ನವದೆಹಲಿ: ಕೇಂದ್ರ ಸಚಿವ ಜ್ಯೋತಿರಾದಿತ್ಯ ಎಂ ಸಿಂಧಿಯಾ ಅವರಿಗೆ ಕೊರೊನಾವೈರಸ್ ಸೋಂಕು ದೃಢಪಟ್ಟಿದೆ.
ಉಕ್ಕು ಮತ್ತು ನಾಗರಿಕ ವಿಮಾನಯಾನ ಸಚಿವರು ಈ ಮಾಹಿತಿಯನ್ನು ಟ್ವಿಟರ್ ಮೂಲಕ ಹಂಚಿಕೊಂಡಿದ್ದಾರೆ.
ಸೋಮವಾರ ಟ್ವೀಟ್ ಮಾಡಿರುವ ಅವರು, 'ತಮ್ಮ ಕೋವಿಡ್ ವರದಿ ಪಾಸಿಟಿವ್ ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದವರು ಮುನ್ನೆಚ್ಚರಿಕೆ ವಹಿಸಿ ಮತ್ತು ಅಂತವರು ಕೋವಿಡ್ ಪರೀಕ್ಷೆಯನ್ನು ಮಾಡಿಸಿಕೊಳ್ಳುವಂತೆ ನಾನು ವಿನಂತಿಸುತ್ತೇನೆ' ಎಂದು ಅವರು ಹೇಳಿದ್ದಾರೆ.
ಮಂಗಳವಾರ ಮುಂಬೈನಲ್ಲಿ ನಡೆದ 'ಇಂಡಿಯಾ ಸ್ಟೀಲ್ 2023' ಕಾರ್ಯಕ್ರಮಕ್ಕೆ ಸಿಂಧಿಯಾ ಹಾಜರಾಗಿರಲಿಲ್ಲ.
ಈ ಕಾರ್ಯಕ್ರಮದಲ್ಲಿ ಉಕ್ಕಿನ ಉದ್ಯಮದಲ್ಲಿನ ಇತ್ತೀಚಿನ ಬೆಳವಣಿಗೆಗಳು, ಸವಾಲುಗಳು ಮತ್ತು ಅವಕಾಶಗಳ ಕುರಿತು ಚರ್ಚೆಗಳನ್ನು ನಿರೀಕ್ಷಿಸಲಾಗಿದೆ.
ದೇಶದಾದ್ಯಂತ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 7,633 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 11 ಮಂದಿ ಸಾವಿಗೀಡಾಗಿದ್ದು, ದೆಹಲಿ ಮತ್ತು ಕೇರಳದಲ್ಲಿ ತಲಾ ನಾಲ್ವರು, ಹರಿಯಾಣ, ಕರ್ನಾಟಕ ಮತ್ತು ಪಂಜಾಬ್ನಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.
Advertisement