ನವದೆಹಲಿ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಪ್ರಾಧಿಕಾರದ (ಡಬ್ಲ್ಯುಎಫ್ಐ) ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ಎಲ್ಲಾ ಬೇಡಿಕೆ ಈಡೇರಿಸಲಾಗಿದೆ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಶುಕ್ರವಾರ ಹೇಳಿದ್ದಾರೆ.
ಬ್ರಿಜ್ ಭೂಷಣ್ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ಪೂರ್ಣಗೊಳಿಸಲು ಅವಕಾಶ ನೀಡಬೇಕು ಎಂದು ಕೇಂದ್ರ ಸಚಿವರು ಮನವಿ ಮಾಡಿದ್ದಾರೆ.
"ಅಲ್ಲಿ ಧರಣಿ ನಡೆಸುತ್ತಿರುವ ಎಲ್ಲಾ ಕ್ರೀಡಾ ಪಟುಗಳಿಗೆ ಇದು ನನ್ನ ವಿನಂತಿಯಾಗಿದೆ. ಅವರ ಬೇಡಿಕೆಗಳು ಏನೇ ಇರಲಿ, ಅವುಗಳನ್ನು ಈಡೇರಿಸಲಾಗಿದೆ. ನ್ಯಾಯಾಲಯವೂ ತನ್ನ ನಿರ್ದೇಶನಗಳನ್ನು ನೀಡಿದೆ. ದೆಹಲಿ ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸಲು ಅವಕಾಶ ನೀಡಬೇಕು" ಎಂದು ಠಾಕೂರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
"ದೆಹಲಿ ಪೊಲೀಸರು 'ದೂದ್ ಕಾ ದೂಧ್ ಪಾನಿ ಕಾ ಪಾನಿ' ಮಾಡುತ್ತಾರೆ ಮತ್ತು ಕಾನೂನಿನ ಪ್ರಕಾರ ಕಠಿಣ ಕ್ರಮ ತೆಗೆದುಕೊಳ್ಳುತ್ತಾರೆ" ಎಂದು ಅವರು ಹೇಳಿದರು.
ಡಬ್ಲ್ಯುಎಫ್ಐ ಮುಖ್ಯಸ್ಥ ಬ್ರಿಜ್ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪಗಳ ಕುರಿತು ತನಿಖೆಗಾಗಿ ರಚಿಸಲಾದ ಸಮಿತಿಯ ವರದಿಯನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸಬೇಕು ಎಂದು ಒತ್ತಾಯಿಸಿ ಹಲವಾರು ಕುಸ್ತಿಪಟುಗಳು ಏಪ್ರಿಲ್ 23 ರಿಂದ ರಾಷ್ಟ್ರ ರಾಜಧಾನಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
Advertisement