ಆಂಧ್ರ ಪ್ರದೇಶ ರೈಲು ದುರಂತ: ಮೃತರ ಸಂಖ್ಯೆ 13ಕ್ಕೆ ಏರಿಕೆ, ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ

ಆಂಧ್ರ ಪ್ರದೇಶದ ವಿಜಿನಗರಂ ಜಿಲ್ಲೆಯಲ್ಲಿ ನಿನ್ನೆ ಎರಡು ರೈಲುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 
ಎರಡು ರೈಲುಗಳ ನಡುವಿನ ಅಪಘಾತ
ಎರಡು ರೈಲುಗಳ ನಡುವಿನ ಅಪಘಾತ

ವಿಶಾಖಪಟ್ಟಣಂ: ಆಂಧ್ರ ಪ್ರದೇಶದ ವಿಜಿನಗರಂ ಜಿಲ್ಲೆಯಲ್ಲಿ ನಿನ್ನೆ ಎರಡು ರೈಲುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 

ನಿನ್ನೆ ಸಂಜೆ 7 ಗಂಟೆ ವೇಳೆಗೆ ವಿಶಾಖಪಟ್ಟಣಂ-ಪಲಸಾ ವಿಶೇಷ ಪ್ಯಾಸೆಂಜರ್ ರೈಲು, ತಾಂತ್ರಿಕ ದೋಷದಿಂದಾಗಿ ಸಿಗ್ನಲ್ ಗೆ ಕಾಯುತ್ತಿದ್ದಾಗ ವಿಶಾಖಪಟ್ಟಣಂ-ರಾಯಗಢ ಪ್ಯಾಸೆಂಜರ್ ರೈಲು ಹಿಂದಿನಿಂದ ಢಿಕ್ಕಿ ಹೊಡೆದಿದೆ. ಪರಿಣಾಮ ಮೂರು ಬೋಗಿಗಳು ಹಳಿತಪ್ಪಿವೆ. 

ಅಪಘಾತದಲ್ಲಿ 3 ಬೋಗಿಗಳು ಜಖಂಗೊಂಡಿವೆ ಎಂದು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಸ್ಥಳೀಯ ಆಡಳಿತ, ಎನ್‌ಡಿಆರ್‌ಎಫ್ ಹಳಿ ತಪ್ಪಿರುವ ಬೋಗಿಗಳ ತೆರವು ಕಾರ್ಯಾಚರಣೆಯಲ್ಲಿ ನಿರತವಾಗಿವೆ. ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ತಿಳಿಸಿದ್ದಾರೆ. ಮಾನವ ದೋಷದಿಂದಾಗಿ ವಿಜಯನಗರಂ ಜಿಲ್ಲೆಯಲ್ಲಿ ಎರಡು ರೈಲುಗಳು ಡಿಕ್ಕಿಯಾಗಿರಬಹುದು ಎಂದು ಈಸ್ಟ್ ಕೋಸ್ಟ್ ರೈಲ್ವೇ ಹೇಳಿದೆ.

ಅಪಘಾತದಲ್ಲಿ ಮೃತಪಟ್ಟ ಕುಟುಂಬ ಸದಸ್ಯರಿಗೆ 10 ಲಕ್ಷ ರೂಪಾಯಿ ಹಾಗೂ  ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂಪಾಯಿ ಪರಿಹಾರವನ್ನು ಸರ್ಕಾರ ನೀಡಲಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಅವರ ಕಚೇರಿ ತಿಳಿಸಿದೆ. ಬೇರೆ ರಾಜ್ಯಗಳ ಜನರು ಸಾವನ್ನಪ್ಪಿದರೆ, ದುಃಖಿತ ಕುಟುಂಬಗಳಿಗೆ ತಲಾ ರೂ. 2 ಲಕ್ಷ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ  ರೂ. 50,000 ಪರಿಹಾರವನ್ನು ನೀಡಲಾಗುತ್ತದೆ ಎಂದು ಸಿಎಂಒ ಕಚೇರಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

ತಕ್ಷಣದ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಮತ್ತು ವಿಜಯನಗರದ ಹತ್ತಿರದ ಜಿಲ್ಲೆಗಳಾದ ವಿಶಾಖಪಟ್ಟಣಂ ಮತ್ತು ಅನಕಾಪಲ್ಲಿಯಿಂದ ಸಾಧ್ಯವಾದಷ್ಟು ಆಂಬ್ಯುಲೆನ್ಸ್‌ಗಳನ್ನು ಕಳುಹಿಸಲು ಮತ್ತು ಉತ್ತಮ ವೈದ್ಯಕೀಯ ಸೇವೆಯನ್ನು ಒದಗಿಸಲು ಹತ್ತಿರದ ಆಸ್ಪತ್ರೆಗಳಲ್ಲಿ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಲು ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಆದೇಶಿಸಿದ್ದಾರೆ.

ಪ್ರಧಾನಮಂತ್ರಿ ಕೂಡಾ ಪರಿಹಾರ ಘೋಷಿಸಿದ್ದು, ಪ್ರಧಾನಮಂತ್ರಿ ವಿಪತ್ತು ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ರೂ. 2 ಲಕ್ಷ ಹಾಗೂ ಗಾಯಾಳುಗಳಿಗೆ ರೂ. 50,000 ನೀಡುವುದಾಗಿ ಘೋಷಿಸಿದ್ದಾರೆ. ರೈಲ್ವೆಯು ವಿವಿಧ ಸಹಾಯವಾಣಿ ಸಂಖ್ಯೆಗಳನ್ನು ಸಹ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com