ಭೋಪಾಲ್: ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಂತೆಯೇ, ಬಿಜೆಪಿ ಶನಿವಾರ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆ ಫಲಾನುಭವಿಗಳಿಗೆ ರೂ. 450ಕ್ಕೆ ಎಲ್ ಪಿ ಜಿ ಸಿಲಿಂಡರ್, ಗೋಧಿಗೆ 2,700 ರೂ ಹಾಗೂ ಭತ್ತಕ್ಕೆ ರೂ. 3,100 ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ಹಲವು ಭರವಸೆಗಳನ್ನು ನೀಡಿದೆ.
'ಲಾಡ್ಲಿ ಬಹ್ನಾ' ಫಲಾನುಭವಿಗಳಿಗೆ ಮನೆ ನಿರ್ಮಾಣ, ಬಡ ಕುಟುಂಬದ ಹೆಣ್ಣು ಮಕ್ಕಳಿಗೆ ಸ್ನಾತಕೋತ್ತರ ಪದವಿವರೆಗೂ ಉಚಿತ ಶಿಕ್ಷಣ, ಬಡ ವಿದ್ಯಾರ್ಥಿಗಳಿಗೆ 12ನೇ ತರಗತಿ ವರೆಗೂ ಉಚಿತ ಶಿಕ್ಷಣ ಮತ್ತಿತರ 96 ಪುಟಗಳ ಪ್ರಣಾಳಿಕೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಪಕ್ಷದ ರಾಜ್ಯಾಧ್ಯಕ್ಷ ವಿಡಿ ಶರ್ಮಾ, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾಣ್ ಇಂದು ಬಿಡುಗಡೆ ಮಾಡಿದರು.
ಲಾಡ್ಲಿ ಬಹನಾ ಯೋಜನೆಯ ಫಲಾನುಭವಿಗಳಿಗೆ ಮನೆ ಮತ್ತು ಪ್ರತಿ ಕುಟುಂಬದ ಒಬ್ಬ ಸದಸ್ಯರಿಗೆ ಉದ್ಯೋಗ ಅಥವಾ ಸ್ವಯಂ ಉದ್ಯೋಗ ಒದಗಿಸಲಾಗುವುದು ಎಂದು ಭರವಸೆ ನೀಡಲಾಗಿದೆ. ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಐಐಟಿ ಮತ್ತು ಏಮ್ಸ್ ರೀತಿಯ ಸಂಸ್ಥೆಗಳನ್ನು ಸ್ಥಾಪಿಸಲಾಗುವುದು, ಆರು ಹೊಸ ಹೆದ್ದಾರಿ ನಿರ್ಮಾಣ ಮಾಡಲಾಗುವುದು, ಮತ್ತು ಬುಡಕಟ್ಟು ಸಮುದಾಯಗಳ ಸಬಲೀಕರಣಕ್ಕಾಗಿ 3 ಲಕ್ಷ ಕೋಟಿ ರೂ. ಹಣ ಮೀಸಲಿಡಲಾಗುವುದು ಎಂದು ಬಿಜೆಪಿ ಹೇಳಿದೆ.
ಬಿಜೆಪಿಯು ತನ್ನ ಪ್ರಣಾಳಿಕೆಯನ್ನು ಸರ್ಕಾರದ ಮಾರ್ಗಸೂಚಿಯನ್ನಾಗಿ ಮಾಡುವ ಮೂಲಕ ಉತ್ಸುಕತೆಯಿಂದ ಜಾರಿಗೆ ತಂದ ಏಕೈಕ ರಾಜಕೀಯ ಪಕ್ಷವಾಗಿದೆ. ಬಿಜೆಪಿ ತನ್ನ ನಿಗಾ ವ್ಯವಸ್ಥೆಯ ಮೂಲಕ ಪ್ರಣಾಳಿಕೆ ಅನುಷ್ಠಾನದ ಮೇಲೆಯೂ ಕಣ್ಣಿಟ್ಟಿದೆ ಎಂದು ಜೆ.ಪಿ. ನಡ್ಡಾ ಹೇಳಿದರು.
Advertisement