ಲಖನೌ: 2023ರಲ್ಲಿ ನಾಲ್ಕು ರಾಜ್ಯಗಳಿಗೆ ನಡೆಯಲಿರುವ ವಿಧಾನಸಭೆ ಚುನಾವಣೆ ಮತ್ತು ನಂತರ 2024ರ ಲೋಕಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಅಧ್ಯಕ್ಷೆ ಮಾಯಾವತಿ ಘೋಷಿಸಿದ್ದಾರೆ.
ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆದರೆ ಫಲಿತಾಂಶ ಬೇರೆಯಾಗಿರುತ್ತದೆ ಎಂದು ಅವರು ಹೇಳಿದರು.
ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆದಾಗಲೆಲ್ಲಾ ಬಿಎಸ್ಪಿ ಬಲ ಹೆಚ್ಚಿದೆ. ಆದರೆ, ಇವಿಎಂಗಳನ್ನು ಪರಿಚಯಿಸಿದ ನಂತರ ಫಲಿತಾಂಶಗಳು ಅನಿರೀಕ್ಷಿತವಾಗಿವೆ. ಈಗಾಗಲೇ ಹಲವು ದೇಶಗಳಲ್ಲಿ ಇವಿಎಂಗಳನ್ನು ತಿರಸ್ಕರಿಸಲಾಗಿದೆ ಎಂದು ಅವರು ತಿಳಿಸಿದರು.
ತಮ್ಮ 67ನೇ ಜನ್ಮದಿನದಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೂಡಿಕೆ ತರುವ ಹೆಸರಿನಲ್ಲಿ ಬಿಜೆಪಿ ಜನರನ್ನು ಮೂರ್ಖರನ್ನಾಗಿಸುತ್ತಿದೆ. ಜಾಗತಿಕ ಹೂಡಿಕೆದಾರರ ಶೃಂಗಸಭೆ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಹಾಕುವ ತಂತ್ರವಾಗಿದೆ. ಉತ್ತರಾಖಂಡದಲ್ಲಿ ಬಿಜೆಪಿ ಕಾನೂನಿನ ಹೆಸರಿನಲ್ಲಿ ಜನರನ್ನು ಸ್ಥಳಾಂತಾರಿಸುತ್ತಿದೆ ಎಂದು ಆರೋಪಿಸಿದರು.
ಒಬಿಸಿ ಮೀಸಲಾತಿ ವಿಚಾರದಲ್ಲಿ ಬಿಜೆಪಿಯು ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಗಳ ಹಾದಿಯನ್ನೇ ಅನುಸರಿಸುತ್ತಿದೆ ಎಂದು ಮಾಯಾವತಿ ಹೇಳಿದ್ದಾರೆ.
Advertisement