ದಾಂತೇವಾಡ: ಛತ್ತೀಸಗಢದ ದಾಂತೇವಾಡ ಜಿಲ್ಲೆಯಲ್ಲಿ ಕಳೆದ ತಿಂಗಳು ನಡೆದ ಸ್ಫೋಟದಲ್ಲಿ 10 ಪೊಲೀಸ್ ಸಿಬ್ಬಂದಿ ಮತ್ತು ನಾಗರಿಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕ ಸೇರಿದಂತೆ ಮತ್ತೆ ಎಂಟು ನಕ್ಸಲರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಈ ಬೆಳವಣಿಗೆಯೊಂದಿಗೆ, ಪ್ರಕರಣದಲ್ಲಿ ಬಂಧಿತರಾಗಿರುವ ಒಟ್ಟು ನಕ್ಸಲರ ಸಂಖ್ಯೆ 17ಕ್ಕೆ ಏರಿದೆ ಎಂದು ಅವರು ಹೇಳಿದರು.
ಈ ಎಂಟು ನಕ್ಸಲರ ಪೈಕಿ ಐವರನ್ನು ಬುಧವಾರ (ಮೇ 17) ಬಂಧಿಸಲಾಗಿದ್ದು, ಅಪ್ರಾಪ್ತ ಬಾಲಕ ಸೇರಿದಂತೆ ಇತರ ಮೂವರನ್ನು ಶುಕ್ರವಾರ ಅರನ್ಪುರ ಪೊಲೀಸ್ ಠಾಣಾ ಪ್ರದೇಶ ಮತ್ತು ಪಕ್ಕದ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶುಕ್ರವಾರ ಸಂಜೆ ಪೊಲೀಸರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಮಾಸಾ ಕವಾಸಿ, ಕೋಸ ಮಾಂಡವಿ, ಅರ್ಜುನ್ ಕುಂಜಮ್, ದೇವಾ ಮದ್ವಿ ಮತ್ತು ಗಂಗಾ ಮದ್ವಿ ಎಂಬ ಪೆಡ್ಕಾ ಗ್ರಾಮದ ಎಲ್ಲಾ ಸ್ಥಳೀಯರನ್ನು ಬುಧವಾರ ಬಂಧಿಸಿದ ನಂತರ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರನ್ನು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು.
ಪೊಲೀಸ್ ಕಸ್ಟಡಿ ಮುಗಿದ ಬಳಿಕ ಏಳು ಮಂದಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅಪ್ರಾಪ್ತನನ್ನು ಬಾಲಾಪರಾಧಿಗೃಹಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿ ಹೇಳಿದರು.
ಏಪ್ರಿಲ್ 26 ರಂದು ಛತ್ತೀಸ್ಗಢದ ದಾಂತೇವಾಡ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಾಹನಗಳ ಬೆಂಗಾವಲು ಪಡೆಯ ಭಾಗವಾಗಿದ್ದ ಮಲ್ಟಿ ಯುಟಿಲಿಟಿ ವೆಹಿಕಲ್ (ಎಂಯುವಿ) ಅನ್ನು ನಕ್ಸಲರು ಸ್ಫೋಟಿಸಿದ್ದರು. ಘಟನೆಯಲ್ಲಿ ಹತ್ತು ಜಿಲ್ಲಾ ಮೀಸಲು ಗಾರ್ಡ್ (ಡಿಆರ್ಜಿ) ಸಿಬ್ಬಂದಿ ಮತ್ತು ಚಾಲಕ ಸಾವಿಗೀಡಾಗಿದ್ದರು.
ಇದಕ್ಕೂ ಮೊದಲು, ದಾಳಿಗೆ ಸಂಬಂಧಿಸಿದಂತೆ ಮೂವರು ಅಪ್ರಾಪ್ತರು ಸೇರಿದಂತೆ ಒಂಬತ್ತು ನಕ್ಸಲರನ್ನು ಬಂಧಿಸಲಾಯಿತು ಮತ್ತು ಅವರ ವಿಚಾರಣೆಯು ಹೆಚ್ಚಿನ ಬಂಧನಕ್ಕೆ ಪೊಲೀಸರಿಗೆ ಸಹಾಯ ಮಾಡಿತು ಎಂದು ಅವರು ಹೇಳಿದರು.
Advertisement