ಕರ್ನಾಟಕದಲ್ಲಿ ಕಾಂಗ್ರೆಸ್ ಬಂದರೆ ಗಲಭೆಗಳಾಗುತ್ತವೆ ಹೇಳಿಕೆ: ಅಮಿತ್ ಶಾ ವಿರುದ್ಧ ಬಿಹಾರದಲ್ಲಿ ಪ್ರಕರಣ ದಾಖಲು

ತಮ್ಮ ಹೇಳಿಕೆಗಳ ಮೂಲಕ ಕರ್ನಾಟಕದಲ್ಲಿ ಕೋಮು ಉದ್ವಿಗ್ನತೆಯನ್ನು ಪ್ರಚೋದಿಸುತ್ತಿದ್ದಾರೆ ಎಂದು ಆರೋಪಿಸಿ ಬಿಹಾರದ ದರ್ಭಾಂಗಾ ಜಿಲ್ಲೆಯ ಕಾಂಗ್ರೆಸ್ ನಾಯಕಿ ಪ್ರತಿಭಾ ಸಿಂಗ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. 
ಅಮಿತ್ ಶಾ
ಅಮಿತ್ ಶಾ

ಪಾಟ್ನಾ: ತಮ್ಮ ಹೇಳಿಕೆಗಳ ಮೂಲಕ ಕರ್ನಾಟಕದಲ್ಲಿ ಕೋಮು ಉದ್ವಿಗ್ನತೆಯನ್ನು ಪ್ರಚೋದಿಸುತ್ತಿದ್ದಾರೆ ಎಂದು ಆರೋಪಿಸಿ ಬಿಹಾರದ ದರ್ಭಾಂಗಾ ಜಿಲ್ಲೆಯ ಕಾಂಗ್ರೆಸ್ ನಾಯಕಿ ಪ್ರತಿಭಾ ಸಿಂಗ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. 

ಏಪ್ರಿಲ್ 25 ರಂದು ಕರ್ನಾಟಕದ ಬೆಳಗಾವಿಯಲ್ಲಿ ನಡೆದ ರ‍್ಯಾಲಿಯಲ್ಲಿ ಶಾ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಗಲಭೆಗಳು ನಡೆಯುತ್ತವೆ ಎಂದು ಹೇಳಿದ್ದಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ದಾಖಲಿಸಲಾಗಿದೆ.

'ಅಮಿತ್ ಶಾ ತಮ್ಮ ಭಾಷಣದ ಮೂಲಕ ಕರ್ನಾಟಕದಲ್ಲಿ ದ್ವೇಷ ಮತ್ತು ಕೋಮು ಉದ್ವಿಗ್ನತೆಯನ್ನು ಹರಡಲು ಪ್ರಯತ್ನಿಸುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಗಲಭೆಗಳು ನಡೆಯುತ್ತವೆ ಎಂದಿದ್ದಾರೆ. ಅದೊಂದು ಪ್ರಚೋದನಕಾರಿ ಭಾಷಣ. ಆದ್ದರಿಂದ ನಾವು ಅವರ ವಿರುದ್ಧ ಐಪಿಸಿ ಸೆಕ್ಷನ್ 153, 505 (2) ಮತ್ತು 506 ರ ಅಡಿಯಲ್ಲಿ (ಸಂಖ್ಯೆ 490/23) ಪ್ರಕರಣವನ್ನು ದಾಖಲಿಸಿದ್ದೇವೆ' ಎಂದು ಪ್ರತಿಭಾ ಸಿಂಗ್ ಹೇಳಿದರು.

ರಾಜ್ಯದಲ್ಲಿ ಕೋಮು ಸೌಹಾರ್ದತೆಯನ್ನು ಕದಡಲು ಅಮಿತ್ ಶಾ ಅವರು ಉದ್ದೇಶಪೂರ್ವಕವಾಗಿ ಕರ್ನಾಟಕದಲ್ಲಿ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಆರೋಪಿಸಿದ್ದಾರೆ.

ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಸೂರತ್ ಮತ್ತು ಪಾಟ್ನಾ ಜಿಲ್ಲಾ ನ್ಯಾಯಾಲಯಗಳಲ್ಲಿ ಪ್ರತ್ಯೇಕ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗಳ ಹಿನ್ನೆಲೆಯಲ್ಲಿ ಸಿಂಗ್ ಅವರ ಈ ಕ್ರಮವನ್ನು ಬಿಜೆಪಿಗೆ ಪ್ರತಿಕ್ರಿಯೆಯಾಗಿ ಕಾಣಬಹುದು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com