ಶಿಮ್ಲಾ(ಹಿಮಾಚಲ ಪ್ರದೇಶ): ಕಳೆದ ಕೆಲ ದಿನಗಳಿಂದ ಹಿಮಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ಅವ್ಯಾಹತ ಮಳೆಗೆ ಮುಕ್ತಿ ಸಿಕ್ಕಿಲ್ಲ. ಇಂದು ಮಂಗಳವಾರ ಭಾರತೀಯ ಹವಾಮಾನ ಇಲಾಖೆ ಪರ್ವತ ರಾಜ್ಯ ಹಿಮಾಚಲ ಪ್ರದೇಶದಲ್ಲಿ ಮುಂದಿನ 24 ಗಂಟೆಗಳವರೆಗೆ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಿಸಿದೆ.
ಹಿಮಾಚಲ ಪ್ರದೇಶದ ಸೋಲನ್, ಶಿಮ್ಲಾ, ಸಿರ್ಮೌರ್, ಕುಲ್ಲು, ಮಂಡಿ, ಕಿನ್ನೌರ್, ಲಹೌಲ್ ಮೊದಲಾದ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಉನಾ, ಹಮಿರ್ಪುರ್, ಕಾಂಗ್ರ, ಚಂಬ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಂಡಿ, ಕಿನ್ನೌರ್, ಲಹೌಲ್, ಸ್ಪಿಟಿ ಜಿಲ್ಲೆಗಳಲ್ಲಿ ಪ್ರವಾಹ ವಿಕೋಪದ ಮುನ್ನೆಚ್ಚರಿಕೆ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆಯ ಹಿರಿಯ ವಿಜ್ಞಾನಿ ಸಂದೀಪ್ ಕುಮಾರ್ ಶರ್ಮ ತಿಳಿಸಿದ್ದಾರೆ.
ಪ್ರವಾಸಿಗರು ಹಲವು ಭಾಗಗಳಲ್ಲಿ ಸಿಕ್ಕಿ ಹಾಕಿಕೊಂಡಿದ್ದು ಇದುವರೆಗೆ ಸುಮಾರು 3 ಸಾವಿರ ಕೋಟಿ ರೂಪಾಯಿಗಳಿಂದ 4 ಸಾವಿರ ಕೋಟಿ ರೂಪಾಯಿಗಳಷ್ಟು ನಷ್ಟವುಂಟಾಗಬಹುದು ಎಂದು ಅಂದಾಜಿಸಲಾಗಿದೆ.
ಭಾರೀ ಮಳೆಗೆ ಹಿಮಾಚಲ ಪ್ರದೇಶದಲ್ಲಿ ಕಂಡ ಕಂಡಲ್ಲಿ ಭೂಕುಸಿತವಾಗಿದೆ. ರಸ್ತೆಗಳು ಕೊಚ್ಚಿ ಹೋಗುತ್ತಿದ್ದು, ಇಲ್ಲಿಯವರೆಗೆ 13 ಕಡೆ ಭಾರೀ ಭೂಕುಸಿತ ಉಂಟಾಗಿದೆ. 22 ಜನ ಪ್ರಾಣ ಕಳೆದುಕೊಂಡಿದ್ದಾರೆ. ಸಾವಿರಾರು ಜನರನ್ನು ಸುರಕ್ಷಿತ ಪ್ರದೇಶಕ್ಕೆ ರವಾನಿಸಲಾಗಿದೆ.
ಹಿಮಾಚಲ ಪ್ರದೇಶದಲ್ಲಿ ಕಳೆದ 50 ವರ್ಷಗಳಲ್ಲಿ ಇಷ್ಟೊಂದು ಮಳೆ ಸುರಿದಿರಲಿಲ್ಲ ಎಂದು ಮುಖ್ಯಮಂತ್ರಿ ಸುಖ್ ವಿಂದರ್ ಸಿಂಗ್ ಸುಖು ಹೇಳಿದ್ದಾರೆ. ನಿನ್ನೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುಖ್ಯಮಂತ್ರಿಗಳ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿ ಅಲ್ಲಿನ ಪರಿಸ್ಥಿತಿ ತಿಳಿದುಕೊಂಡು ಸಂಪೂರ್ಣ ನೆರವು ನೀಡುವ ಭರವಸೆ ನೀಡಿದ್ದಾರೆ.
Advertisement