ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರಗಾಮಿಗಳ ವಿರುದ್ಧದ ಭಾರತೀಯ ಸೇನೆ ಕಾರ್ಯಾಚರಣೆ ಮುಂದುವರೆದಿದ್ದು, ಶುಕ್ರವಾರ ಉಗ್ರರ ಅಡಗುತಾಣ ಪತ್ತೆ ಮಾಡಿರುವ ಸೇನೆ ಇಬ್ಬರು ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದೆ.
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಇಬ್ಬರು ಭಯೋತ್ಪಾದಕ ಸಹಚರರನ್ನು ಬಂಧಿಸಿ ಅವರಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ. ಇಬ್ಬರೂ ಶಂಕಿತ ಉಗ್ರರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಸಂಘಟನೆಗೆ ಸೇರಿದವರು ಎಂದು ಹೇಳಲಾಗಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ವಕ್ತಾರರು, 'ಎಲ್ಇಟಿ ಸಂಘಟನೆಯ ಇಬ್ಬರು ಭಯೋತ್ಪಾದಕ ಸಹಚರರನ್ನು ಉತ್ತರ ಕಾಶ್ಮೀರದ ಬಾರಾಮುಲ್ಲಾದ ಉರಿ ಪ್ರದೇಶದಲ್ಲಿ ಬಂಧಿಸಲಾಗಿದೆ. ಬಂಧಿತ ಇಬ್ಬರನ್ನು ಮೀರ್ ಸಾಹಿಬ್ ಬಾರಾಮುಲ್ಲಾ ನಿವಾಸಿ ಝೈದ್ ಹಸನ್ ಮಲ್ಲಾ ಮತ್ತು ಬಾರಾಮುಲ್ಲಾ ಸ್ಟೇಡಿಯಂ ಕಾಲೋನಿಯ ಮೊಹಮ್ಮದ್ ಆರಿಫ್ ಚನ್ನಾ ಎಂದು ಗುರುತಿಸಲಾಗಿದೆ.
ಬಂಧಿತರಿಂದ ಎರಡು ಗ್ಲೋಕ್ ಪಿಸ್ತೂಲ್ಗಳು, ಎರಡು ಪಿಸ್ತೂಲ್ ಮ್ಯಾಗಜೀನ್ಗಳು, ಎರಡು ಪಿಸ್ತೂಲ್ ಸೈಲೆನ್ಸರ್ಗಳು, ಐದು ಚೈನೀಸ್ ಗ್ರೆನೇಡ್ಗಳು ಮತ್ತು 28 ಜೀವಂತ ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದ್ದಾರೆ.
"ಪಾಕಿಸ್ತಾನ ಮೂಲದ ಭಯೋತ್ಪಾದಕರ ಆಜ್ಞೆಯ ಮೇರೆಗೆ ಅವರು ಗಡಿಯಾಚೆಗಿನ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಕಳ್ಳಸಾಗಣೆಯಲ್ಲಿ ತೊಡಗಿದ್ದರು ಮತ್ತು ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಎಲ್ಇಟಿ ಭಯೋತ್ಪಾದಕರಿಗೆ ನೆರವು ನೀಡುತ್ತಿದ್ದರು. ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯಿದೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.
Advertisement