ತಮಿಳುನಾಡಿನಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 9 ಮಂದಿ ಸಾವು, ಐವರಿಗೆ ಗಂಭೀರ ಗಾಯ

ತಮಿಳುನಾಡಿನ ಅರಿಯಲೂರು ಜಿಲ್ಲೆಯ ವಿರಾಗಲೂರಿನಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 9ಮಂದಿ ಮೃತಪಟ್ಟು ಐವರು ಗಂಭೀರ ಗಾಯಗೊಂಡಿದ್ದಾರೆ.
ತಮಿಳುನಾಡು ಪಟಾಕಿ ಕಾರ್ಖಾನೆ ಸ್ಫೋಟ
ತಮಿಳುನಾಡು ಪಟಾಕಿ ಕಾರ್ಖಾನೆ ಸ್ಫೋಟ

ಚೆನ್ನೈ: ತಮಿಳುನಾಡಿನ ಅರಿಯಲೂರು ಜಿಲ್ಲೆಯ ವಿರಾಗಲೂರಿನಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 9ಮಂದಿ ಮೃತಪಟ್ಟು ಐವರು ಗಂಭೀರ ಗಾಯಗೊಂಡಿದ್ದಾರೆ.

ಸೋಮವಾರ ಬೆಳಗ್ಗೆ ಹಠಾತ್ ಬೆಂಕಿ ಕಾಣಿಸಿಕೊಂಡಿತ್ತು. ಪರಿಣಾಮ ಕ್ಷಣಾರ್ಧದಲ್ಲಿ ಪಟಾಕಿ ತಯಾರಿಕಾ ಘಟಕ ಸುಟ್ಟು ಕರಕಲಾಗಿದೆ. ಘಟಕದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರು ಸೇರಿದಂತೆ ಒಟ್ಟು 9 ಮಂದಿ ಜೀವ ಕಳೆದುಕೊಂಡಿದ್ದಾರೆ.

ಪಟಾಕಿ ತಯಾರಿಕಾ ಘಟಕದಲ್ಲಿ ಸುಮಾರು 30 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಅರಿಯಲೂರು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳ ಹರಸಾಹಸ ಪಟ್ಟಿತ್ತು. ಘಟಕದ ಸಮೀಪ ಹೋಗಲು ಆಗದಷ್ಟು ಬೆಂಕಿ ತೀವ್ರತೆ ಇತ್ತು. ಜತೆಗೆ ಪಟಾಕಿ ಸಿಡಿತದಿಂದ ಹತ್ತಿರ ಹೋಗಲು ಸಾಧ್ಯವಾಗಲಿಲ್ಲ. ಇನ್ನು ಈ ಅವಘಡಲ್ಲಿ 8ಕ್ಕೂ ಹೆಚ್ಚು ಬೈಕ್‌ಗಳಿಗೆ ಹಾನಿಯಾಗಿವೆ.

ಅರಿಯಲೂರು ಮತ್ತು ನೆರೆಯ ಪೆರಂಬಲೂರು ಜಿಲ್ಲೆಗಳಿಂದ ಅಗ್ನಿಶಾಮಕ ದಳದ ತಂಡಗಳು ಘಟನಾ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಈಗಾಗಲೇ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಒಂಬತ್ತು ಜನರ ಸಾವಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಅವರ ಕುಟುಂಬಗಳಿಗೆ ಪರಿಹಾರ ಘೋಷಿಸಿದ್ದಾರೆ.

ಗಾಯಗೊಂಡಿರುವ ಐವರನ್ನು ತಂಜಾವೂರು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವಿಶೇಷ ವೈದ್ಯಕೀಯ ಚಿಕಿತ್ಸೆ ನೀಡಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ. ರಕ್ಷಣಾ ಮತ್ತು ಪರಿಹಾರ ಚಟುವಟಿಕೆಗಳನ್ನು ತ್ವರಿತಗೊಳಿಸಲು ತನ್ನ ಸಂಪುಟದ ಸಹೋದ್ಯೋಗಿಗಳಾದ ಎಸ್ ಎಸ್ ಶಿವಶಂಕರ್ ಮತ್ತು ಸಿವಿ ಗಣೇಶನ್ ಅವರನ್ನು ನಿಯೋಜಿಸಿರುವುದಾಗಿ ಸ್ಟಾಲಿನ್ ಹೇಳಿದ್ದಾರೆ.

ಮೃತರ ಕುಟುಂಬಗಳಿಗೆ ತಲಾ 3 ಲಕ್ಷ ರೂ. ಗಂಭೀರವಾಗಿ ಗಾಯಗೊಂಡವರಿಗೆ ಒಂದು ಲಕ್ಷ ರೂ.ಸರಳವಾಗಿ ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರ ಘೋಷಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com