ಅಬಕಾರಿ ನೀತಿ ಹಗರಣ: ವಿಚಾರಣೆಗೆ ಹಾಜರಾಗುವಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಇ.ಡಿ ಸಮನ್ಸ್
ನವದೆಹಲಿ: ಸಿಬಿಐ ವಿಚಾರಣೆಗೊಳಪಡಿಸಿದ ಏಳು ತಿಂಗಳ ನಂತರ, ಜಾರಿ ನಿರ್ದೇಶನಾಲಯವು (ಇ.ಡಿ) ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ತನಿಖೆಗೆ ಗುರುವಾರ ತನ್ನ ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ಕೇಳಿದೆ.
ಮಾಜಿ ಉಪಮುಖ್ಯಮಂತ್ರಿ ಮತ್ತು ಕೇಜ್ರಿವಾಲ್ ಅವರ ಆಪ್ತ ಮನೀಶ್ ಸಿಸೋಡಿಯಾ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನಿರಾಕರಿಸಿದ ಕೆಲವೇ ಗಂಟೆಗಳ ನಂತರ ಇಡಿ ಸಮನ್ಸ್ ನೀಡಿದೆ. ಈ ಪ್ರಕರಣದಲ್ಲಿ ಎಎಪಿ ರಾಜ್ಯಸಭೆ ಸದಸ್ಯ ಸಂಜಯ್ ಸಿಂಗ್ ಕೂಡ ಬಂಧನದಲ್ಲಿದ್ದಾರೆ.
ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಹೇಳಿಕೆ ದಾಖಲಿಸಿಕೊಳ್ಳಲು ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ಮುಖ್ಯಮಂತ್ರಿಗೆ ಸಮನ್ಸ್ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ತನಿಖಾ ಸಂಸ್ಥೆಯಿಂದ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸಮನ್ಸ್ ನೀಡಿರುವುದು ಇದೇ ಮೊದಲು.
ಸಮನ್ಸ್ಗೆ ಪ್ರತಿಕ್ರಿಯಿಸಿದ ದೆಹಲಿ ಸಚಿವ ಮತ್ತು ಹಿರಿಯ ನಾಯಕ ಸೌರಭ್ ಭಾರಧ್ವಾಜ್, ಕೇಂದ್ರ ಸರ್ಕಾರಕ್ಕೆ ಒಂದೇ ಒಂದು ಗುರಿ ಇದೆ ಮತ್ತು ಅದು ಹೇಗಾದರೂ ಎಎಪಿಯನ್ನು ಮುಗಿಸುವುದು ಎಂಬುದು ಸ್ಪಷ್ಟವಾಗುತ್ತಿದೆ. 'ಮುಖ್ಯಮಂತ್ರಿಗಳನ್ನು ಜೈಲಿಗೆ ಹಾಕಲು ಮತ್ತು ಎಎಪಿಯನ್ನು ಮುಗಿಸಲು ಅವರು ಸುಳ್ಳು ಪ್ರಕರಣ ಸೃಷ್ಟಿಸುವಲ್ಲಿ ಮುಂದಾಗಿದ್ದಾರೆ' ಎಂದು ಹೇಳಿದರು.
ಇ.ಡಿ ಪ್ರಶ್ನೆಗಳಿಗೆ ಸಿಎಂ ಉತ್ತರಿಸಬೇಕಾಗುತ್ತದೆ ಮತ್ತು ಅವರು ಆಮಿಷವೊಡ್ಡುವ ಹೇಳಿಕೆಗಳನ್ನು ನೀಡುವಂತಿಲ್ಲ ಎಂದು ದೆಹಲಿ ಬಿಜೆಪಿ ವಕ್ತಾರ ಹರೀಶ್ ಖುರಾನಾ ಹೇಳಿದ್ದಾರೆ. ಇದಕ್ಕೂ ಮುನ್ನ ಸಿಸೋಡಿಯಾಗೆ ಜಾಮೀನು ನಿರಾಕರಣೆ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಅವರ ರಾಜೀನಾಮೆಗೆ ಬಿಜೆಪಿ ಒತ್ತಾಯಿಸಿತ್ತು.
ಸಿಬಿಐ ಏಪ್ರಿಲ್ 16 ರಂದು ಕೇಜ್ರಿವಾಲ್ ಅವರನ್ನು 'ಸಾಕ್ಷಿ' ಎಂದು ಪರಿಗಣಿಸಿ ಸುಮಾರು ಒಂಬತ್ತು ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು. ಅಬಕಾರಿ ನೀತಿಯ ಕೆಲಸ ಹೇಗೆ ಪ್ರಾರಂಭವಾಯಿತು ಮತ್ತು ಇತರ ವಿಷಯಗಳು ಸೇರಿದಂತೆ 56 ಪ್ರಶ್ನೆಗಳನ್ನು ಕೇಳಿತ್ತು. ಈ ವರ್ಷದ ಫೆಬ್ರುವರಿ 26 ರಂದು ಸಿಸೋಡಿಯಾ ಅವರನ್ನು ಬಂಧಿಸಿದ್ದರೆ, ಸಂಜಯ್ ಸಿಂಗ್ ಅವರನ್ನು ಅಕ್ಟೋಬರ್ 4 ರಂದು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