ನವದೆಹಲಿ: ಸಾಕ್ಷ್ಯಚಿತ್ರದ ಪೋಸ್ಟರ್ನಲ್ಲಿ ಕಾಳಿಮಾತೆ ಕೈಯಲ್ಲಿ ಸಿಗರೇಟ್ ಇರುವುದನ್ನು ವಿರೋಧಿಸಿ ಚಲನಚಿತ್ರ ನಿರ್ದೇಶಕಿ ಲೀನಾ ಮಣಿಮೇಕಲೈ ಅವರ ವಿರುದ್ಧ ವಿವಿಧ ರಾಜ್ಯಗಳಲ್ಲಿ ದಾಖಲಾಗಿರುವ ಎಫ್ಐಆರ್ಗಳಿಗೆ ಸಂಬಂಧಿಸಿದಂತೆ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ಸುಪ್ರೀಂ ಕೋರ್ಟ್ ಬಲವಂತದ ಕ್ರಮದಿಂದ ರಕ್ಷಣೆ ನೀಡಿದ್ದರಿಂದ ಲೀನಾ ಮಣಿಮೇಕಲೈ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ತಮ್ಮ ವಿರುದ್ಧದ ಎಫ್ಐಆರ್ಗಳನ್ನು ಕ್ಲಬ್ ಮಾಡಿ ರದ್ದುಗೊಳಿಸುವಂತೆ ಕೋರಿ ನಿರ್ದೇಶಕಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರ ಪೀಠ, ಮಧ್ಯ ಪ್ರದೇಶ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ದಾಖಲಾದ ಎಫ್ಐಆರ್ ಮತ್ತು ಅದೇ ಚಿತ್ರಕ್ಕೆ ಸಂಬಂಧಿಸಿದಂತೆ ದಾಖಲಾದ ಇದೇ ರೀತಿಯ ಎಫ್ಐಆರ್ಗಳಿಂದ ರಕ್ಷಣೆ ನೀಡಿದೆ.
ಎಫ್ಐಆರ್ ದಾಖಲಾದ ರಾಜ್ಯಗಳ ಪ್ರತಿಕ್ರಿಯೆಯನ್ನು ಕೋರಿ ಸುಪ್ರೀಂ ಕೋರ್ಟ್ ಪ್ರತಿವಾದಿಗಳಿಗೆ ನೋಟಿಸ್ ನೀಡಿ, ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 17ಕ್ಕೆ ಮುಂದೂಡಿದೆ.
ಲೀನಾ ಪರ ವಾದ ಮಂಡಿಸಿದ ವಕೀಲೆ ಕಾಮಿನಿ ಜೈಸ್ವಾಲ್ ಅವರು, ನಿರ್ದೇಶಕಿ ವಿರುದ್ಧ ಎಫ್ಐಆರ್ ದಾಖಲಿಸುವುದರ ಜೊತೆಗೆ ಲುಕ್ಔಟ್ ನೋಟಿಸ್ ಸಹ ಹೊರಡಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು. ದೇವಿಯ ಚಿತ್ರಣದ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶ ಲೀನಾಗೆ ಇರಲಿಲ್ಲ ಮತ್ತು ದೇವಿಯನ್ನು ಅಂತರ್ಗತ ಅರ್ಥದಲ್ಲಿ ಚಿತ್ರಿಸುವುದು ಅವರ ಉದ್ದೇಶವಾಗಿತ್ತು ಎಂದು ಅವರು ಹೇಳಿದ್ದಾರೆ.
Advertisement