ಹೆಚ್ಚಿನ ಹಣ ನೀಡಲು ನಿರಾಕರಿಸಿದ ದಲಿತ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ; ಬಾಯಿಗೆ ಮೂತ್ರ ವಿಸರ್ಜನೆ!

ಬಿಹಾರದ ಪಾಟ್ನಾ ಜಿಲ್ಲೆಯಲ್ಲಿ ಸಾಲದಾತ ಮತ್ತು ಆತನ ಸಹಚರರು ದಲಿತ ಮಹಿಳೆಯೊಬ್ಬರನ್ನು ವಿವಸ್ತಗೊಳಿಸಿ, ಹಲ್ಲೆ ನಡೆಸಿ ಮತ್ತು ಬಾಯಿಗೆ ಮೂತ್ರ ವಿಸರ್ಜನೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಪ್ರಮುಖ ಆರೋಪಿಗಳಾದ ಪ್ರಮೋದ್ ಸಿಂಗ್ ಮತ್ತು ಆತನ ಪುತ್ರ ಅಂಶು ಸಿಂಗ್ ತಲೆಮರೆಸಿಕೊಂಡಿದ್ದು, ಅವರನ್ನು ಬಂಧಿಸಲು ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಪಾಟ್ನಾ: ಬಿಹಾರದ ಪಾಟ್ನಾ ಜಿಲ್ಲೆಯಲ್ಲಿ ಸಾಲದಾತ ಮತ್ತು ಆತನ ಸಹಚರರು ದಲಿತ ಮಹಿಳೆಯೊಬ್ಬರನ್ನು ವಿವಸ್ತಗೊಳಿಸಿ, ಹಲ್ಲೆ ನಡೆಸಿ ಮತ್ತು ಬಾಯಿಗೆ ಮೂತ್ರ ವಿಸರ್ಜನೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಸಾಲವನ್ನು ಸಂಪೂರ್ಣ ಮರುಪಾವತಿ ಮಾಡಿದ್ದರೂ ಹೆಚ್ಚಿನ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರ ವಿರುದ್ಧ ಪೊಲೀಸರಿಗೆ ದೂರು ನೀಡಿದ ಬಳಿಕ ಕೃತ್ಯ ಎಸಗಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಪ್ರಮುಖ ಆರೋಪಿಗಳಾದ ಪ್ರಮೋದ್ ಸಿಂಗ್ ಮತ್ತು ಆತನ ಪುತ್ರ ಅಂಶು ಸಿಂಗ್ ತಲೆಮರೆಸಿಕೊಂಡಿದ್ದು, ಅವರನ್ನು ಬಂಧಿಸಲು ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹಲ್ಲೆಯಿಂದ ಗಾಯಗೊಂಡಿರುವ ಸಂತ್ರಸ್ತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾಲ ಪಡೆದಿದ್ದ ಹಣವನ್ನು ಬಡ್ಡಿ ಸಮೇತ ಹಿಂದಿರುಗಿಸಿದ್ದರೂ ಈ ಹಿಂಸೆಯನ್ನು ಅನುಭವಿಸಬೇಕಾಯಿತು ಎಂದು ದೂರಿದ್ದಾರೆ.

ನನ್ನ ಪತಿ ಕೆಲವು ತಿಂಗಳ ಹಿಂದೆ ಪ್ರಮೋದ್ ಸಿಂಗ್ ಅವರಿಂದ 1,500 ರೂ. ಗಳನ್ನು ಸಾಲವಾಗಿ ಪಡೆದಿದ್ದರು ಮತ್ತು ಆ ಹಣವನ್ನು ಬಡ್ಡಿಯೊಂದಿಗೆ ಹಿಂದಿರುಗಿಸಿದ್ದರು. ಆದಾಗ್ಯೂ, ಅವರು ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟರು. ನಾವು ಆ ಬೇಡಿಕೆಯನ್ನು ತಿರಸ್ಕರಿಸಿದ್ದೆವು ಎಂದು ಮಹಿಳೆ ಹೇಳಿದ್ದಾರೆ.

ಪಾಟ್ನಾದ ಖುಸ್ರುಪುರ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯಲ್ಲಿ ಶನಿವಾರ ರಾತ್ರಿ ಈ ಘಟನೆ ನಡೆದಿದೆ.

ಹಣ ನೀಡದಿದ್ದರೆ ಗ್ರಾಮದಲ್ಲಿ ಬೆತ್ತಲೆ ಮೆರವಣಿಗೆ ಮಾಡುವುದಾಗಿ ಪ್ರಮೋದ್ ಸಿಂಗ್ ಫೋನ್ ಮೂಲಕ ಸಂತ್ರಸ್ತೆಗೆ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಆಕೆ ಪೊಲೀಸರಿಗೆ ದೂರು ನೀಡಿದ್ದಾರೆ.

ಸಂತ್ರಸ್ತೆಯ ಕುಟುಂಬದ ಸದಸ್ಯರೊಬ್ಬರು ಸುದ್ದಿಗಾರರೊಂದಿಗೆ ಮಾತನಾಡಿ, 'ದೂರಿನ ಬಗ್ಗೆ ವಿಚಾರಣೆ ನಡೆಸಲು ಪೊಲೀಸ್ ತಂಡ ಶನಿವಾರ ಗ್ರಾಮಕ್ಕೆ ಭೇಟಿ ನೀಡಿದ್ದು, ಇದು ಪ್ರಮೋದ್ ಮತ್ತು ಅವರ ಸಹಚರರನ್ನು ಕೆರಳಿಸಿತು. ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ಆಕೆಯ ಮನೆಗೆ ನುಗ್ಗಿದ ಅವರು ಆಕೆಯನ್ನು ಬಲವಂತವಾಗಿ ಪ್ರಮೋದ್ ಮನೆಗೆ ಕರೆದೊಯ್ದಿದ್ದಾರೆ. ಅಲ್ಲಿ ಆಕೆಯನ್ನು ವಿವಸ್ತ್ರಗೊಳಿಸಿ ಥಳಿಸಿದ್ದಾರೆ' ಎಂದು ತಿಳಿಸಿದರು.

'ನನ್ನ ಬಾಯಿಗೆ ಮೂತ್ರ ವಿಸರ್ಜನೆ ಮಾಡುವಂತೆ ಪ್ರಮೋದ್, ಆತನ ಮಗನಿಗೆ ಹೇಳಿದನು. ಅದರಂತೆ ಆತ ಮೂತ್ರ ವಿಸರ್ಜನೆ ಮಾಡಿದನು. ಬಳಿಕ ನಾನು ಹೇಗೋ ಅಲ್ಲಿಂದ ತಪ್ಪಿಸಿಕೊಂಡು ಮನೆಗೆ ಮರಳಿದೆ' ಎಂದು ಮಹಿಳೆ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹಿರಿಯ ಪೊಲೀಸ್ ಅಧೀಕ್ಷಕ (ಪಾಟ್ನಾ) ರಾಜೀವ್ ಮಿಶ್ರಾ ಮಾತನಾಡಿ, ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸಲು ಶೋಧ ಕಾರ್ಯ ಆರಂಭಿಸಲಾಗಿದೆ. ನಾವು ಐದು ಪೊಲೀಸ್ ತಂಡಗಳನ್ನು ರಚಿಸಿದ್ದೇವೆ ಮತ್ತು ಶೋಧ ನಡೆಸಲಾಗುತ್ತಿದೆ. ಈ ಬಗ್ಗೆ ಈಗಾಗಲೇ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com