ನವದೆಹಲಿ: ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಶನಿವಾರ ಸಿಬಿಐ ವಿಚಾರಣೆಗೆ ಗೈರು ಹಾಜರಾಗಿರುವ ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು, ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ವಿಚಾರಣೆಗೆ ಹೊಸ ದಿನಾಂಕ ನೀಡುವಂತೆ ಕೋರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿಂದೆ ಮಾರ್ಚ್ 4 ರಂದು ಯಾದವ್ ಅವರನ್ನು ವಿಚಾರಣೆಗೆ ಕರೆಯಲಾಗಿತ್ತು. ಆದರೆ ಅಂದು ಅವರು ಸಿಬಿಐ ಅಧಿಕಾರಿಗಳ ಮುಂದೆ ಹಾಜರಾಗಿರಲಿಲ್ಲ. ಇಂದು ಮತ್ತೆ ವಿಚಾರಣೆಗೆ ಕರೆಯಲಾಗಿತ್ತು. ಆದರೆ ಇಂದು ಸಹ ಗೈರು ಆಗಿದ್ದಾರೆ.
ತೇಜಸ್ವಿ ಯಾದವ್ ಅವರು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಮತ್ತೆ ಹೊಸ ದಿನಾಂಕವನ್ನು ಕೋರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ಇತ್ತೀಚೆಗೆ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಮತ್ತು ಅವರ ಪತ್ನಿ ರಾಬ್ರಿ ದೇವಿ ಅವರನ್ನು ದೆಹಲಿ ಮತ್ತು ಪಾಟ್ನಾದಲ್ಲಿ ವಿಚಾರಣೆಗೆ ಒಳಪಡಿಸಿತ್ತು.
ಲಾಲು ಪ್ರಸಾದ್ ಯಾದವ್ ಅವರು 2004 ಮತ್ತು 2009 ರ ಅವಧಿಯಲ್ಲಿ ರೈಲ್ವೆ ಸಚಿವರಾಗಿದ್ದಾಗ ತಮ್ಮ ಕುಟುಂಬಕ್ಕೆ ಜಮೀನನ್ನು ಉಡುಗೊರೆಯಾಗಿ ನೀಡಿದವರು ಅಥವಾ ಅಗ್ಗದ ದರದಲ್ಲಿ ಮಾರಾಟ ಮಾಡಿದ್ದ ಕುಟುಂಬಗಳಿಗೆ ರೈಲ್ವೆಯಲ್ಲಿ ಉದ್ಯೋಗ ನೀಡಿದ್ದರು ಎಂಬ ಆರೋಪವಿದೆ.
ಲಾಲು ಪ್ರಸಾದ್, ಅವರ ಪತ್ನಿ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಮತ್ತು ಇತರ 14 ಜನರ ವಿರುದ್ಧ ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದ್ದು, ಮಾರ್ಚ್ 15 ರಂದು ವಿಚಾರಣೆಗೆ ಬರುವಂತೆ ಎಲ್ಲಾ ಆರೋಪಿಗಳಿಗೆ ಸಮನ್ಸ್ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement