ಕೋಲ್ಕತ್ತಾ: ಕಾಂಗ್ರೆಸ್ ಜೊತೆಗಿನ ಭಿನ್ನಾಭಿಪ್ರಾಯಗಳ ನಡುವೆಯೇ ಸಮಾಜವಾದಿ ಪಕ್ಷದ(ಎಸ್ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಶುಕ್ರವಾರ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಅವರ ಕಾಲಿಘಾಟ್ ನಿವಾಸದಲ್ಲಿ ಭೇಟಿ ಮಾಡಿದರು.
ಉಭಯ ನಾಯಕರು ಬಿಜೆಪಿ ವಿರೋಧಿ, ಕಾಂಗ್ರೆಸೇತರ ವಿರೋಧ ಪಕ್ಷಗಳ ಹೊಸ ರಂಗ ರಚಿಸಲು ಉತ್ಸುಕರಾಗಿದ್ದಾರೆ ಎಂದು ನಂಬಲಾಗಿದೆ.
ಅಖಿಲೇಶ್ ಯಾದವ್ ಅವರು ತಮ್ಮ ಪಕ್ಷದ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಲು ಕೋಲ್ಕತ್ತಾಗೆ ಆಗಮಿಸಿದ್ದಾರೆ.
ಬಿಜೆಪಿ ಮತ್ತು ಕಾಂಗ್ರೆಸ್ ಎರಡರಿಂದಲೂ ಸಮಾನ ಅಂತರ ಕಾಯ್ದುಕೊಳ್ಳಲು ಮುಂದಾಗಿರುವ ಸಮಾನ ಮನಸ್ಕ ಪ್ರಾದೇಶಿಕ ಪಕ್ಷಗಳ ವೇದಿಕೆ ರೂಪಿಸುವ ಕುರಿತು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಅಖಿಲೇಶ್ ಯಾದವ್ ಅವರು ಮಮತಾ ಬ್ಯಾನ್ಯರ್ಜಿ ಅವರನ್ನು ಭೇಟಿ ಮಾಡಿರುವುದು ಮಹತ್ವ ಪಡೆದುಕೊಂಡಿದೆ.
ಬಿಜು ಜನತಾ ದಳದ ಮುಖ್ಯಸ್ಥರಾದ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮುಂದಿನ ವಾರ ಭೇಟಿ ಮಾಡುತ್ತಿದ್ದು, ಪಟ್ನಾಯಕ್ ಕೂಡ ಹೊಸ ರಂಗದಲ್ಲಿ ಸೇರಿಕೊಳ್ಳುವ ಸಾಧ್ಯತೆ ಇದೆ.
ಕಾಂಗ್ರೆಸ್ ಸರಿಯಾದ ಸಮಯದಲ್ಲಿ ಸರಿಯಾದ ಕೆಲಸವನ್ನು ಮಾಡುತ್ತಿಲ್ಲ ಮತ್ತು ಅದು ವಿರೋಧ ಪಕ್ಷಗಳ 'ಬಿಗ್ ಬಾಸ್' ಆಗಲು ಪ್ರಯತ್ನಿಸುತ್ತಿದೆ ಎಂದು ಟಿಎಂಸಿ ಸಂಸದ ಸುದೀಪ್ ಬಂಡೋಪಾಧ್ಯಾಯ ಹೇಳಿದ್ದಾರೆ.
Advertisement