಕ್ಟೋಬರ್ 3ರಂದು ದೆಹಲಿ ಪೊಲೀಸರ ವಿಶೇಷ ಘಟಕವು ಬಂಧಿಸಿತ್ತು. ಚೀನಾ ಪರ ಪ್ರಚಾರ ಮಾಡಲು ಹಣ ಪಡೆದ ಆರೋಪವನ್ನು ಅವರ ಮೇಲೆ ಹೊರಿಸಲಾಗಿದೆ. ಇಬ್ಬರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಎಫ್‌ಐಆರ್‌ನ ಪ್ರಕಾರ, ನ್ಯೂಸ್ ಪೋರ್ಟಲ್‌ಗೆ ಹೆಚ್ಚಿನ ಪ್ರಮಾಣದ ಹಣವನ್ನು ಚೀನಾದಿಂದ 'ಭಾರತದ ಸಾರ್ವಭೌಮತ್ವಕ್ಕೆ ಅಡ್ಡಿಪಡಿಸಲು' ಮತ್ತು ದೇಶದ ವಿರುದ್ಧ ಅಸಮಾಧಾನವನ್ನು ಉಂಟುಮಾಡಲು ಬಂದಿದೆ ಎಂದು ಹೇಳಲಾಗಿದೆ.

2019ರ ಲೋಕಸಭಾ ಚುನಾವಣೆ ಸಮಯದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಹಾಳುಮಾಡಲು ಪುರಕಾಯಸ್ಥ ಅವರು ಪೀಪಲ್ಸ್ ಅಲೈಯನ್ಸ್ ಫಾರ್ ಡೆಮಾಕ್ರಸಿ ಅಂಡ್ ಸೆಕ್ಯುಲರಿಸಂ (PADS) ಗುಂಪಿನೊಂದಿಗೆ ಪಿತೂರಿ ನಡೆಸಿದ್ದಾರೆ ಎಂದು ಅದು ಆರೋಪಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com