ಕೊಲ್ಕತ್ತಾ: 2024ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಪ್ರತಿಪಕ್ಷಗಳ ಮಹಾಮೈತ್ರಿ ರೂಪಿಸಲು ಯತ್ನಿಸುತ್ತಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಇಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿದ್ದಾರೆ.
ಈ ಸಂದರ್ಭದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ನಾವೆಲ್ಲರೂ ಒಗ್ಗಟ್ಟಿನಿಂದ ಮುಂದುವರೆಯುತ್ತೇವೆ. ನಮ್ಮಲ್ಲಿ ಯಾವುದೇ ವೈಯಕ್ತಿಕ ಪ್ರತಿಷ್ಠೆ ಇಲ್ಲ. ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಲು ಬಯಸುತ್ತೇವೆ ಎಂದರು.
ನಿತೀಶ್ ಕುಮಾರ್ ಅವರಿಗೆ ಒಂದು ಮನವಿ ಮಾಡಿದ್ದೇನೆ. ಜಯಪ್ರಕಾಶ್ ಅವರ ಚಳುವಳಿ ಬಿಹಾರದಿಂದ ಪ್ರಾರಂಭವಾಗಿತ್ತು. ಬಿಹಾರದಲ್ಲಿ ಸರ್ವಪಕ್ಷ ಸಭೆ ನಡೆಸಿದರೆ, ಮುಂದೆ ಎಲ್ಲಿಗೆ ಹೋಗಬೇಕು ಎಂಬುದನ್ನು ನಂತರ ನಿರ್ಧರಿಸಬಹುದು. ಆದರೆ ಎಲ್ಲಕ್ಕಿಂತ ಮೊದಲು ನಾವು ಒಗ್ಗಟ್ಟಾಗಿದ್ದೇವೆ ಎಂಬ ಸಂದೇಶವನ್ನು ನೀಡಬೇಕಾಗಿದೆ. ನನ್ನ ಅಭ್ಯಂತರವಿಲ್ಲ ಎಂದು ಮೊದಲೇ ಹೇಳಿದ್ದೇನೆ. ಬಿಜೆಪಿ ಶೂನ್ಯವಾಗಬೇಕೆಂದು ನಾನು ಬಯಸುತ್ತೇನೆ, ಮಾಧ್ಯಮಗಳ ಬೆಂಬಲ ಮತ್ತು ಸುಳ್ಳುಗಳಿಂದ ಅವರು ದೊಡ್ಡ ಹೀರೋ ಆಗಿದ್ದಾರೆ ವಾಗ್ದಾಳಿ ನಡೆಸಿದರು.
ನಿತೀಶ್ ಕುಮಾರ್ ಮಾತನಾಡಿ, ವಿರೋಧ ಪಕ್ಷಗಳು ಒಟ್ಟಿಗೆ ಕುಳಿತು ಕಾರ್ಯತಂತ್ರ ರೂಪಿಸುವ ಅಗತ್ಯವಿದೆ .ಇದು ತುಂಬಾ ಸಕಾರಾತ್ಮಕ ಚರ್ಚೆಯಾಗಿದೆ ಎಂದು ಹೇಳಿದರು. ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಪಡೆಗಳನ್ನು ಒಗ್ಗೂಡಿಸುವ ಕಾರ್ಯವನ್ನು ಸ್ವತಃ ವಹಿಸಿಕೊಂಡಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಭೇಟಿಯಾಗಲಿದ್ದಾರೆ.
Advertisement