ಅದಾನಿ ವಿವಾದ, ರಾಹುಲ್ ಗಾಂಧಿ ಅನರ್ಹತೆ: ವಿಪಕ್ಷಗಳಿಂದ ಒಗ್ಗಟ್ಟು ಪ್ರದರ್ಶನ, ಕಪ್ಪು ಬಟ್ಟೆ ಧರಿಸಿ ಪ್ರತಿಭಟನಾ ಮೆರವಣಿಗೆ

ಅದಾನಿ ವಿವಾದ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಅನರ್ಹಗೊಳಿಸಿದ ಕೇಂದ್ರದ ವಿರುದ್ಧ ಖಂಡನೆ ವ್ಯಕ್ತಪಡಿಸಿರುವ ವಿರೋಧ ಪಕ್ಷಗಳು, ಕಪ್ಪು ಬಟ್ಟೆ ಧರಿಸಿ ಸಂಸತ್ತಿನ ಸಂಕೀರ್ಣದಿಂದ ರಾಷ್ಟ್ರ ರಾಜಧಾನಿಯ ವಿಜಯ್ ಚೌಕ್'ನತ್ತ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದಾರೆ.
ಪ್ರತಿಭಟನಾನಿರತ ವಿರೋಧ ಪಕ್ಷಗಳು.
ಪ್ರತಿಭಟನಾನಿರತ ವಿರೋಧ ಪಕ್ಷಗಳು.

ನವದೆಹಲಿ: ಅದಾನಿ ವಿವಾದ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಅನರ್ಹಗೊಳಿಸಿದ ಕೇಂದ್ರದ ವಿರುದ್ಧ ಖಂಡನೆ ವ್ಯಕ್ತಪಡಿಸಿರುವ ವಿರೋಧ ಪಕ್ಷಗಳು, ಕಪ್ಪು ಬಟ್ಟೆ ಧರಿಸಿ ಸಂಸತ್ತಿನ ಸಂಕೀರ್ಣದಿಂದ ರಾಷ್ಟ್ರ ರಾಜಧಾನಿಯ ವಿಜಯ್ ಚೌಕ್'ನತ್ತ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದಾರೆ.

ಪ್ರತಿಪಕ್ಷದ ಸಂಸದರು ಸಂಸತ್ತಿನ ಸಂಕೀರ್ಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದು, ಅದಾನಿ ಪ್ರಕರಣವನ್ನು ಜಂಟಿ ಸಂಸದೀಯ ಸಮಿತಿ (ಜೆಪಿಸಿ)ಗೆ ಒಪ್ಪಿಸುವಂತೆ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಬಿಆರ್‌ಎಸ್, ಸಮಾಜವಾದಿ ಪಕ್ಷ ಸೇರಿದಂತೆ ಸಮಾನ ಮನಸ್ಕ ವಿಪಕ್ಷಗಳ ಸಂಸದರು ಭಾಗಿಯಾಗಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಸೇರಿದಂತೆ ಹಲವು ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ಪಾದಯಾತ್ರೆ ವೇಳೆ ಖರ್ಗೆ ಅವರು ಇತರ ಸಂಸದರ ಕೈ ಹಿಡಿದು ಹೆಜ್ಜೆ ಹಾಕುತ್ತಿರುವುದು ಕಂಡು ಬಂದಿದೆ. ಈ ಮೂಲಕ ವಿಪಕ್ಷಗಳು ಒಗ್ಗಟ್ಟನ್ನು ಪ್ರದರ್ಶಿಸಿದ್ದಾರೆ.

ಇದರ ಜೊತೆಗೆ ಸತ್ಯಮೇವ ಜಯತೆ ಎಂಬ ಬ್ಯಾನರ್'ನ್ನೂ ಕೂಡ ಹಿಡಿದು ಪ್ರತಿಭಟನೆ ನಡೆಸಲಾಗುತ್ತಿದೆ. ಇತರ ವಿರೋಧ ಪಕ್ಷದ ಸಂಸದರು ಭಿತ್ತಿಪತ್ರಗಳನ್ನು ಹಿಡಿದುಕೊಂಡಿದ್ದಾರೆ. ಸಂಸದರು ಕೇಂದ್ರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅದಾನಿ ಜೊತೆ ಸೇರಿಸಿದ್ದು, ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.

