ನೋಯ್ಡಾ: ಸಿಗರೇಟ್ ವಿಚಾರವಾಗಿ ವಿದ್ಯಾರ್ಥಿಗಳು, ಭದ್ರತಾ ಸಿಬ್ಬಂದಿ ನಡುವೆ ಘರ್ಷಣೆ, 33 ವಿದ್ಯಾರ್ಥಿಗಳ ಬಂಧನ

ಗ್ರೇಟರ್ ನೋಯ್ಡಾದ ಗೌತಮ್ ಬುದ್ಧ ವಿಶ್ವವಿದ್ಯಾನಿಲಯದಲ್ಲಿ ಸಿಗರೇಟ್ ವಿಚಾರವಾಗಿ ವಿದ್ಯಾರ್ಥಿಗಳು ಮತ್ತು ಖಾಸಗಿ ಭದ್ರತಾ ಸಿಬ್ಬಂದಿಗಳ ನಡುವೆ ಘರ್ಷಣೆ ಸಂಭವಿಸಿದ್ದು 33 ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ವಿದ್ಯಾರ್ಥಿಗಳು-ಭದ್ರತಾ ಸಿಬ್ಬಂದಿ ನಡುವೆ ಘರ್ಷಣೆ
ವಿದ್ಯಾರ್ಥಿಗಳು-ಭದ್ರತಾ ಸಿಬ್ಬಂದಿ ನಡುವೆ ಘರ್ಷಣೆ

ನೋಯ್ಡಾ: ಗ್ರೇಟರ್ ನೋಯ್ಡಾದ ಗೌತಮ್ ಬುದ್ಧ ವಿಶ್ವವಿದ್ಯಾನಿಲಯದಲ್ಲಿ ಸಿಗರೇಟ್ ವಿಚಾರವಾಗಿ ವಿದ್ಯಾರ್ಥಿಗಳು ಮತ್ತು ಖಾಸಗಿ ಭದ್ರತಾ ಸಿಬ್ಬಂದಿಗಳ ನಡುವೆ ಘರ್ಷಣೆ ಸಂಭವಿಸಿದ್ದು 33 ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಮುನ್ಶಿ ಪ್ರೇಮಚಂದ್ ಹಾಸ್ಟೆಲ್‌ನಲ್ಲಿ ಕೆಲವು ವಿದ್ಯಾರ್ಥಿಗಳು ಸಿಗರೇಟ್ ಸೇದುವುದನ್ನು ಭದ್ರತಾ ಸಿಬ್ಬಂದಿ ತಡೆಯಲೆತ್ನಿಸಿದ ಬಳಿಕ ಈ ಘರ್ಷಣೆ ಸಂಭವಿಸಿದ್ದು, ಮಾತಿನ ಚಕಮಕಿ ಬಳಿಕ ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಒಂದು ಹಂತದಲ್ಲಿ ವಿದ್ಯಾರ್ಥಿಗಳು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗಿದ್ದು, ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು 33 ಮಂದಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ.

"ಭಾನುವಾರ ರಾತ್ರಿ 10.30 ರ ಸುಮಾರಿಗೆ ವಿದ್ಯಾರ್ಥಿಗಳ ಗುಂಪೊಂದು ಆವರಣದಲ್ಲಿ ಸಿಗರೇಟ್ ಸೇದುತ್ತಾ ಇತ್ತು. ಇದನ್ನು ಗಮನಿಸಿದ ಭದ್ರತಾ ಸಿಬ್ಬಂದಿ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವೇಳೆ ಎರಡು ಕಡೆಯವರ ನಡುವೆ ವಾಗ್ವಾದ ನಡೆದು ಘರ್ಷಣೆಗೆ ಕಾರಣವಾಯಿತು, ನಂತರ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸ್ ತಂಡವು 33 ಜನರನ್ನು ವಶಕ್ಕೆ ತೆಗೆದುಕೊಂಡಿತು. ಪೊಲೀಸರು ಎರಡೂ ಕಡೆಯಿಂದ ದೂರುಗಳನ್ನು ಸ್ವೀಕರಿಸಿದ್ದಾರೆ ಮತ್ತು ವಿಷಯದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ವಕ್ತಾರರು ಹೇಳಿದ್ದಾರೆ.

ಇಕೋಟೆಕ್ 1 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಪ್ರಕರಣವನ್ನು ಹಿರಿಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.. ಘಟನೆ ಸಂಬಂಧ ಮತ್ತಷ್ಟು ಜನರನ್ನು ಕಸ್ಟಡಿಗೆ ತೆಗೆದುಕೊಳ್ಳಬಹುದು ಎಂದು ಹೇಳಿದ್ದಾರೆ.

ಇನ್ನು ಭದ್ರತಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಘರ್ಷಣೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕೆಲ ವಿದ್ಯಾರ್ಥಿಗಳು ಕೋಲು ಬಡಿಗೆಗಳನ್ನು ಹಿಡಿದು ಹಾಸ್ಟೆಲ್‌ನ ಹೊರಗೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳು ಮತ್ತು ಕಾರುಗಳನ್ನು ಒಡೆದು ಹಾಕುತ್ತಿರುವುದು ಕಂಡುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com