ಹೈದರಾಬಾದ್: ತೆಲಂಗಾಣದಲ್ಲಿ ಚುನಾವಣಾ ಪ್ರಚಾರಕ್ಕಾಗಿ ಹಣ ಸಂಗ್ರಹಿಸಲು ಕರ್ನಾಟಕದ ಜನರಿಂದ ಹಣ ಲೂಟಿ ಮಾಡಲಾಗುತ್ತಿದೆ. ಕಾಂಗ್ರೆಸ್ ಸರ್ಕಾರವು ಕರ್ನಾಟಕದ ಜನರ ಮೇಲೆ ಹೆಚ್ಚಿನ ತೆರಿಗೆ ವಿಧಿಸುತ್ತಿದೆ ಎಂದು ತೆಲಂಗಾಣ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಹೈದರಾಬಾದ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಿಶನ್ ರೆಡ್ಡಿ, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಂತಹ ಹಲವು ಹಿರಿಯ ನಾಯಕರು ತೆಲಂಗಾಣದಲ್ಲಿ ಕಾಂಗ್ರೆಸ್ ಪರ ವ್ಯಾಪಕ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ಚುನಾವಣಾ ಪ್ರಚಾರಕ್ಕಾಗಿ ಕರ್ನಾಟಕದಲ್ಲಿ ತೆರಿಗೆ ಮೂಲಕ ಹಣ ಸಂಗ್ರಹಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ಪಕ್ಷವು ಕರ್ನಾಟಕದಲ್ಲಿ 5 ಗ್ಯಾರಂಟಿಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದಿತು. ಆದರೆ ಕೊಟ್ಟ ಮಾತಿನಂತೆ ಭರವಸೆಗಳನ್ನು ಈಡೇರಿಸುತ್ತಿಲ್ಲ. ಕರ್ನಾಟಕದಲ್ಲಿರುವ ಪ್ರತಿಯೊಂದು ವರ್ಗದ ಜನರೂ ಕೂಡ ಕಾಂಗ್ರೆಸ್ಗೆ ವಿರುದ್ಧವಾಗಿದ್ದಾರೆ.
ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಆದೇಶದಂತೆ ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ತೊಡಗಿದ್ದು, ತೆಲಂಗಾಣ, ಛತ್ತಿಸ್ಗಢ ಮತ್ತು ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರಕ್ಕಾಗಿ ಕರ್ನಾಟಕದಲ್ಲಿ ತೆರಿಗೆ ಮೂಲಕ ಹಣ ಸಂಗ್ರಹಿಸುತ್ತಿದೆ ಎಂದು ಆರೋಪಿಸಿದ್ದಾರೆ.
ನಾವು ಬಿಆರ್ಎಸ್ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಕುರಿತು ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಸಮಿತಿ ನಿಯೋಜಿಸುತ್ತೇವೆ. ಕೆಸಿಆರ್ ಕುಟುಂಬ ಮತ್ತು ಬಿಆರ್ಎಸ್ ಶಾಸಕರು ಸೇರಿದಂತೆ ಯಾರನ್ನೂ ಈ ವಿಚಾರಣೆಯಿಂದ ಬಿಡುವುದಿಲ್ಲ ಎಂದು ಗುಡುಗಿದ್ದಾರೆ.
ಅಲ್ಲದೇ ನಮ್ಮ ಪ್ರಣಾಳಿಕೆಯಲ್ಲಿ ನಾವು ಏನು ಹೇಳುತ್ತೇವೆಯೋ ಅದನ್ನೇ ಮಾಡುತ್ತೇವೆ, ಇದು ನಮ್ಮ ಟ್ರ್ಯಾಕ್ ರೆಕಾರ್ಡ್. ಲೋಕಸಭೆ ಚುನಾವಣೆಯಲ್ಲಿ ಬಹುಮತದ ಸರ್ಕಾರ ಸ್ಥಾಪನೆಯಾಗಿದ್ದರಿಂದ ಸಂವಿಧಾನದ 370ನೇ ವಿಧಿಯನ್ನು ತೆಗೆದುಹಾಕಿದ್ದೇವೆ. ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಗುರಿ ನಮ್ಮದು.
ಆದ್ರೆ ಕಾಂಗ್ರೆಸ್ ಮತ್ತು ತೆಲಂಗಾಣದ ಬಿಆರ್ಎಸ್ ಭ್ರಷ್ಟಾಚಾರದಲ್ಲೇ ತೊಡಗಿದೆ. ಮರಳು ಮಾಫಿಯಾ, ಭೂಮಾಫಿಯಾ, ಗಣಿ ಮಾಫಿಯಾ, ಇತರ ಹಗರಣಗಳನ್ನು ಮಾಡುತ್ತಲೇ ಇದೆ. ಭ್ರಷ್ಟಾಚಾರವನ್ನು ಪೋಷಿಸಿ ತೆಲಂಗಾಣವನ್ನು ಲೂಟಿ ಮಾಡಿದೆ. ಇದರಿಂದ ಬೇಸತ್ತಿರುವ ಜನ ಮೋದಿ ಸರ್ಕಾರವೇ ಬೇಕೆಂದು ಬಯಸುತ್ತಿದ್ದಾರೆ.
ನವೆಂಬರ್ 18 ರಂದು ತೆಲಂಗಾಣದಲ್ಲಿ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ಬಿಜೆಪಿಯು ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರನ್ನು ಪದಚ್ಯುತಗೊಳಿಸುವಂತೆ ಆಡಳಿತಾರೂಢ ಬಿಆರ್ಎಸ್ ವಿರುದ್ಧ ವಾಗ್ದಾಳಿ ನಡೆಸಿದೆ.
Advertisement