ಮಲಪ್ಪುರಂ: ಕೇರಳದ ಮಲಪ್ಪುರಂನಲ್ಲಿ ಸಂಭವಿಸಿದ ದೋಣಿ ದುರಂತದಲ್ಲಿ 21 ಮಂದಿ ಸಾವನ್ನಪ್ಪಿದ್ದು ಮೃತರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.
ತಾನೂರ್ ಬೀಚ್ ಬಳಿ ಈ ಘಟನೆ ನಡೆದಿದ್ದು ಹೌಸ್ ಬೋಟ್ ನಲ್ಲಿ ಸುಮಾರು 40 ಮಂದಿ ಇದ್ದರು ಎಂದು ಹೇಳಲಾಗುತ್ತಿದೆ. ಸದ್ಯ ಸಮುದ್ರ ತೀರದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು 20 ಮಂದಿಯನ್ನು ರಕ್ಷಿಸಲಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ತಂಡ ಮತ್ತು ಅನೇಕ ದೊಡ್ಡ ಅಧಿಕಾರಿಗಳು ಹಾಜರಿದ್ದಾರೆ. ಈ ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಅಪಘಾತದ ಮಾಹಿತಿ ಬಂದ ತಕ್ಷಣ ರಾಜ್ಯ ಸರ್ಕಾರದ ಸಚಿವ ವಿ.ಅಬ್ದುರಹ್ಮಾನ್ ಕೂಡ ಸ್ಥಳದಲ್ಲಿದ್ದಾರೆ. ದುರಂತದಲ್ಲಿ ಮಕ್ಕಳು, ಮಹಿಳೆಯರು ಮತ್ತು ಪುರುಷರು ಸೇರಿದಂತೆ 21 ಮಂದಿ ಸಾವನ್ನಪ್ಪಿದ್ದಾರೆ.
ಸಿಎಂ ಸೂಚನೆ
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ದೋಣಿ ಅಪಘಾತದಲ್ಲಿ ಸಾವಿಗೀಡಾದವರಿಗೆ ಸಂತಾಪ ಸೂಚಿಸಿದ್ದಾರೆ. ತುರ್ತು ರಕ್ಷಣಾ ಕಾರ್ಯಾಚರಣೆ ನಡೆಸುವಂತೆ ಮಲಪ್ಪುರಂ ಜಿಲ್ಲಾಧಿಕಾರಿಗೆ ಸೂಚಿಸಿದರು. ಅಗ್ನಿಶಾಮಕ ಮತ್ತು ಪೊಲೀಸ್ ಘಟಕಗಳು, ಕಂದಾಯ ಮತ್ತು ಆರೋಗ್ಯ ಇಲಾಖೆಗಳ ಅಧಿಕಾರಿಗಳು ಮತ್ತು ಜಿಲ್ಲೆಯ ತಾನೂರ್ ಮತ್ತು ತಿರೂರು ಪ್ರದೇಶದ ಸ್ಥಳೀಯ ಜನರು ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಸಿಎಂ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸಚಿವರಾದ ಅಬ್ದುರ್ರಹಿಮಾನ್ ಮತ್ತು ರಿಯಾಸ್ ರಕ್ಷಣಾ ಕಾರ್ಯಾಚರಣೆಗೆ ಸಹಕರಿಸಲಿದ್ದಾರೆ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಸಂತಾಪ
ಅಪಘಾತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. PMNRF ನಿಂದ ಮೃತರ ಸಂಬಂಧಿಕರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರವನ್ನು ಪ್ರಧಾನ ಮಂತ್ರಿ ಘೋಷಿಸಿದ್ದಾರೆ.
Advertisement