ಅದಾನಿ ವಿವಾದ: ಸಂಸತ್ತಿನ ಕಲಾಪಗಳಲ್ಲಿ ಭಾಗವಹಿಸಲು ಬಹುತೇಕ ವಿರೋಧ ಪಕ್ಷಗಳು ನಿರ್ಧರ

ಅದಾನಿ ಗ್ರೂಪ್ ವಿರುದ್ಧದ ವಂಚನೆ ಆರೋಪಗಳ ಕುರಿತು ಉಭಯ ಸದನಗಳಲ್ಲಿ ಮೂರು ದಿನಗಳ ಕಲಾಪದ ಗದ್ದಲದ ನಂತರ ಸಂಸತ್ತಿನ ಕಲಾಪದಲ್ಲಿ ಭಾಗವಹಿಸಲು ಕಾಂಗ್ರೆಸ್ ಸೇರಿದಂತೆ ಹೆಚ್ಚಿನ ವಿರೋಧ ಪಕ್ಷಗಳು ಮಂಗಳವಾರ ನಿರ್ಧರಿಸಿವೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ತಿಳಿಸಿದ್ದಾರೆ.
ಸಂಸತ್ತು
ಸಂಸತ್ತು

ನವದೆಹಲಿ: ಅದಾನಿ ಗ್ರೂಪ್ ವಿರುದ್ಧದ ವಂಚನೆ ಆರೋಪಗಳ ಕುರಿತು ಉಭಯ ಸದನಗಳಲ್ಲಿ ಮೂರು ದಿನಗಳ ಕಲಾಪದ ಗದ್ದಲದ ನಂತರ ಸಂಸತ್ತಿನ ಕಲಾಪದಲ್ಲಿ ಭಾಗವಹಿಸಲು ಕಾಂಗ್ರೆಸ್ ಸೇರಿದಂತೆ ಹೆಚ್ಚಿನ ವಿರೋಧ ಪಕ್ಷಗಳು ಮಂಗಳವಾರ ನಿರ್ಧರಿಸಿವೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ತಿಳಿಸಿದ್ದಾರೆ.

ಆದಾಗ್ಯೂ, ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಅದಾನಿ ವಿಷಯದ ಬಗ್ಗೆ ಚರ್ಚೆಯಿಲ್ಲದೆ ಸಂಸತ್ತಿನಲ್ಲಿ ಇತರ ವಿಚಾರಗಳ ಚರ್ಚೆ ಬೇಡ ಎಂದು ಹೇಳಿರುವುದಾಗಿ ಮೂಲಗಳು ತಿಳಿಸಿವೆ.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ನಡೆದ 15 ವಿರೋಧ ಪಕ್ಷಗಳ ನಾಯಕರು ಪಾಲ್ಗೊಂಡಿದ್ದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಬಹುಪಾಲು ವಿರೋಧ ಪಕ್ಷಗಳು ಇಂದಿನಿಂದ ಸಂಸತ್ತಿನ ಕಲಾಪದಲ್ಲಿ ಭಾಗವಹಿಸಲು ನಿರ್ಧರಿಸಿವೆ ಮತ್ತು ಅದಾನಿ ವಿವಾದಕ್ಕೆ ಸಂಬಂಧಿಸಿದಂತೆ ಜಂಟಿ ಸಂಸದೀಯ ಸಮಿತಿ ತನಿಖೆ ಅಥವಾ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯ ತನಿಖೆಗಾಗಿ ತಮ್ಮ ಬೇಡಿಕೆಯನ್ನು ಎತ್ತುವುದನ್ನು ಮುಂದುವರಿಸಲು ನಿರ್ಧರಿಸಿವೆ' ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಸಭೆಯ ನಂತರ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್, ಡಿಎಂಕೆ, ಸಮಾಜವಾದಿ ಪಕ್ಷ, ರಾಷ್ಟ್ರೀಯ ಜನತಾ ದಳ, ಜನತಾ ದಳ (ಯುನೈಟೆಡ್), ಎಎಪಿ, ಸಿಪಿಐ-ಎಂ, ಸಿಪಿಐ, ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ, ಶಿವಸೇನೆ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್, ನ್ಯಾಷನಲ್ ಕಾನ್ಫರೆನ್ಸ್, ರೆವಲ್ಯೂಷನರಿ ಸೋಷಿಯಲಿಸ್ಟ್ ಪಾರ್ಟಿ, ಕೇರಳ ಕಾಂಗ್ರೆಸ್ ಮತ್ತು ವಿದುತಲೈ ಚಿರುತೈಗಲ್ ಕಚ್ಚಿ ಪಕ್ಷಗಳ ಮುಖಂಡರು ಸೇರಿದಂತೆ ಹಲವರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಗೌತಮ್ ಅದಾನಿ ನೇತೃತ್ವದ ಗುಂಪಿನ ವಿರುದ್ಧ ಅಮೆರಿಕ ಮೂಲದ ಹಿಂಡೆನ್‌ಬರ್ಗ್ ರಿಸರ್ಚ್ ಬಿಡುಗಡೆ ಮಾಡಿರುವ ವರದಿಯಿಂದಾಗಿ ಅದಾನಿ ಕಂಪನಿಗಳ ಷೇರಿನ ಮೌಲ್ಯ ದಿನದಿಂದ ದಿನಕ್ಕೆ ಕುಸಿಯುತ್ತಾ ಸಾಗಿದೆ.  ಆದರೆ, ಅದಾನಿ ಗ್ರೂಪ್ ಈ ಆರೋಪಗಳನ್ನು ಸುಳ್ಳು ಎಂದು ತಳ್ಳಿಹಾಕಿದೆ.

ಸಾರ್ವಜನಿಕ ವಲಯದ ಎಲ್‌ಐಸಿ ಮತ್ತು ಎಸ್‌ಬಿಐ ಹೂಡಿಕೆ ಮಾಡಿರುವುದರಿಂದ ಸಾಮಾನ್ಯ ಜನರ ಹಣವನ್ನು ಒಳಗೊಂಡಿರುವ ಹಗರಣವಾಗಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಈ ಆರೋಪಗಳ ಕುರಿತು ಈ ಆರೋಪಗಳ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆ ಅಥವಾ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯ ತನಿಖೆಗೆ ಪ್ರತಿಪಕ್ಷಗಳು ಒತ್ತಾಯಿಸುತ್ತಿವೆ.

ಈ ವಿಷಯದ ಬಗ್ಗೆ ಚರ್ಚೆಗೆ ಆಗ್ರಹಿಸಿ ಪ್ರತಿಪಕ್ಷಗಳು ಕಳೆದ ಮೂರು ದಿನಗಳಿಂದ ಸಂಸತ್ತಿನ ಉಭಯ ಸದನಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಕಲಾಪ ಸ್ಥಗಿತಗೊಂಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com