ಉತ್ತರ ಭಾರತದಲ್ಲಿ ಮುಂದುವರೆದ ಮಳೆ ಅಬ್ಬರ: ಉಕ್ಕಿ ಹರಿಯುತ್ತಿದೆ ಯಮುನಾ ನದಿ; ದೆಹಲಿಯಲ್ಲಿ ಪ್ರವಾಹ, ರಸ್ತೆಗಳು ಜಲಾವೃತ

ಉತ್ತರ ಭಾರತದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಯಮುನಾ ನದಿ ಉಕ್ಕಿ ಹರಿಯುತ್ತಿದ್ದು ದೆಹಲಿಯ ಸಾಕಷ್ಟು ಪ್ರದೇಶಗಳು ಪ್ರವಾಹಕ್ಕೆ ತುತ್ತಾಗಿದ್ದು, ರಸ್ತೆಗಳು ಜಲಾವೃತವಾಗಿವೆ.
ದೆಹಲಿಯಲ್ಲಿ  ಪ್ರವಾಹ
ದೆಹಲಿಯಲ್ಲಿ ಪ್ರವಾಹ
Updated on

ನವದೆಹಲಿ: ಉತ್ತರ ಭಾರತದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಯಮುನಾ ನದಿ ಉಕ್ಕಿ ಹರಿಯುತ್ತಿದ್ದು ದೆಹಲಿಯ ಸಾಕಷ್ಟು ಪ್ರದೇಶಗಳು ಪ್ರವಾಹಕ್ಕೆ ತುತ್ತಾಗಿದ್ದು, ರಸ್ತೆಗಳು ಜಲಾವೃತವಾಗಿವೆ.

ಉಕ್ಕಿ ಹರಿಯುತ್ತಿರುವ ಯಮುನಾ ನದಿ ಹರಿವು ಗುರುವಾರ ಬೆಳಗ್ಗೆ ಗರಿಷ್ಠ ಮಟ್ಟಕ್ಕೆ ಏರಿದ್ದು, ತೀರ ಸಮೀಪದ ಪ್ರದೇಶಗಳಲ್ಲಿನ ರಸ್ತೆಗಳು, ಸಾರ್ವಜನಿಕ ಹಾಗೂ ಖಾಸಗಿ ಮೂಲಸೌಕರ್ಯಗಳು ಜಲಾವೃತಗೊಂಡಿವೆ. ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನೀರಿನ ಪ್ರಮಾಣ ಹಳೇ ರೈಲು ಸೇತುವೆ ಬಳಿ ಬುಧವಾರ ರಾತ್ರಿ 208 ಮೀಟರ್‌ಗೆ ತಲುಪಿತ್ತು. ಆ ಪ್ರಮಾಣ ಇಂದು ಬೆಳಗ್ಗೆ 8ರ ಹೊತ್ತಿಗೆ 208.48 ಮೀಟರ್‌ಗೆ ಏರಿದೆ. ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. 'ಇದು ಮಿತಿ ಮೀರಿದ ಪರಿಸ್ಥಿತಿ' ಎಂದು ಕೇಂದ್ರ ಜಲ ಆಯೋಗ (ಸಿಡಬ್ಲ್ಯುಸಿ) ಆತಂಕ ವ್ಯಕ್ತಪಡಿಸಿದೆ.

