ನವದೆಹಲಿ: ಇತ್ತೀಚಿಗೆ ರಾಹುಲ್ ಗಾಂಧಿ ಕುರಿತು ಮಾತನಾಡಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ಇಡಿ, ಸಿಬಿಐ ನಂತಹ ತನಿಖಾ ಸಂಸ್ಥೆಗಳಿಂದ ಬಚಾವ್ ಆಗಲು ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನಂತೆ ಮಮತಾ ಬ್ಯಾನರ್ಜಿ ಮಾತನಾಡಿದ್ದಾರೆ. ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷದ ವರ್ಚಸ್ಸು ಕೆಡಿಸಲು ಪ್ರಧಾನಿಯೊಂದಿಗೆ ಮಮತಾ ಬ್ಯಾನರ್ಜಿ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದೆ.
ಎಎನ್ ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಂತೆ ಮಮತಾ ಬ್ಯಾನರ್ಜಿ ಮಾತನಾಡುತ್ತಾರೆ. ಇಡಿ- ಸಿಬಿಐ ದಾಳಿಯಿಂದ ರಕ್ಷಿಸಿಕೊಳ್ಳಲು ಬಯಸಿರುವ ಮಮತಾ, ಕಾಂಗ್ರೆಸ್ ವಿರುದ್ಧ ನಿಂತಿದ್ದಾರೆ. ಇದರಿಂದ ಪ್ರಧಾನಿ ನರೇಂದ್ರ ಮೋದಿ ಅವರು ಸಂತೋಷಗೊಳ್ಳಲಿದ್ದಾರೆ ಎಂದರು.
ಇತ್ತೀಚಿಗೆ ಒಂದು ವೇಳೆ ವಿಪಕ್ಷಗಳು ರಾಹುಲ್ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸಿದರೆ ಎಂಬ ಪ್ರಶ್ನೆ ಕುರಿತು ಉತ್ತರಿಸಿದ ಮಮತಾ ಬ್ಯಾನರ್ಜಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಯಾರೂ ಟಾರ್ಗೆಟ್ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದರು ಎನ್ನಲಾಗಿದೆ.
Advertisement