ಪ್ರತಿಭಟನೆ ವೇಳೆ ಮಾತನಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು, ಕೆಲವು ವರ್ಷಗಳಲ್ಲಿ ಅದಾನಿ ಸಂಪತ್ತು ಇಷ್ಟೊಂದು ಮಟ್ಟದಲ್ಲಿ ಹೆಚ್ಚಳವಾಗಿದ್ದು ಹೇಗೆ? ಮೋದಿಯವರೇ ವಿದೇಶಕ್ಕೆ ಹೋಗುವಾಗ ಉದ್ಯಮಿಯನ್ನು ಎಷ್ಟು ಬಾರಿ ಜೊತೆಗೆ ಕರೆದುಕೊಂಡು ಹೋಗಿದ್ದಿರಿ? ಅದಾನಿ ವಿಚಾರ ಸಂಬಂಧ ವಿಪಕ್ಷಗಳು ಎತ್ತುತ್ತಿರುವ ಪ್ರಶ್ನೆಗಳಿಗೆ ಮೋದಿಯವರು ಉತ್ತರ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

"ನಮಗೆ ಅದಾನಿ ವಿಚಾರದಲ್ಲಿ ಜೆಪಿಸಿ ಬೇಕು. ಸರ್ಕಾರ ಇದನ್ನು ಏಕೆ ಒಪ್ಪುತ್ತಿಲ್ಲ? ಜೆಪಿಸಿ ತನಿಖೆಗೆ ಏಕೆ ಹೆದರುತ್ತಿದ್ದೀರಿ... ಅಂದರೆ 'ದಾಲ್ ಮೇ ಕುಚ್ ಕಾಲಾ ಹೈ' (ಏನೋ ತಪ್ಪಾಗಿದೆ)" ಎಂದು ತಿಳಿಸಿದ್ದಾರೆ.

ರಾಹುಲ್ ಗಾಂಧಿಯನ್ನು ದೋಷಿ ಎಂದು ಸಾಬೀತುಪಡಿಸಲು ಬಯಸುತ್ತಿದ್ದೀರಿ. ಹೀಗಾಗಿಯೇ ಗುಜರಾತ್'ಗೆ ಪ್ರಕರಣವನ್ನು ವರ್ಗಾಯಿಸಲಾಯಿತು. ಮೋದಿಯವರು ಪ್ರಜಾಪ್ರಭುತ್ವನ್ನು ಮುಕ್ತಾಯಗೊಳಿಸುತ್ತಿದ್ದು, ಇದು ಪ್ರಜಾಪ್ರಭುತ್ವದ ಕರಾಳ ದಿನವಾಗಿದೆ. ಹೀಗಾಗಿಯೇ ಪ್ರತಿಪಕ್ಷಗಳ ಸಂಸದರು ಕಪ್ಪುಬಟ್ಟೆಯನ್ನು ಧರಿಸಿದ್ದಾರೆಂದು ಹೇಳಿದರು.

ಇದಕ್ಕೂ ಮುನ್ನ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕೊಠಡಿಯಲ್ಲಿ ಡಿಎಂಕೆ, ಸಮಾಜವಾದಿ ಪಕ್ಷ, ಜೆಡಿ (ಯು), ಬಿಆರ್‌ಎಸ್, ಸಿಪಿಐ (ಎಂ), ಸಿಬಿಐ, ಆರ್‌ಜೆಡಿ, ಎನ್‌ಸಿಪಿ, ಐಯುಎಂಎಲ್, ಎಂಡಿಎಂಕೆ, ಕೇರಳ ಕಾಂಗ್ರೆಸ್, ಟಿಎಂಸಿ, ಆರ್‌ಎಸ್‌ಪಿ, ಎಎಪಿ, ಎನ್‌ಪಿ ಮತ್ತು ಶಿವಸೇನೆ (ಯುಬಿಟಿ) ಪಕ್ಷಗಳ ನಾಯಕರು ಭೇಟಿಯಾಗಿ ಮಾತುಕತೆ ನಡೆಸಿದರು.

ಇದಕ್ಕೂ ಮುನ್ನ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕೊಠಡಿಯಲ್ಲಿ ಡಿಎಂಕೆ, ಸಮಾಜವಾದಿ ಪಕ್ಷ, ಜೆಡಿ (ಯು), ಬಿಆರ್‌ಎಸ್, ಸಿಪಿಐ (ಎಂ), ಸಿಬಿಐ, ಆರ್‌ಜೆಡಿ, ಎನ್‌ಸಿಪಿ, ಐಯುಎಂಎಲ್, ಎಂಡಿಎಂಕೆ, ಕೇರಳ ಕಾಂಗ್ರೆಸ್, ಟಿಎಂಸಿ, ಆರ್‌ಎಸ್‌ಪಿ, ಎಎಪಿ, ಎನ್‌ಪಿ ಮತ್ತು ಶಿವಸೇನೆ (ಯುಬಿಟಿ) ಪಕ್ಷಗಳ ನಾಯಕರು ಭೇಟಿಯಾಗಿ ಮಾತುಕತೆ ನಡೆಸಿದರು.

