Cauvery water row: 'ಕಾವೇರಿ'ದ ವಿವಾದ; ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ಪ್ರಗತಿಯಲ್ಲಿ

ಕಾವೇರಿ ನದಿ ನೀರು ಹಂಚಿಕೆ ವಿವಾದದ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವರು ಮತ್ತು ಸರ್ವಪಕ್ಷಗಳ ಸಂಸದರೊಂದಿಗೆ ಇಂದು ಬುಧವಾರ ರಾಷ್ಟ್ರ ರಾಜಧಾನಿಯಲ್ಲಿ ಸಭೆ ನಡೆಯುತ್ತಿದೆ.
ಸಭೆಗೆ ಮುನ್ನ ರಾಜ್ಯ ನಾಯಕರ ಉಪಾಹಾರ ಕೂಟ
ಸಭೆಗೆ ಮುನ್ನ ರಾಜ್ಯ ನಾಯಕರ ಉಪಾಹಾರ ಕೂಟ
Updated on

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದದ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವರು ಮತ್ತು ಸರ್ವಪಕ್ಷಗಳ ಸಂಸದರೊಂದಿಗೆ ಇಂದು ಬುಧವಾರ ರಾಷ್ಟ್ರ ರಾಜಧಾನಿಯಲ್ಲಿ ಸಭೆ ನಡೆಯುತ್ತಿದೆ.

ಈ ನಿರ್ಣಾಯಕ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಶೋಭಾ ಕರಂದ್ಲಾಜೆ, ಭಗವಂತ ಖೂಬಾ, ನಾರಾಯಣಸ್ವಾಮಿ, ರಾಜೀವ್ ಚಂದ್ರಶೇಖರ್ ಮತ್ತು ಇತರ ಸುಪ್ರೀಂ ಕೋರ್ಟ್ ವಕೀಲರು ಭಾಗವಹಿಸುತ್ತಿದ್ದಾರೆ.

ರಾಜ್ಯ ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರು, ಶಾಸಕರು, ಸಚಿವರು ಮತ್ತು ಕಾನೂನು ತಂಡವನ್ನು ಪ್ರತಿನಿಧಿಸುವ ಕಾವೇರಿ ಜಲಾನಯನ ಸಭೆಯ ಭಾಗವಾಗಿದೆ.

ಸಭೆಯಲ್ಲಿ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಎದುರಾಗಿರುವ ಕ್ಲಿಷ್ಟಕರ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸುವ ನಿಟ್ಟಿನಲ್ಲಿ ರಾಜ್ಯದ ಹಿತಾಸಕ್ತಿ ಕಾಪಾಡಲು ಕೈಗೊಳ್ಳಬೇಕಾದ ಕ್ರಮಗಳು ಮತ್ತು ನಿರ್ಧಾರಗಳ ಕುರಿತು ಚರ್ಚಿಸಲಾಗುತ್ತಿದೆ. 

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಕರ್ನಾಟಕಕ್ಕೆ ಸೆಪ್ಟೆಂಬರ್ 26 ರವರೆಗೆ 5,000 ಕ್ಯೂಸೆಕ್ ಕಾವೇರಿ ನೀರನ್ನು ಬಿಡುಗಡೆ ಮಾಡುವಂತೆ ಸೂಚಿಸಿದ ನಂತರ ಸಮ್ಮೇಳನ ನಡೆಯಿತು.

ಕರ್ನಾಟಕವು ನೀರಿನ ಬಿಡುಗಡೆಯನ್ನು ಪ್ರಾರಂಭಿಸಿದೆ. ಆದರೆ ರಾಜ್ಯದ ಕೆಲವು ಭಾಗಗಳಲ್ಲಿ ತೀವ್ರ ಬರ ಉಂಟಾಗಿರುವುದರಿಂದ ಅಗತ್ಯವಿರುವ ನೀರು ಬಿಡುಗಡೆ ಪ್ರಮಾಣವನ್ನು ಕಡಿಮೆ ಮಾಡಲು CWMA ಗೆ ಸವಾಲು ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ.

ಇದಕ್ಕೂ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿ ಕೆ ಶಿವಕುಮಾರ್, ಕಾವೇರಿ ನೀರು ವಿವಾದದಲ್ಲಿ ಮಧ್ಯೆ ಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕೆಂದು ನಾನು ಪ್ರಧಾನಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ಸಮಯ ಕೇಳಿದ್ದೇನೆ. ಇಂದಿನ ಸಭೆಯಲ್ಲಿ ಎಲ್ಲಾ ಸಂಸದರು, ಕೇಂದ್ರ ಸಚಿವರು ಭಾಗವಹಿಸುತ್ತಿದ್ದಾರೆ. ಪಕ್ಷಬೇಧ ಮರೆತು ಸಹಕಾರ ನೀಡುತ್ತಿದ್ದಾರೆ. ಕೇಂದ್ರ ಜಲ ಶಕ್ತಿ ಸಚಿವರನ್ನು ಭೇಟಿ ಮಾಡಿದ್ದೇನೆ. ನಾವು ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಲಿದ್ದೇವೆ ಎಂದು ಡಿ ಕೆ ಶಿವಕುಮಾರ್ ಹೇಳಿದರು.

ರಾಜಕೀಯ ಮಾಡುವುದು ಬೇಡ: ಸಭೆ ಬಳಿಕ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಕರ್ನಾಟಕದ ಹಿತಕಾಪಾಡುವಲ್ಲಿ ನಮ್ಮ ಬದ್ಧತೆ ಇದೆ. ಮೊದಲು ನೀರು ಹರಿಸಿ ಈಗ ಸಭೆ ಮಾಡುವುದು. ಮೈತ್ರಿ ಗಟ್ಟಿಗೊಳಿಸಲು ನೀರು ಹರಿಸಲಾಗಿದೆ. ಈಗ ಕೇಂದ್ರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಆಗಬಾರದು ಎಂದು ಹೇಳಿದ್ದೇನೆ. ನೀವು ಮೊದಲು ನೀರು ಹರಿಸುವಾಗ ಯಾರನ್ನು ಕೇಳಿದ್ರಿ? ಆಗ ನಿಮಗೆ ಸಂಸದರ ನೆನಪು ಆಗಲಿಲ್ವಾ‌? ಈ ವಿಷಯದಲ್ಲಿ ರಾಜಕೀಯ ಮಾಡಬೇಡಿ ಅಂತ ಸರ್ಕಾರಕ್ಕೆ ಹೇಳಿದ್ದೇನೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com