ಬ್ರಿಜ್ ಭೂಷಣ್ ಅಯೋಧ್ಯೆ ರ್ಯಾಲಿಗೆ ಅನುಮತಿ ನಿರಾಕರಿಸಿದ ಯುಪಿ ಸರ್ಕಾರ
ಲಖನೌ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಹಾಗೂ ಭಾರತೀಯ ಕುಸ್ತಿ ಒಕ್ಕೂಟ(ಡಬ್ಲ್ಯುಎಫ್ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಯೋಜಿಸಿದ್ದ ಅಯೋಧ್ಯೆ ರ್ಯಾಲಿಗೆ ಅನುಮತಿ ನೀಡಲು ಉತ್ತರ ಪ್ರದೇಶ ಸರ್ಕಾರ ನಿರಾಕರಿಸಿದೆ.
ಈ ಹಿನ್ನೆಲೆಯಲ್ಲಿ ಆರೋಪಿ ಬ್ರಿಜ್ ಭೂಷಣ್ ಅವರು ಅಯೋಧ್ಯೆಯಲ್ಲಿ ತನ್ನ ಬೆಂಬಲಕ್ಕಾಗಿ ಆಯೋಜಿಸಿದ್ದ ರ್ಯಾಲಿಯನ್ನು ಕೆಲವು ದಿನಗಳ ಕಾಲ ಮುಂದೂಡಿದ್ದಾರೆ.
ಅಯೋಧ್ಯೆಯಲ್ಲಿ "ಸಾಧುಗಳ ಆಶೀರ್ವಾದದೊಂದಿಗೆ" ಸೋಮವಾರ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುವುದಾಗಿ ಬ್ರಿಜ್ ಭೂಷಣ್ ಸಿಂಗ್ ಈ ಹಿಂದೆ ಘೋಷಿಸಿದ್ದರು.
ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ದೆಹಲಿ ಪೊಲೀಸರು ದಾಖಲಿಸಿರುವ ಎಫ್ಐಆರ್ ನ ವಿವರಗಳು ಬಹಿರಂಗವಾದ ಬೆನ್ನಲ್ಲೇ ಬಿಜೆಪಿ ಸಂಸದ ಅಯೋಧ್ಯ ರ್ಯಾಲಿ ರದ್ದುಗೊಳಿಸಿದ ಹೇಳಿಕೆ ನೀಡಿದ್ದಾರೆ.
ಇದೇ ವೇಳೆ ತಮ್ಮ ಹೇಳಿಕೆಯನ್ನು ಪುನರುಚ್ಚರಿಸಿದ ಬ್ರಿಜ್ ಭೂಷಣ್, ನಾನು ಯಾವುದೇ ತಪ್ಪು ಮಾಡಿಲ್ಲ. ರಾಜಕೀಯ ವಿರೋಧಿಗಳು ನನ್ನ ವಿರುದ್ಧ "ಸುಳ್ಳು ಆರೋಪ" ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.