ಹೌರಾ ಘರ್ಷಣೆ: ವರದಿ ಸಲ್ಲಿಕೆಗೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಹೈಕೋರ್ಟ್ ಆದೇಶ

ಹೌರಾದ ಶಿಬ್‌ಪುರದಲ್ಲಿ ಮಾರ್ಚ್ 30 ರಂದು ರಾಮನವಮಿ ಮೆರವಣಿಗೆ ಹಾಗೂ ತದನಂತರ ನಡೆದ ಹಿಂಸಾಚಾರದ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ಕಲ್ಕತ್ತಾ ಹೈಕೋರ್ಟ್ ಸೋಮವಾರ ಪಶ್ಚಿಮ ಬಂಗಾಳ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಕಲ್ಕತ್ತಾ: ಹೌರಾದ ಶಿಬ್‌ಪುರದಲ್ಲಿ ಮಾರ್ಚ್ 30 ರಂದು ರಾಮನವಮಿ ಮೆರವಣಿಗೆ ಹಾಗೂ ತದನಂತರ ನಡೆದ ಹಿಂಸಾಚಾರದ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ಕಲ್ಕತ್ತಾ ಹೈಕೋರ್ಟ್ ಸೋಮವಾರ ಪಶ್ಚಿಮ ಬಂಗಾಳ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಹಿಂಸಾಚಾರದಲ್ಲಿ ಬಾಂಬ್‌ಗಳನ್ನು ಎಸೆಯಲಾಗಿದೆ ಎಂದು ಆರೋಪಿಸಿರುವ ಪಶ್ಚಿಮ ಬಂಗಾಳ ವಿಪಕ್ಷ ನಾಯಕ ಸುವೇಂದು ಅಧಿಕಾರಿ, ಈ ಕುರಿತು ಎನ್‌ಐಎ ತನಿಖೆ ಕೋರಿ ಪಿಐಎಲ್ ಸಲ್ಲಿಸಿದರು ಮತ್ತು ಆ ಪ್ರದೇಶದಲ್ಲಿ ಭದ್ರತೆ ಖಚಿತತೆಗೆ ಕೇಂದ್ರೀಯ ಪಡೆಗಳನ್ನು ನಿಯೋಜಿಸುವಂತೆ ಮನವಿ ಮಾಡಿದ್ದಾರೆ.

ರಾಜ್ಯ ಸರ್ಕಾರದ ಪರ ವಾದಿಸಿದ ಅಡ್ವೊಕೇಟ್ ಜನರಲ್ ಎಸ್‌ಎನ್ ಮುಖರ್ಜಿ ಶಿಬ್‌ಪುರದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಹೇಳಿದರು. ರಾಮನವಮಿ ನಂತರ ಸಂಭವಿಸಿದ ಘಟನೆ ಮತ್ತು ಹೌರಾ ಸುತ್ತಮುತ್ತಲಿನ ಪ್ರದೇಶದಲ್ಲಿ ಶಾಂತಿ ಕಾಪಾಡಲು ಕೈಗೊಂಡ ಕ್ರಮಗಳ ಬಗ್ಗೆ ಸಮಗ್ರ ವರದಿಯನ್ನು ಏಪ್ರಿಲ್ 5 ರಂದು ಸಲ್ಲಿಸುವಂತೆ  ಹಂಗಾಮಿ ಮುಖ್ಯ ನ್ಯಾಯಮೂರ್ತಿ ಟಿ.ಎಸ್.ಶಿವಜ್ಞಾನಂ ನೇತೃತ್ವದ ವಿಭಾಗೀಯ ಪೀಠ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ನ್ಯಾಯಮೂರ್ತಿ ಹಿರಣ್ಮಯ್ ಭಟ್ಟಾಚಾರ್ಯ ಅವರನ್ನೊಳಗೊಂಡ ನ್ಯಾಯಪೀಠ, ಹಿಂಸಾಚಾರದ ಘಟನೆಗಳಿಗೆ ಸಂಬಂಧಿಸಿದ ಸಿಸಿಟಿವಿ ಮತ್ತು ವಿಡಿಯೋ ದೃಶ್ಯಾವಳಿಗಳನ್ನು ಸಲ್ಲಿಸುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸೂಚಿಸಿದೆ. ಪ್ರದೇಶದ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಮತ್ತು ಶಾಲೆಗೆ ಹೋಗುವ ಮಕ್ಕಳು ಮತ್ತು ವ್ಯಾಪಾರಗಳನ್ನು ರಕ್ಷಿಸಲು ನ್ಯಾಯಾಲಯವು ಪೊಲೀಸರಿಗೆ ನಿರ್ದೇಶನ ನೀಡಿದೆ.

 ಅಗತ್ಯಕ್ಕೆ ತಕ್ಕಂತೆ ಸೂಕ್ತ ನಿಯೋಜನೆ ಮಾಡುವಂತೆ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ. ಏಪ್ರಿಲ್ 6 ರಂದು ಮತ್ತೆ ಅರ್ಜಿ ವಿಚಾರಣೆಗೆ ಬರಲಿದೆ ಎಂದು ಪೀಠ ಹೇಳಿದೆ. ಮಾರ್ಚ್ 30 ಮತ್ತು ತದನಂತರ ನಡೆದ ಎರಡು ಗುಂಪುಗಳ ನಡುವಿನ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 36 ಜನರನ್ನು ಬಂಧಿಸಲಾಗಿದೆ ಎಂದು ಎಜಿ ನ್ಯಾಯಾಲಯಕ್ಕೆ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com