ಭೇಟಿ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಿರುವುದು ಮತ್ತು ಅದಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು ಎಂದು ತಿಳಿದುಬಂದಿದೆ.

ಬಳಿಕ ನಾಯಕರು ಕಪ್ಪು ಬಟ್ಟೆ ಧರಿಸಿ ಸಂಸತ್ತಿಗೆ ಆಗಮಿಸಿದರು. ಬಳಿಕ ಉಭಯ ಸದನಗಳಲ್ಲಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಲೋಕಸಭೆಯ ಕಲಾಪ ಆರಂಭವಾಗುತ್ತಲೇ ಕಪ್ಪು ಸ್ಕಾರ್ಫ್‌ಗಳನ್ನು ಧರಿಸಿದ ಕಾಂಗ್ರೆಸ್ ಸದಸ್ಯರು ಬಾವಿಗೆ ನುಗ್ಗಿದರು. ಕೆಲ ನಾಯಕರು, ಸ್ಕಾರ್ಫ್‌ಗಳೊಂದಿಗೆ ಆದೇಶ ಪತ್ರಗಳನ್ನು ಸಭಾಪತಿಗಳ ಕುರ್ಚಿಯತ್ತ ಎಸೆದರು.

ತೀವ್ರ ಗದ್ದಲ ಎದುರಾದ ಹಿನ್ನೆಲೆಯಲ್ಲಿ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು, ಕಲಾಪವನ್ನು ಸಂಜೆ 4 ಗಂಟೆಗೆ ಮುಂದೂಡಿದರು.

ಕಲಾಪ ಮುಂದೂಡಿಕೆಯಾದ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಸಂಸತ್ತಿನ ಸಂಕೀರ್ಣದ ಬಳಿ ಸೇರಿ ಪ್ರತಿಭಟನೆಯನ್ನು ಆರಂಭಿಸಿದರು.

2019ರ ಲೋಕಸಭಾ ಚುನಾವಣೆಯ ವೇಳೆ ನರೇಂದ್ರ ಮೋದಿಯವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಸೂರತ್ ಕೋರ್ಟ್  2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಶಿಕ್ಷೆ ವಿಧಿಸಿದ ಬೆನ್ನಲ್ಲೇ ರಾಹುಲ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು ಸೂರತ್ ಕೋರ್ಟ್ 30 ದಿನಗಳ ಜಾಮೀನು ಮಂಜೂರು ಮಾಡಿದೆ.

ಕಳೆದ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಓರ್ವ ಕಳ್ಳ ಎಂದು ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಇವರೆಲ್ಲರ ಸರ್‌ನೇಮ್ ಒಂದೇ ಆಗಿದ್ದು, ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹೇಳಿದ್ದರು.

ಈ ಹೇಳಿಕೆಯನ್ನು ಆಧಾರಿಸಿ ಬಿಜೆಪಿ ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್ ಮಾನಹಾನಿ ದೂರು ದಾಖಲಿಸಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೂರತ್ ಕೋರ್ಟ್ ರಾಹುಲ್ ದೋಷಿ ಎಂದು ತೀರ್ಪು ನೀಡಿ 2 ವರ್ಷ ಜೈಲು ಶಿಕ್ಷೆಯನ್ನು ಪ್ರಕಟಿಸಿತ್ತು.

ನಪ್ರತಿನಿಧಿಗಳ ಕಾಯ್ದೆಯಂತೆ ಶಾಸಕರು/ ಸಂಸದರು ಎರಡು ನಿದರ್ಶನಗಳಲ್ಲಿ ತಮ್ಮ ಸ್ಥಾನದಿಂದ ಅನರ್ಹರಾಗಬಹುದು. ಮೊದಲು ಸೆಕ್ಷನ್ 153A (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಅಪರಾಧ ಮತ್ತು ಪೂರ್ವಾಗ್ರಹ ಪೀಡಿತ ಕೃತ್ಯಗಳನ್ನು ಮಾಡುವುದು) ಅಥವಾ ಸೆಕ್ಷನ್ 171E (ಲಂಚ ತೆಗೆದುಕೊಳ್ಳುವುದು)ನಂತಹ ಪ್ರಕರಣ ಅಥವಾ ಸೆಕ್ಷನ್ 171F (ಚುನಾವಣೆಯಲ್ಲಿ ಅನಗತ್ಯ ಪ್ರಭಾವದ) ಅಪರಾಧ ಪ್ರಕರಣಗಳಲ್ಲಿ ಅಪರಾಧಿ ಎಂದು ಸಾಬೀತಾದರೆ ತಮ್ಮ ಸ್ಥಾನವನ್ನು ಸಂಸದರು ಕಳೆದುಕೊಳ್ಳಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com