ಸಿವಿಲ್ ಲೈನ್ಸ್ ಪ್ರದೇಶದ ರಿಂಗ್ ರೋಡ್ ಜಲಾವೃತಗೊಂಡಿದ್ದು, ಮಜ್ನು ಕಾ ತಿಲಾವನ್ನು ಕಾಶ್ಮೀರಿ ಗೇಟ್ ಐಎಸ್‌ಬಿಟಿಗೆ ಸಂಪರ್ಕಿಸುವ ಮಾರ್ಗವನ್ನು ಪ್ರವಾಹದಿಂದಾಗಿ ಮುಚ್ಚಲಾಗಿದೆ. ಈ ಸ್ಥಳವು ಮುಖ್ಯಮಂತ್ರಿ ಕೇಜ್ರಿವಾಲ್ ನಿವಾಸ ಮತ್ತು ದೆಹಲಿ ವಿಧಾನಸಭೆಯಿಂದ ಕೇವಲ 500 ಮೀಟರ್ ದೂರದಲ್ಲಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು, ಪರಿಸ್ಥಿತಿ ನಿಯಂತ್ರಣ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ತುರ್ತಾಗಿ ಮಧ್ಯಪ್ರವೇಶಿಸಬೇಕು ಎಂದು ಬುಧವಾರ ಆಗ್ರಹಿಸಿದ್ದಾರೆ. ಜನರು ಕಾನೂನುಬಾಹಿರವಾಗಿ ಗುಂಪುಗೂಡುವುದನ್ನು ತಡೆಯಲು ನಗರ ಪೊಲೀಸರು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆಯ ದೃಷ್ಟಿಯಿಂದ ಸೆಕ್ಷನ್‌ 144 (ನಿಷೇಧಾಜ್ಞೆ) ಜಾರಿಗೊಳಿಸಬೇಕು ಎಂದಿದ್ದಾರೆ.

‘ದೆಹಲಿಯಲ್ಲಿ ಎರಡು ದಿನದಿಂದ ಮಳೆಯಾಗಿಲ್ಲ. ಹರಿಯಾಣದ ಹಥಿನೀಕುಂಡ್‌ ಬ್ಯಾರೇಜ್‌ನಿಂದ ಅಸಹಜವಾಗಿ ಹೆಚ್ಚು ನೀರನ್ನು ಬಿಡುಗಡೆ ಮಾಡುತ್ತಿರುವುದರಿಂದ ಯಮುನಾ ನದಿಯ ಮಟ್ಟ ಹೆಚ್ಚಿದೆ. ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ನೀರಿನ ಮಟ್ಟ ಹೆಚ್ಚಾಗದಂತೆ ನೋಡಿಕೊಳ್ಳಬೇಕು’ ಎಂದು ಕೇಜ್ರಿವಾಲ್ ಒತ್ತಾಯಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಕೇಜ್ರಿವಾಲ್‌ ಪತ್ರ ಬರೆದಿದ್ದಾರೆ. ಕೆಲವೇ ವಾರಗಳಲ್ಲಿ ದೆಹಲಿಯಲ್ಲಿ ಜಿ20 ಸಮ್ಮೇಳನ ನಡೆಯಲಿದೆ ಎಂಬುದನ್ನು ಉಲ್ಲೇಖಿಸಿರುವ ಅವರು, ಹರಿಯಾಣದ ಹಥಿನೀಕುಂಡ್‌ ಬ್ಯಾರೇಜ್‌ನಿಂದ ನಿಧಾನವಾಗಿ ನೀರು ಹರಿಸುವಂತೆ ಸೂಚಿಸಬೇಕು ಎಂದು ಮನವಿ ಮಾಡಿದ್ದಾರೆ.

ಹಾಗೆಯೇ, 'ರಾಷ್ಟ್ರ ರಾಜಧಾನಿಯಲ್ಲಿ ಪ್ರವಾಹ ಉಂಟಾಗಿರುವುದು ವಿಶ್ವಕ್ಕೆ ಉತ್ತಮ ಸಂದೇಶವಲ್ಲ. ನಾವೆಲ್ಲರೂ ಒಂದಾಗಿ ಈ ಪರಿಸ್ಥಿತಿಯಿಂದ ದೆಹಲಿ ಜನರನ್ನು ಕಾಪಾಡಬೇಕಿದೆ' ಎಂದು ಹೇಳಿದ್ದಾರೆ.

ಲೆಫ್ಟಿನೆಂಟ್‌ ಗೌವರ್ನರ್‌ ವಿ.ಕೆ.ಸಕ್ಸೇನಾ ಅವರೂ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com