ನವದೆಹಲಿ: ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಸಂಪೂರ್ಣ ಜಾತ್ಯತೀತ ಎಂಬ ಹೇಳಿಕೆ ವಿರುದ್ಧ ರಾಹುಲ್ ಗಾಂಧಿ ಅವರನ್ನು ಟೀಕಿಸುತ್ತಿರುವ ಬಿಜೆಪಿಗೆ ಕಾಂಗ್ರೆಸ್ ಶುಕ್ರವಾರ ತಿರುಗೇಟು ನೀಡಿದೆ. ಅಡ್ವಾಣಿ ಕೂಡಾ ಮೊಹಮ್ಮದ್ ಅಲಿ ಜಿನ್ನಾ ಅವರನ್ನು ಹೊಗಳಿದ್ದು ನೆನಪಿದೆಯೇ? ಎಂದು ಬಿಜೆಪಿಯನ್ನು ಪ್ರಶ್ನಿಸಿದೆ.
ಬ್ರಿಟಿಷರ ಆಳ್ವಿಕೆಯಲ್ಲಿ ಬಂಗಾಳದಲ್ಲಿ ಸರ್ಕಾರ ರಚಿಸಲು ಹಿಂದೂ ಮಹಾಸಭಾದ ಅಧ್ಯಕ್ಷ ಶ್ಯಾಮ ಪ್ರಸಾದ್ ಮುಖರ್ಜಿ ಅವರು ಜಿನ್ನಾ ಅವರ ಮುಸ್ಲಿಂ ಲೀಗ್ನೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದರು ಎಂಬುದನ್ನು ಬಿಜೆಪಿಗೆ ನೆನಪಿಸಲು ಬಯಸುವುದಾಗಿ ಕಾಂಗ್ರೆಸ್ ಹೇಳಿದೆ.
ವಾಷಿಂಗ್ಟನ್ನ ನ್ಯಾಷನಲ್ ಪ್ರೆಸ್ ಕ್ಲಬ್ನಲ್ಲಿ ಮಾಧ್ಯಮ ಸಂವಾದದಲ್ಲಿ, ಜಾತ್ಯತೀತತೆಯ ಬಗ್ಗೆ ಮಾತನಾಡುವಾಗ ಕೇರಳದಲ್ಲಿ ಐಯುಎಂಎಲ್ನೊಂದಿಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ಮುಸ್ಲಿಂ ಲೀಗ್ ಸಂಪೂರ್ಣ ಜಾತ್ಯತೀತ ಪಕ್ಷ ಎಂದು ಹೇಳಿದ್ದರು. ಈ ಹೇಳಿಕೆ ವಿರುದ್ಧ ಬಿಜೆಪಿ ತೀವ್ರ ಟೀಕಾ ಪ್ರಹಾರ ನಡೆಸುತ್ತಿದೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಮಹಾತ್ಮ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿಯನ್ನು ಪ್ರಾರಂಭಿಸಿದಾಗ ಬ್ರಿಟಿಷರ ಆಳ್ವಿಕೆಯಲ್ಲಿ ಬಂಗಾಳದಲ್ಲಿ ಸರ್ಕಾರ ರಚಿಸಲು ಹಿಂದೂ ಮಹಾಸಭಾದ ಅಧ್ಯಕ್ಷ ಶ್ಯಾಮ ಪ್ರಸಾದ್ ಮುಖರ್ಜಿ ಅವರು ಜಿನ್ನಾ ಅವರ ಮುಸ್ಲಿಂ ಲೀಗ್ನೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದರು ಎಂದು ಹೇಳಿದ್ದಾರೆ. ಇದೇ ವಿಚಾರದಲ್ಲಿ ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ಅವರನ್ನು ಸಹ ಜೈರಾಮ್ ರಮೇಶ್ ತರಾಟೆಗೆ ತೆಗೆದುಕೊಂಡಿದ್ದಾರೆ.
ಬಿಜೆಪಿ ಮತ್ತು ಆರ್ ಎಸ್ ಎಸ್ ಗೆ ಪಾಕಿಸ್ತಾನದ ರಾಜಕೀಯ ಮತ್ತು ಜಿನ್ನಾ ಅವರ ಮುಸ್ಲಿಂ ಲೀಗ್ ಬಗ್ಗೆ ಹೆಚ್ಚಿನ ಜ್ಞಾನವಿದೆ. ಬಿಜೆಪಿ ನಾಯಕರಿಗೆ ಈ ದೇಶದ ರಾಜಕೀಯದ ಜ್ಞಾನವಿದೆ ಎಂದು ಕಾಂಗ್ರೆಸ್ನ ಮಾಧ್ಯಮ ವಿಭಾಗದ ಮುಖ್ಯಸ್ಥ ಪವನ್ ಖೇರಾ ವಾಗ್ದಾಳಿ ನಡೆಸಿದ್ದಾರೆ.
Advertisement