
ಸಾಂದರ್ಭಿಕ ಚಿತ್ರ
ಮುಂಬೈ: ಒಳಚರಂಡಿ ದುರಸ್ತಿ ಮಾಡುವ ವೇಳೆ ವಿಷಾನಿಲ ಸೇವಿಸಿ 5 ಕಾರ್ಮಿಕರ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಮಹಾರಾಷ್ಟ್ರದ ಪರಭಾನಿ ಜಿಲ್ಲೆಯ ಸೋನೆಪತ್ ತೆಹಸಿಲ್ನ ಭಾವುಚಾ ಗ್ರಾಮದಲ್ಲಿ ಸೆಪ್ಟಿಕ್ ಟ್ಯಾಂಕ್ ಸ್ವಚ್ಛ ಮಾಡುತ್ತಿದ್ದ ವೇಳೆ ಐವರು ಕಾರ್ಮಿಕರು ಸಾವಿಗೀಡಾಗಿದ್ದಾರೆ. ಗುರುವಾರ ರಾತ್ರಿ ಈ ಘಟನೆ ನಡೆದಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ.
ಮೃತರನ್ನು ಫಿರೋಜ್ ಶೇಖ್, ನವೇದ್ ಶೇಖ್, ಜುನೈದ್ ಶೇಖ್ ಮತ್ತು ಸಾದಿಕ್ ಶೇಖ್ ಎಂದು ಗುರುತಿಸಲಾಗಿದೆ. ಗಾಯಾಳು ಸಾಬೀರ್ ಶೇಖ್ ಅವರನ್ನು ಜಿಲ್ಲೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂತಾಪ ಸೂಚಿಸಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂದೆ, ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಘೋಷಿಸಿದ್ದಾರೆ.
ಪರಭಾನಿ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ಪ್ರಾರಂಭಿಸಿದ್ದಾರೆ. ವಿಷ ವಾಯು ಉಸಿರಾಟದಿಂದ ಸಾವಿಗೀಡಾಗಿರಬಹುದು ಎಂದು ಅಂದಾಜಿಸಲಾಗಿದೆ. ಪ್ರಸ್ತುತ ಮೃತ ಕಾರ್ಮಿಕರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.