ನವದೆಹಲಿ: ರಾಜಸ್ಥಾನ ವಿಧಾನಸಭಾ ಚುನಾವಣೆ ಸಿದ್ಧತೆ ಕುರಿತು ಕಾಂಗ್ರೆಸ್ ವರಿಷ್ಠರು ಇಂದು ಸಭೆ ನಡೆಸಿದ್ದಾರೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ನಡುವಿನ ತಿಕ್ಕಾಟದ ನಡುವೆ ಪಕ್ಷದ ರಾಜ್ಯ ಘಟಕದಲ್ಲಿ ಹೆಚ್ಚಿನ ಒಗ್ಗಟ್ಟು ತರುವ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಗುರುವಾರ ರಾಜಸ್ಥಾನದ ಕಾಂಗ್ರೆಸ್ ಮುಖಂಡರೊಂದಿಗೆ ಸಭೆ ನಡೆಸುತ್ತಿದ್ದಾರೆ.
ಸಭೆಯಲ್ಲಿ ಸಚಿನ್ ಪೈಲಟ್ ಮತ್ತು ರಾಜಸ್ಥಾನದ ಹಲವಾರು ಹಿರಿಯ ನಾಯಕರು ಭಾಗವಹಿಸಿದ್ದಾರೆ. ಆದರೆ, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಗೈರು ಹಾಜರಿ ಅನೇಕ ಅನುಮಾನಗಳಿಗೆ ಕಾರಣವಾಗಿದೆ.
ಈ ವರ್ಷದ ಕೊನೆಯಲ್ಲಿ ರಾಜಸ್ಥಾನ ವಿಧಾನಸಭಾ ಚುನಾವಣೆ ನಡೆಯಲಿದೆ. ಕಳೆದ ನಾಲ್ಕೂವರೆ ವರ್ಷಗಳಿಂದ ರಾಜಸ್ಥಾನದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಆದರೆ, ಗೆಹ್ಲೋಟ್ ಮತ್ತು ಪೈಲಟ್ ನಡುವಿನ ಭಿನ್ನಾಭಿಪ್ರಾಯದಿಂದಾಗಿ ರಾಜ್ಯದಲ್ಲಿ ಮತ್ತೊಂದು ಅವಧಿಗೆ ಅಧಿಕಾರವನ್ನು ಪಡೆಯುವುದು ಕಾಂಗ್ರೆಸ್ಗೆ ಕಷ್ಟಕರವಾಗಿದೆ. ಪೈಲಟ್ 2020 ರಲ್ಲಿ ಗೆಹ್ಲೋಟ್ ವಿರುದ್ಧ ಬಂಡಾಯವೆದ್ದ ನಂತರ ಉಪಮುಖ್ಯಮಂತ್ರಿ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಗಳನ್ನು ಕಳೆದುಕೊಂಡರು.
ಗೆಹ್ಲೋಟ್ ಅವರನ್ನು ಪಕ್ಷದ ಮುಖ್ಯಸ್ಥರನ್ನಾಗಿ ಮಾಡಿ ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಎಐಸಿಸಿ ಯೋಜಿಸಿತ್ತು. ಅದಕ್ಕಾಗಿ ಕಳೆದ ವರ್ಷ ನಡೆದಿದ್ದ ಪಕ್ಷದ ಶಾಸಕಾಂಗ ಸಭೆಯನ್ನು ಮುಖ್ಯಮಂತ್ರಿ ಪರ ಬೆಂಬಲಿಗರು ವಿಫಲಗೊಳಿಸಿದ್ದರು.
Advertisement